ಅಂಬೇಡ್ಕರ್ ಪ್ರತಿಮೆ ಸ್ಥಳಾಂತರಕ್ಕೆ ದಲಿತರ ವಿರೋಧ
ಹದಿನೈದು ದಿನಗಳೊಳಗೆ ಅಂಬೇಡ್ಕರ್ ಪುತ್ಥಳಿ ಸ್ಥಳಾಂತರಿಸುವಂತೆ ಹೈಕೋರ್ಟ್ನ ವಿಭಾಗೀಯ ಪೀಠ ನೀಡಿರುವ ಆದೇಶ(ಡಿ.12)ಅವೈಜ್ಞಾನಿಕವಾಗಿದೆ. ಇದರ ಹಿಂದೆ ಮೆಟ್ರೊ ಅಭಿವೃದ್ಧಿ ನಿಗಮದ ಸ್ವಹಿತ ಹಾಗೂ ವಾಣಿಜ್ಯ ಉದ್ದೇಶಗಳಿದ್ದು, ಯಾವುದೇ ಸಾರ್ವಜನಿಕ ಉದ್ದೇಶವಿಲ್ಲ ಎಂದು ದಲಿತ ಸಂಘಟನೆಗಳು ಆಕ್ಷೇಪಿಸಿವೆ.
ವಿಭಾಗೀಯ ಪೀಠ ನೀಡಿರುವ ಪುತ್ಥಳಿ ಸ್ಥಳಾಂತರ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ದಲಿತ ಮುಖಂಡ ಮಾವಳ್ಳಿ ಶಂಕರ್ ನೇತೃತ್ವದಲ್ಲಿ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ದಸಂಸ ರಾಜ್ಯ ಸಂಚಾಲಕ ಅಣ್ಣಯ್ಯ ತಿಳಿಸಿದ್ದಾರೆ.
ಮೆಜೆಸ್ಟಿಕ್ನಿಂದ ಅಂಬೇಡ್ಕರ್ ವೀದಿಯವರೆಗೆ ಕೈಗೊಳ್ಳಲಾಗಿರುವ ನಮ್ಮ ಮೆಟ್ರೋ ಸುರಂಗ ಮಾರ್ಗದ ಕಾಮಗಾರಿಗೆ ತೀವ್ರ ಅಡಚಣೆಯಾಗಿರುವ ಅಂಬೇಡ್ಕರ್ ಪ್ರತಿಮೆಯನ್ನು ಸ್ಥಳಾಂತರಿಸಿ ತ್ವರಿತಗತಿಯಲ್ಲಿ ಕಾಮಗಾರಿ ಕೈಗೊಳ್ಳುವಂತೆ ಬಿಎಂಆರ್ಸಿಎಲ್ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಎ.ವಿ. ಅಮರ್ನಾಥ್ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.
ಆದರೆ, ದಲಿತ ಪರ ಸಂಘಟನೆಗಳ ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರಕರಣ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದ್ದು, ಮೆಟ್ರೋ ಕಾಮಗಾರಿ ವಿಳಂಬದಿಂದ ಉಂಟಾಗುವ ನಷ್ಟದ ಬಗ್ಗೆ ಮಾಹಿತಿ ಪಡೆದ ನ್ಯಾ. ವಿಜೆ ಸೇನ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಮೇಲ್ಕಂಡ ತೀರ್ಪು ನೀಡಿತ್ತು.
ಅಂಬೇಡ್ಕರ್ ವೀದಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಪಂಡಿತ್ ಜವಾಹರ ಲಾಲ್ ನೆಹರೂ ಹಾಗೂ ಸ್ವಾತಂತ್ರ್ಯಯೋಧ ಸುಭಾಷ್ ಚಂದ್ರಬೋಸ್ ಅವರ ಪ್ರತಿಮೆಗಳನ್ನು ಪ್ರತಿಷ್ಠಾಪಿಸಲಾಗಿದೆ. ಅಂಬೇಡ್ಕರ್ ಅವರ್ ಪ್ರತಿಮೆ ಜೊತೆಗೆ ಇತರೆ ಪ್ರತಿಮೆಗಳ ಸ್ಥಳಾಂತರವೂ ಅನಿವಾರ್ಯವಾಗಿತ್ತು.
ಅಂಬೇಡ್ಕರ್ ವೀದಿಯಲ್ಲಿ ನಮ್ಮ ಮೆಟ್ರೋ ಸುರಂಗ ಮಾರ್ಗ ಕಾಮಗಾರಿಗೆ ಅಡಚಣೆ ಉಂಟಾದ ಹಿನ್ನೆಲೆಯಲ್ಲಿ ನೆಹರು ಹಾಗೂ ಸುಭಾಷ್ ಚಂದ್ರಬೋಸ್ ಪ್ರತಿಮೆಗಳನ್ನು ಸ್ಥಳಾಂತರಿಸಲಾಗಿದೆ. ಆದರೆ, ಅಂಬೇಡ್ಕರ್ ಪ್ರತಿಮೆ ಸ್ಥಳಾಂತರಕ್ಕೆ ದಲಿತ ಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಮೌನವಹಿಸಿತ್ತು.
ಪ್ರತಿಮೆ ಸ್ಥಳಾಂತರ ವಿಳಂಬದಿಂದ ಮೆಟ್ರೋ ಕಾಮಗಾರಿಗೆ ಅಡಚಣೆಯಾಗುತ್ತಿದೆ. ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಇದರಿಂದಾಗಿ ಸಾರ್ವಜನಿಕರ ಕೋಟ್ಯಂತರ ರೂಪಾಯಿ ತೆರಿಗೆ ಹಣ ಪೋಲಾಗುತ್ತಿದೆ. ಜತೆಗೆ, ಈ ಮಾರ್ಗದಲ್ಲಿ ಸುಗಮ ಸಂಚಾರಕ್ಕೂ ಅಡಚಣೆಯಾಗಿದೆ ಎಂದು ಅರ್ಜಿದಾರ ಅಮರನಾಥ್ ದೂರಿದ್ದರು.