ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ ಮಳೆ ಸಾಧ್ಯತೆ
ಬೆಂಗಳೂರು, ಜನವರಿ 21: ದಕ್ಷಿಣ ಕರ್ನಾಟಕದಲ್ಲಿ ಶುಕ್ರವಾರದಿಂದ ಮೋಡಕವಿದ ವಾತಾವರಣ ಉಂಟಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರವೂ ಮೋಡ ಮುಸುಕಿದ ವಾತಾವರಣ ಮುಂದುವರೆಯಲಿದ್ದು, ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರದಿಂದ ತಮಿಳುನಾಡಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಪರಿಣಾಮ ರಾಜ್ಯದ ಮೇಲೂ ಉಂಟಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎ.ಶ್ರೀನಿವಾಸರೆಡ್ಡಿ ತಿಳಿಸಿದರು.
ಪ್ರಸ್ತುತ ರಾಜ್ಯದಲ್ಲಿ ಚಳಿಯ ಪ್ರಮಾಣ ಇಳಿಕೆಯಾಗುತ್ತಿದೆ. ಇನ್ನು ಈ ಬಾರಿ ಬೇಸಿಗೆಯಲ್ಲಿ ಬಿಸಿ ಗಾಳಿ ಹೆಚ್ಚಾಗುವ ಲಕ್ಷಣಗಳಿದ್ದು ತಾಪಮಾನ ಗರಿಷ್ಠ ಮಟ್ಟ ತಲುಪಲಿದೆ ಎಂದು ಶ್ರೀನಿವಾಸರೆಡ್ಡಿ ತಿಳಿಸಿದರು.
ರಾಜ್ಯದಲ್ಲಿ ಬರ ಆವರಿಸಿ ನೀರಿಗಾರಿ ಪರಿತಪಿಸುತ್ತಿದ್ದು, ಮತ್ತೆ ಮಳೆಯ ವಾತಾವರಣ ವಿರುವುದು ಸಂತಸದ ಸಂಗತಿ, ಆದರೆ ಮುಂದಿನ ಬೇಸಿಗೆ ಯಲ್ಲಿ ತಾಪಮಾನ ಹೆಚ್ಚಾಗುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.