ಬೆಂಗಳೂರಿನಲ್ಲಿ ಇಂದು, ನಾಳೆ ಮಳೆಯ ಅರ್ಭಟ ಮುಂದುವರಿಕೆ
ಬೆಂಗಳೂರು, ಆಗಸ್ಟ್ 16 : ಸಿಲಿಕಾನ್ ಸಿಟಿಯಲ್ಲಿ ಆಗಸ್ಟ್ 14ರ ಮಧ್ಯರಾತ್ರಿಯಿಂದ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈಗಾಗಲೇ ನಗರದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಇನ್ನೂ ಮೂರು ದಿನ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಕರ್ನಾಟಕ ಹವಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನ ಎಲ್ಲೆಲ್ಲಿ, ಎಷ್ಟೆಷ್ಟು ಮಳೆ: ಇಲ್ಲಿದೆ ಮಾಹಿತಿ
ಇದರಿಂದ ಬುಧವಾರ ಮತ್ತು ಗುರುವಾರ ಮಳೆಯಾಗಲಿದ್ದು, ಮತ್ತಷ್ಟು ಜನಜೀವನ ಹದಗೆಡುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಘಟಕದ ಪ್ರಕಾರ, ರಾಜ್ಯದ ಕೆಲವು ಪ್ರದೇಶಗಳಲ್ಲಿ 20ರಿಂದ 30 ಮಿಲಿ ಮೀಟರ್ ಮಳೆ ಹಾಗೂ ಕೆಲ ಒಳನಾಡಿನ ಪ್ರದೇಶದಲ್ಲಿ 60ಕ್ಕೂ ಹೆಚ್ಚು ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆ ಇದೆ.
ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತದಿಂದಾಗಿ ಮಳೆಯಾಗುತ್ತಿದ್ದು, ಆಗಸ್ಟ್ 14ರ ರಾತ್ರಿಯಿಂದ ಆಗಸ್ಟ್ 15ರ ಮುಂಜಾನೆವರೆಗೆ ಧಾರಾಕಾರವಾಗಿ ಮಳೆ ಸುರಿದಿದೆ.
ಭಾರಿ ಮಳೆಯಿಂದಾಗಿ ನಗರದ ಹಲವೆಡೆ ಮರಗಳು ಧರೆಗುರುಳಿದ್ದು, ಬಹುತೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಪರದಾಡಬೇಕಾಗಿದೆ. ನೂರಾರು ವಾಹನಗಳು ನೀರಿನಲ್ಲಿ ಮುಳುಗಡೆಯಾಗಿವೆ.