ಚಿಲ್ಲರೆ ಸಮಸ್ಯೆ ಇನ್ನಿಲ್ಲ, ಬಂದಿದೆ ಬಿಎಂಟಿಸಿ ಸ್ಮಾರ್ಟ್ ಕಾರ್ಡ್!
ಬೆಂಗಳೂರು, ಜೂನ್ 18: ಬಿಎಂಟಿಸಿ ಬಸ್ಸುಗಳಲ್ಲಿ ಇನ್ನು ಮುಂದೆ ಸ್ಮಾರ್ಟ್ ಕಾರ್ಡ್ ಬಳಸಿ ಪ್ರಯಾಣ ಮಾಡಬಹುದಾಗಿದೆ. ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಸಂಪೂರ್ಣವಾಗಿ ಜಾರಿಗೊಂಡ ಬಳಿಕ ಚಿಲ್ಲರೆ ಸಮಸ್ಯೆ, ಹಣ ನೀಡಿ ಟಿಕೆಟ್ ಖರೀದಿಸುವ ತೊಂದರೆ ತಪ್ಪಲಿದೆ. ನಗದು ರಹಿತ ವ್ಯವಹಾರವನ್ನು ಉತ್ತೇಜಿಸುವ ಮೋದಿ ಅವರ ಡಿಜಿಟಲ್ ಇಂಡಿಯಾ ಅನುಷ್ಠಾನಗೊಂಡಂತೆ ಆಗುತ್ತದೆ
ಬಿಎಂಟಿಸಿಯ ಸ್ಮಾರ್ಟ್ ಕಾರ್ಡ್ ಯೋಜನೆ ಅಲ್ಲದೆ, ನಾಲ್ಕು ಮಾದರಿಯ 150 ಬಸ್ಗಳು ಹಾಗೂ ಕೆಂಪೇಗೌಡ ಬಸ್ ನಿಲ್ದಾಣದ ನವೀಕೃತ ಮೇಲ್ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಲೋಕಾರ್ಪಣೆ ಮಾಡಿದರು.
ಮೊದಲ ಹಂತದಲ್ಲಿ ಸ್ಮಾರ್ಟ್ಕಾರ್ಡ್ಗಳನ್ನು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿತರಿಸುವ ವ್ಯವಸ್ಥೆ ಮಾಡಲಾಗಿದೆ. ನವೆಂಬರ್ ಅಂತ್ಯದೊಳಗೆ ನಾಲ್ಕು ಲಕ್ಷಕ್ಕೂ ಅಧಿಕ ಅಧಿಕ ಕಾರ್ಡ್ ವಿತರಣೆಯಾಗಲಿದೆ ಎಂದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಏಕ್ರೂಪ್ ಕೌರ್ ಹೇಳಿದರು.
ಸಾರ್ವಜನಿಕ ವಲಯಕ್ಕೆ : ಮೊದಲ ಹಂತದಲ್ಲಿ ವಿಮಾನ ನಿಲ್ದಾಣ ಮಾರ್ಗದಲ್ಲಿ ಸಂಚರಿಸುವ ವಾಯುವಜ್ರ ಹಾಗೂ ವಜ್ರ ಬಸ್ಗಳ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ. ಮುಂದೆ ಎಲ್ಲಾ ಬಸ್ ಗಳಿಗೆ ಈ ಸ್ಮಾರ್ಟ್ ಕಾರ್ಡ್ ಸೌಲಭ್ಯ ವಿಸ್ತರಿಸಲಾಗುತ್ತದೆ. ಅಕ್ಟೋಬರ್ ತಿಂಗಳಿನಿಂದ ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕರಿಗೆ ಲಭ್ಯ.