ವಿದ್ಯೆ ಮನುಷ್ಯನ ಜೀವನದ ಮಟ್ಟ ಹೆಚ್ಚಿಸುತ್ತದೆ: ಸೋಮಣ್ಣ
ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಿದ ಮಾಜಿ ಸಚಿವ ವಿ. ಸೋಮಣ್ಣ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪುಸ್ತಕ ವಿತರಣೆ.
ಬೆಂಗಳೂರು, ಜುಲೈ 15: ಬೆಂಗಳೂರಿನಂತಹ ಮಹಾನಗರದಲ್ಲಿ ಸಾವಿರಾರು ವಿದ್ಯಾರ್ಥಿಗಳು ಸರಿಯಾದ ಶೈಕ್ಷಣಿಕ ಸೌಲಭ್ಯವಿಲ್ಲದೆ ತೊಂದರೆಯನ್ನು ಅನುಭವಿಸುತ್ತಿದ್ದು, ಅಂತಹ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತವಾಗಿ ನೋಟ್ಬುಕ್ ವಿತರಿಸುತ್ತಿರುವುದು ಶ್ಲಾಘನೀಯ ವಿಷಯ ಎಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ವಿ ಸೋಮಣ್ಣ ಅಭಿಪ್ರಾಯಪಟ್ಟರು.
ನಗರದ ಶ್ರೀ ಪದ್ಮರಾಜ್ ಸಾಮಾಜಿಕ ಸಾಂಸ್ಕೃತಿಕ ಮತ್ತು ಕ್ರೀಡಾ ಯುವ ವೇದಿಕೆ ವತಿಯಿಂದ ಬಸವೇಶ್ವರ ನಗರದಲ್ಲಿ ಆಯೋಜಿಸಿದ್ದ ಬಡ ವಿದ್ಯಾರ್ಥಿಗಳಿಗೆ 1 ಲಕ್ಷ ನೋಟ್ಬುಕ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
'' ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿದ್ಯಾದಾನಕ್ಕೆ ತಮ್ಮ ಕೈಲಾದಷ್ಟು ಸೌಲಭ್ಯಗಳನ್ನು ನೀಡುತ್ತಾ ಬಂದಿವೆ. ಆದರೆ ಕೊನೆಯ ಹಂತದ ವಿದ್ಯಾರ್ಥಿಗಳ ಎಲ್ಲಾ ಅವಶ್ಯಕತೆಗಳನ್ನು ಪೂರೈಸುವತ್ತ ವಿಫಲವಾಗಿವೆ. ಈ ನಿಟ್ಟಿನಲ್ಲಿ ಪದ್ಮರಾಜ್ನಂತಹ ಸಮಾಜ ಸೇವಕರು ಉಚಿತ ನೋಟ್ಬುಕ್ ವಿತರಣೆಯಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಬಹಳಷ್ಟು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ'' ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದರು.
ಬಹಳಷ್ಟು ಕುಟುಂಬಗಳು ತಮ್ಮ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ಕೊಳ್ಳಲು ಸುಮಾರು ಒಂದು ವಾರಕ್ಕೂ ಹೆಚ್ಚಿನ ದುಡಿಮೆಯನ್ನು ಮೀಸಲಾಗಿಡಬೇಕಾದ ಪರಿಸ್ಥಿತಿ ಇದೆ. ಅಂತಹ ಬಡ ವಿದ್ಯಾರ್ಥಿಗಳ ಓದಿಗೆ ಯಾವುದೇ ತೊಂದರೆ ಆಗದಂತೆ ನೋಟ್ಪುಸ್ತಕಗಳನ್ನು ನಿರಂತರವಾಗಿ 12 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವುದು ಬಹಳ ಶ್ಲಾಘನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಬಿಬಿಎಂಪಿ ಮಾಜಿ ಸದಸ್ಯ ಎಸ್.ಹೆಚ್.ಪದ್ವರಾಜ್ ಮಾತನಾಡಿ, ''ಕಳೆದ 13 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಅವಶ್ಯಕವಿರುವ ವಸ್ತುಗಳ ವಿತರಣೆಯನ್ನು ಮಾಡುತ್ತಾ ಬಂದಿದ್ದೇವೆ. ನಮ್ಮ ಟ್ರಸ್ಟ್ವತಿಯಿಂದ ವಿದ್ಯಾರ್ಥಿಗಳಿಗೆ ಕೈಲಾದ ಸಹಾಯವನ್ನು ಮಾಡುತ್ತಿದ್ದೇವೆ. ಈ ಬಾರಿ 1 ಲಕ್ಷ ಉಚಿತ ನೋಟ್ಬುಕ್ಗಳನ್ನು ಉಚಿತವಾಗಿ ವಿತರಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆಯನ್ನು ಮಾಡುವ ಉದ್ದೇಶವನ್ನು ಹೊಂದಿದ್ದೇವೆ'' ಎಂದರು.
ಕಾರ್ಯಕ್ರಮದಲ್ಲಿ ಬಸವೃಶ್ವರ ನಗರ ವಾರ್ಡ್ನ ಬಿಬಿಎಂಪಿ ಸದಸ್ಯೆ ಉಮಾವತಿ ಪದ್ಮರಾಜ್ ಸೇರಿದಂತೆ ಹಲವರು ಭಾಗವಹಿಸಿದ್ದರು.