'ಹಸ್ತ' ತ್ಯಜಿಸಿ 'ಕಮಲ' ಹಿಡಿದ ಶ್ರೀನಿವಾಸ್ ಪ್ರಸಾದ್
ಬೆಂಗಳೂರು, ಜನವರಿ 2: ಸಿಎಂ ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡು ಕಾಂಗ್ರೆಸ್ಸನ್ನು ತ್ಯಜಿಸಿ ಬಿಜೆಪಿಯನ್ನು ಸೇರುತ್ತೇನೆ ಎಂದು ಹೇಳಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಸೋಮವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ವಿಧ್ಯುಕ್ತವಾಗಿ ಸೇರ್ಪಡೆಯಾದರು.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಅನಂತಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಸೇರಿದಂತೆ ಹಲವಾರು ಪಕ್ಷ ಪ್ರಮುಖರ ಉಪಸ್ಥಿತಿಯಲ್ಲಿ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರ್ಪಡೆಗೊಂಡರು. ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜವನ್ನು ಬಿಎಸ್ ವೈ ಶ್ರೀನಿವಾಸ್ ಪ್ರಸಾದ್ ಅವರಿಗೆ ನೀಡಿ ಸ್ವಾಗತಿಸಿದರು.[ಜನವರಿ 2ರಂದು ಬಿಜೆಪಿ ಸೇರಲು ಶ್ರೀನಿವಾಸ್ ಪ್ರಸಾದ್ ನಿರ್ಧಾರ]
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುದಲ್ಲಿ ಸಚಿವ ಸ್ಥಾನ ಗಳಿಸಿದ್ದ ಶ್ರೀನಿವಾಸ್ ಪ್ರಸಾದ್ ಸಿಎಂ ಅವರನ್ನು ದೂಷಿಸಿ, ಸಚಿವ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಿಂದೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಸಂಪುಟದಲ್ಲಿ ಶ್ರೀನಿವಾಸ್ ಪ್ರಸಾದ್ ಸಚಿವರಾಗಿ ದುಡಿದ ಹಿನ್ನೆಲೆ ಪ್ರಸ್ತುತ ಮೈಸೂರು, ಚಾಮರಾಜನಗರದಲ್ಲಿ ಹೆಚ್ಚಿನ ಬಲ ಬರಲಿದೆ ಎಂಬುದು ರಾಜಕೀಯ ತಜ್ಞರ ಮಾತು. ಅಲ್ಲದೆ ನಂಜನಗೂಡು ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಶ್ರೀನಿವಾಸ್ ಪ್ರಸಾದ್ ಅವರೇ ಕಣಕ್ಕಿಳಿಯಲಿದ್ದಾರೆ.
Sh. Srinivasa Prasad joined BJP today along with his large number of supporters. I welcome him wholeheartedly. pic.twitter.com/B8KuXevCvQ
— B.S. Yeddyurappa (@BSYBJP) January 2, 2017
ಡಿಸೆಂಬರ್ 24 ರಂದು ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ಶ್ರೀನಿವಾಸ್ ಪ್ರಸಾದ್ ಅವರ ನಿವಾಸಕ್ಕೆ ತೆರಳಿ ಬಿಜೆಪಿ ಪಕ್ಷ ಸೇರಲು ಸಭೆ ನಡೆಸಿದ್ದರು. ಶ್ರೀನಿವಾಸ್ ಪ್ರಸಾದ್ ಅವರು ಜನವರಿ 2 ರಂದು ಬಿಜೆಪಿ ಸೇರುವುದಾಗಿ ಮಾಹಿತಿ ನೀಡಿದ್ದರು. ಅಂತೆಯೇ ಸೋಮವಾರ ಬಿಜೆಪಿ ಹಿರಿಯ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರಿದರು.
ಮೈಸೂರಿನಲ್ಲಿ ಸಂಭ್ರಮಾಚರಣೆ
ವಿ.ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ಸೇರಿರುವ ಹಿನ್ನೆಲೆಯಲ್ಲಿ ಮೈಸೂರಿನ ಅಗ್ರಹಾರದ 101 ಗಣಪತಿ ದೇಗುಲದ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಕಾಂಗ್ರೆಸ್ ತೊರೆದು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ವಿ.ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ಸೇರ್ಪಡೆಯಾದರು. ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆಯನ್ನು ಮಾಡಿದರು. ಪಟಾಕಿ ಸಿಡಿಸಿದರಲ್ಲದೇ, ಸಿಹಿ ಹಂಚಿದರು. ಬಿಜೆಪಿ ಮುಖಂಡ ಜೋಗಿ ಮಂಜು, ಕೇಬಲ್ ಮಹೇಶ್, ವಿಕ್ರಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.