ತನ್ವೀರ್ ಸೇಠ್ ವಿಚಾರ ಪ್ರಸ್ತಾಪಿಸಿದ್ದಕ್ಕೆ ಪರಮೇಶ್ವರ್ ಆಕ್ರೋಶ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ನಲ್ಲೇ ಈಗ ಒತ್ತಾಯಗಳು ಕೇಳಿ ಬರುತ್ತಿವೆ.
ಬೆಂಗಳೂರು, ನವೆಂಬರ್, 14: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ವಿಷಯ ಪ್ರಸ್ತಾಪಿಸಿದ್ದಕ್ಕೆ ಗೃಹ ಸಚಿವ ಪರಮೇಶ್ವರ್ ಅವರು ಫುಲ್ ಗರಂ ಆದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನೆಹರೂ ಜಯಂತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಮಂಜುಳಾ ನಾಗರಾಜ್ ಅವರು ಮಾಡಿದ ಪ್ರಸ್ತಾಪಕ್ಕೆ ಪರಮೇಶ್ವರ್ ಅವರು ತೀವ್ರ ಇರಿಸುಮುರಿಸುಗೊಂಡರು.
ಸಭೆಯಲ್ಲಿ ಎದ್ದು ನಿಂತು ಮಾತನಾಡಿದ ಮಂಜುಳಾ ನಾಗರಾಜ್ "ಇಂದಿರಾಗಾಂಧಿ ಕಟ್ಟಿದಂತಹ ಪಕ್ಷದಲ್ಲಿ ಇಂತಹ ಸಚಿವರು ಇರುವುದು ಬೇಡ ನೀವು ಕೂಡಲೇ ಸಚಿವ ತನ್ವೀರ್ ಸೇಠ್ ವಿರುದ್ಧ ಕ್ರಮ ಕೈಗೊಳ್ಳಬೇಕು" ಎಂದು ಸಭೆಯಲ್ಲಿ ಒತ್ತಾಯ ಮಾಡಿದರು.
"ಇದು ಮಹಿಳಾ ಕಾಂಗ್ರೆಸ್ ವತಿಯಿಂದ ನಿಮಗೆ ಮಾಡುತ್ತಿರುವ ಮನವಿ. ಅಶ್ಲೀಲ ಚಿತ್ರ ವೀಕ್ಷಿಸಿದ ತನ್ವೀಸರ್ ಸೇಠ್ ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಿ" ಎಂದು ಅವರು ಆಗ್ರಹಿಸಿದರು.
ಇದಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಪರಮೇಶ್ವರ್, "ಆಯ್ತು ಕುತ್ಕೋಳಮ್ಮ, ನೋಡ್ತಿವಿ" ಎಂದು ಕೈ ಸನ್ನೆ ಮೂಲಕ ಮಂಜುಳಾ ನಾಗರಾಜ್ ಅವರನ್ನು ಸುಮ್ಮನೆ ಕುಳಿತುಕೊಳ್ಳುವಂತೆ ಸೂಚಿಸಿದರು.
ಟಿಪ್ಪು ಜಯಂತಿ ಆಚರಣೆ ವೇಳೆ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವಲ್ಲಿ ತಲ್ಲೀನರಾಗಿದ್ದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಂಪುಟದಿಂದ ಕೈಬಿಡುವಂತೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಆದರೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರು ಸಚಿವ ತನ್ವೀರ್ ಸೇಠ್ ವರ್ತನೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡುತ್ತಲೇ ಇದ್ದಾರೆ.
ಸಚಿವ ತನ್ವೀರ್ ಸೇಠ್ ವರ್ತನೆಗೆ ಈಗ ಕಾಂಗ್ರೆಸ್ ನಲ್ಲೇ ವಿರೋಧ ವ್ಯಕ್ತವಾಗುತ್ತಿದ್ದರೂ. ಕಾಂಗ್ರೆಸ್ ಮಾತ್ರ ಸಚಿವರ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ.
ಅವರು ತಪ್ಪು ಮಾಡಿರುವುದು ಸಾಬೀತಾದರೆ ಖಂಡಿತ ಕ್ರಮಕೈಗೊಳ್ಳುವುದಾಗಿ ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ.