ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡುತಿದೆ
ಪಾಶ್ಚಿಮಾತ್ಯರು ಜನವರಿ 1ನ್ನು ಹೊಸವರ್ಷವಾಗಿ ಆಚರಿಸಿದರೆ, ಭಾರತೀಯರು ಯುಗಾದಿಯನ್ನು ಹೊಸವರ್ಷವನ್ನಾಗಿ ಆಚರಿಸಿಕೊಂಡು ಬರುತ್ತಿದ್ದಾರೆ. ವಿಕ್ರಮ ಶಕೆಯ ಮೊದಲ ದಿನವಾದ ಕಾರ್ತಿಕ ಶುದ್ಧ ಪಾಡ್ಯವನ್ನು ಉತ್ತರ ಭಾರತದಲ್ಲಿ ಯುಗಾದಿ ಹಬ್ಬವನ್ನಾಗಿ ಆಚರಿಸಿಕೊಂಡು ಬರುತ್ತಿರುವುದನ್ನು ನಾವು ಕಾಣಬಹುದು. ಯುಗಾದಿ ಆಚರಣೆಯಲ್ಲಿ ಮೂರು ರೀತಿಯ ಲೆಕ್ಕಾಚಾರ ಜ್ಯೋತಿಷ್ಯ ಶಾಸ್ತ್ರದಲ್ಲಿದ್ದು, ಅವುಗಳೆಂದರೆ, ಬಾರ್ಹಸ್ಪತ್ಯಮಾನ, ಚಾಂದ್ರಮಾನ, ಸೌರಮಾನ.
ಭಾರತದಲ್ಲಿ ಯುಗಾದಿ ಆಚರಣೆಯೂ ಕೂಡ ವಿಭಿನ್ನವಾಗಿದೆ. ಉತ್ತರ ಭಾರತದಲ್ಲಿ ಬಾರ್ಹಸ್ಪತ್ಯಮಾನದಲ್ಲಿ ಯುಗಾದಿಯನ್ನು ಆಚರಿಸಿದರೆ, ದಕ್ಷಿಣ ಭಾರತದ ರಾಜ್ಯಗಳಲ್ಲಿ ಚಾಂದ್ರಮಾನ ಹಾಗೂ ಸೌರಮಾನ ಯುಗಾದಿಯನ್ನು ಆಚರಿಸುವ ಪದ್ಧತಿಯಿದೆ. ಈ ಎರಡು ಯುಗಾದಿ ಆಚರಣೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ ಒಂದು ಚಂದ್ರ ಮತ್ತೊಂದು ಸೂರ್ಯನನ್ನು ಅವಲಂಬಿಸಿರುವುದು. ಚಾಂದ್ರಮಾನ ಯುಗಾದಿ ಕುರಿತಂತೆ ಹೇಳುವುದಾದರೆ, ಚಂದ್ರನ ಚಲನೆಯನ್ನು ಆಧರಿಸಿ ಸಾಮಾನ್ಯವಾಗಿ ಅಮಾವಾಸ್ಯೆ-ಹುಣ್ಣಿಮೆಯನ್ನು ಮತ್ತು ಇವುಗಳ ಆಧಾರದಲ್ಲಿ ತಿಂಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಈ ಪದ್ಧತಿಯೇ ಚಾಂದ್ರಮಾನ. ಈ ಪದ್ಧತಿಯಲ್ಲಿ ಚಂದ್ರನ ಚಲನೆಯಲ್ಲಿ ವ್ಯತ್ಯಾಸವಾಗುವುದರಿಂದ ಚಾಂದ್ರಮಾನ ಯುಗಾದಿ ಕೂಡ ನಿರ್ದಿಷ್ಟ ದಿನಾಂಕದಲ್ಲಿ ಬಾರದಿರುವುದನ್ನು ನಾವು ಕಾಣಬಹುದು.