ರೆಡ್ಡಿ ಮಗಳ ಮದುವೆಗೆ ಹೋಗುತ್ತೇವೆ: ಯಡಿಯೂರಪ್ಪ
ಮಾಜಿ ಸಚಿವ ಗಾಳಿ ಜನಾರ್ದನ ರೆಡ್ಡಿ ಪುತ್ರಿ ಮದುವೆ ಸಮಾರಂಭದಲ್ಲಿ ಭಾಗವಹಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾಧ್ಯಮಗಳಿಗೆ ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರು, ನವೆಂಬರ್, 15: ಬಿಜೆಪಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪುತ್ರಿ ಬ್ರಹ್ಮಿಣಿ ಮದುವೆಗೆ ಹೋಗದಂತೆ ಹೈಕಮಾಂಡ್ ಯಾವುದೇ ಸೂಚನೆ ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.
ಅಷ್ಟೇ ಅಲ್ಲದೇ ಬುಧವಾರ ನಡೆಯುವ ಮದುವೆ ಸಮಾರಂಭದಲ್ಲಿ ಭಾಗವಹಿಸುವುದಾಗಿ ಅವರು ಸ್ಪಷ್ಟಪಡಿಸಿದರು. ಜನಾರ್ದನ ರೆಡ್ಡಿ ಅವರು ನಮ್ಮನ್ನು ಮದುವೆಗೆ ಆಹ್ವಾನಿಸಿದ್ದಾರೆ. ಆದ್ದರಿಂಧ ಮದುವೆ ಸಮಾರಂಭದಲ್ಲಿ ಹಾಜರಾಗುತ್ತಿದ್ದೇವೆ ಎಂದು ಅವರು ಹೇಳಿದರು.
ಇನ್ನೂ ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ನಮ್ಮ ಪಕ್ಷ ಆ ರೀತಿಯ ಯವುದೇ ಸೂಚನೆ ನೀಡಿಲ್ಲ. ಜನಾರ್ದನ ರೆಡ್ಡಿ ಅವರು ತಮ್ಮ ಮಗಳಿಗೆ ಮದುವೆ ಮಾಡುತ್ತಿರುವುದು ಅದು ಅವರ ವೈಯಕ್ತಿಕ ವಿಚಾರ ಎಂದು ಹೇಳಿದ್ದಾರೆ. [ರೆಡ್ಡಿ ಪುತ್ರಿ ಮದುವೆಗೆ ಹೋಗಬೇಡಿ: ಹೈಕಮಾಂಡ್ ಸೂಚನೆ]
ಬಿಜೆಪಿ ಆಡಳಿತದ ಕೇಂದ್ರ ಸರ್ಕಾರ ಕಪ್ಪು ಹಣದ ವಿರುದ್ಧ ಸಮರ ಸಾರಿರುವ ಹಿನ್ನೆಲೆಯಲ್ಲಿ ಅಕ್ರಮ ಹಣ ಸಂಪಾದನೆ ಕಳಂಕ ಹೊತ್ತುಕೊಂಡಿರುವ ಜನಾರ್ದನ ರೆಡ್ಡಿ ಪುತ್ರಿಯ ಮದುವೆ ಸಮಾರಂಭದಲ್ಲಿ ಹಾಜರಾಗದಂತೆ ಬಿಜೆಪಿ ಹೈಕಮಾಂಡ್ ಸೋಮವಾರ ಸೂಚನೆ ನೀಡಿತ್ತು ಎಂದು ವರದಿಗಳು ಬಂದಿದ್ದವು
ಜನಾರ್ದನ ರೆಡ್ಡಿ ವಿರುದ್ಧ ಅಕ್ರಮ ಗಣಿಗಾರಿಕೆ ಮತ್ತು ಭ್ರಷ್ಟಾಚಾರ ಆರೋಪಗಳು ಇರುವ ಹಿನ್ನಲೆಯಲ್ಲಿ ಈಗಲೂ ಅವರ ವಿರುದ್ಧ ಸಿಬಿಐ ತನಿಖೆ ನಡೆಸುತ್ತಿದೆ.