ಬಿಬಿಎಂಪಿ ಮೈತ್ರಿ : ಅಡ್ಡಗೋಡೆ ಮೇಲೆ ದೀಪವಿಟ್ಟ ಕುಮಾರಸ್ವಾಮಿ!
ಬೆಂಗಳೂರು, ಸೆಪ್ಟೆಂಬರ್ 14 : ಕಾವೇರಿ ವಿವಾದದ ನಡುವೆಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೈತ್ರಿ ಮಾತುಕತೆ ನಡೆದಿದೆ. ಸೆ.19ರಂದು ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಡೆಯಲಿದ್ದು, ಕಿಂಗ್ ಮೇಕರ್ ಜೆಡಿಎಸ್ ಯಾರನ್ನು ಬೆಂಬಲಿಸಲಿದೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
ಮೇಯರ್ ಪಟ್ಟ ಹಿಂದುಳಿದ ವರ್ಗ (ಬಿ) ಮಹಿಳೆ ಮತ್ತು ಉಪ ಮೇಯರ್ ಪಟ್ಟ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಜೆಡಿಎಸ್ ಬೆಂಬಲಿಸಲಿದೆಯೇ? ಅಥವ ಬಿಜೆಪಿಗೆ ಬೆಂಬಲ ನೀಡಲಿದೆಯೇ? ಎಂಬುದು ಈಗಿನ ಪ್ರಶ್ನೆ.[ಮೇಯರ್ ಚುನಾವಣೆ : ಜೆಡಿಎಸ್ ಬೆಂಬಲ ಯಾರಿಗೆ?]
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾಂಗ್ರೆಸ್ ಶಾಸಕರ ಜೊತೆ ಇಂದು ಸಭೆ ನಡೆಸಿದ್ದು, ಬಿಬಿಎಂಪಿ ಮೈತ್ರಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಜೆಡಿಎಸ್ ಜೊತೆಗಿನ ಮೈತ್ರಿಯನ್ನು ಮುಂದುವರೆಸುವ ಬಗ್ಗೆ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ಮೂಡಿದೆ.[ಬಿಎಸ್ ವೈ ಬಿಬಿಎಂಪಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿಲ್ಲ]
ಆದರೆ, ಜೆಡಿಎಸ್ ಮೇಯರ್ ಪಟ್ಟಕ್ಕೆ ಬೇಡಿಕೆ ಇಟ್ಟಿದೆ. 'ಈ ಬಾರಿ ಮೇಯರ್ ಪಟ್ಟ ನೀಡುವ ಪಕ್ಷಕ್ಕೆ ಬೆಂಬಲ ಕೊಡುತ್ತೇವೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದು, ಜೆಡಿಎಸ್ ಬೆಂಬಲ ಯಾರಿಗೆ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.
ಮೈತ್ರಿ ಮುಂದುವರೆಸಲು ಕಾಂಗ್ರೆಸ್ ನಿರ್ಧಾರ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ಮುಂದುವರೆಸಲು ಕಾಂಗ್ರೆಸ್ ನಿರ್ಧರಿಸಿದೆ. ಆದರೆ, ಅಧಿಕಾರ ಹಂಚಿಕೆಯ ಲೆಕ್ಕಾಚಾರಗಳಿಂದಾಗಿ ಮೈತ್ರಿ ಮಾತುಕತೆಗೆ ಅಂತಿಮವಾಗಿಲ್ಲ. ಸೆ.19ರಂದು ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಿಗದಿಯಾಗಿದೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಗೃಹ ಕಛೇರಿ ಕೃಷ್ಣಾದಲ್ಲಿ ಬೆಂಗಳೂರು ನಗರದ ವ್ಯಾಪ್ತಿಯ ಶಾಸಕರು, ವಿಧಾನಪರಿಷತ್ ಸದಸ್ಯರೊಂದಿಗೆ ಮೈತ್ರಿ ಕುರಿತು ಮಾತುಕತೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, 'ಮೈತ್ರಿ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಂಡಿಲ್ಲ' ಎಂದು ಹೇಳಿದರು.
ಬಿಬಿಎಂಪಿ ಸದಸ್ಯರ ಜೊತೆ ಸಭೆ
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಪದ್ಮನಾಭನಗರದ ನಿವಾಸದಲ್ಲಿ ಬುಧವಾರ ಎಚ್.ಡಿ. ಕುಮಾರಸ್ವಾಮಿ, ಪಕ್ಷದ ಶಾಸಕರು, ಬಿಬಿಎಂಪಿ ಸದಸ್ಯರ ಜೊತೆ ಮೈತ್ರಿ ಕುರಿತು ಚರ್ಚೆ ನಡೆಸಿದ್ದಾರೆ. ಆದರೆ, ಸಭೆಯಲ್ಲಿ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ.
ಮೇಯರ್ ಪಟ್ಟಕ್ಕೆ ಕುಮಾರಸ್ವಾಮಿ ಬೇಡಿಕೆ
ಬುಧವಾರ ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು 'ಕಳೆದ ಚುನಾವಣೆಯಲ್ಲಿ ನಾವು ಕಾಂಗ್ರೆಸ್ಗೆ ಬೆಂಬಲ ಕೊಟ್ಟಿದ್ದೆವು. ಮೇಯರ್ ಪಟ್ಟ ನೀಡುವವರಿಗೆ ಜೆಡಿಎಸ್ ಬೆಂಬಲ ನೀಡಲಿದೆ?' ಎಂದು ಹೇಳಿದರು.