ಹುಡುಗಿ ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದವರ ಬಂಧನ
ಬೆಂಗಳೂರು, ನವೆಂಬರ್ 23 : ಗಿರಾಕಿಗಳನ್ನು ಆಕರ್ಷಿಸಲು ಮನೆಯಲ್ಲಿ ಹುಡುಗಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸುವಲ್ಲಿ ಕೇಂದ್ರ ಅಪರಾಧ ವಿಭಾಗ (ಸಿ.ಸಿ.ಬಿ)ದ ಮಹಿಳಾ ಮತ್ತು ಮಾದಕ ದ್ರವ್ಯ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.
ಜ್ಞಾನಭಾರತಿ ಪೊಲೀಸ್ ಠಾಣಾ ಸರಹದ್ದಿನ ವಿಶ್ವನೀಡಂ ಅಂಚೆ, ಸರ್ ಎಂ. ವಿಶ್ವೇಶ್ವರಯ್ಯ ನಗರ, ಮುದ್ದನಪಾಳ್ಯ ಮುಖ್ಯರಸ್ತೆಯ ಮನೆಯೊಂದರಲ್ಲಿ ಹುಡುಗಿಯನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ತುಮಕೂರು ಜಿಲ್ಲೆ ಸಿರಾ ತಾಲೂಕಿನ ಭೀಮರಾಜ್ (36) ಮತ್ತು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ತಮ್ಮಯ್ಯ (34) ಎಂಬಿಬ್ಬರನ್ನು ಬಂಧಿಸಲಾಗಿದೆ.
ಪಶ್ಚಿಮ ಬಂಗಾಳದ ಒಬ್ಬಳು ಹುಡುಗಿಯನ್ನು ವೇಶ್ಯಾವಾಟಿಕೆಯಿಂದ ರಕ್ಷಣೆ ಮಾಡಲಾಗಿದೆ. ಆರೋಪಿಗಳಿಬ್ಬರಿಂದ 15 ಸಾವಿರ ರು. ನಗದು, 2 ಮೊಬೈಲ್ ಫೋನ್, 9 ಕಾಂಡೋಮ್ಗಳನ್ನುಮತ್ತು ಒಂದು ಆಟೋವನ್ನು ವಶಪಡಿಸಿಕೊಳ್ಳಲಾಗಿದೆ.
ರಾಜು ಎಂಬುವನು ಅಮಾಯಕ ಬಡ ಹೆಣ್ಣು ಮಕ್ಕಳನ್ನು ಬೆಂಗಳೂರಿನಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿ ಮುಂಬಯಿ ಹಾಗೂ ಪಶ್ಚಿಮ ಬಂಗಾಳದಿಂದ ಬೆಂಗಳೂರಿಗೆ ಕರೆತಂದು, ಭೀಮ್ರಾಜ್ ಬಳಿ ಬಿಟ್ಟು ವೇಶ್ಯಾವಾಟಿಕೆಗೆ ತಳ್ಳಿದ್ದ. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇನ್ನೂ ಕೆಲ ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.