ವಿಧಾನ ಪರಿಷತ್ನಲ್ಲಿ ಏಳು ವಿಧೇಯಕಗಳಿಗೆ ಅಂಗೀಕಾರ
ಬೆಳಗಾವಿ, ಡಿ. 19: ವಿಧಾನಸಭೆಯಲ್ಲಿ ಅಂಗೀಕೃತಗೊಂಡಿರುವ ಏಳು ವಿಧೇಯಕಗಳನ್ನು ವಿಧಾನ ಪರಿಷತ್ತಿನಲ್ಲಿ ಶುಕ್ರವಾರ ಧ್ವನಿಮತಕ್ಕೆ ಹಾಕುವ ಮೂಲಕ ಅಂಗೀಕರಿಸಲಾಯಿತು. ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅವರು ಧ್ವನಿಮತಕ್ಕೆ ಹಾಕುವ ಮೂಲಕ ವಿಧೇಯಕ ಅಂಗೀಕರಿಸಲಾಗಿದೆ ಎಂದು ತಿಳಿಸಿದರು.
೨೦೧೪ ರ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಷತ್ನಲ್ಲಿ ಅಂಗೀಕಾರಕ್ಕಾಗಿ ಮಂಡಿಸಿದರು. ೨೦೧೪ ನೇ ಸಾಲಿನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ತಿದ್ದುಪಡಿ ವಿಧೇಯಕ, ೨೦೧೪ ನೇ ಸಾಲಿನ ಭಾರತ ಉತ್ತರಾಧಿಕಾರ ಕರ್ನಾಟಕ ತಿದ್ದುಪಡಿ ವಿಧೇಯಕ ಹಾಗೂ ೨೦೧೪ ನೇ ಸಾಲಿನ ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯ ನಿರ್ಣಯ ತಿದ್ದುಪಡಿ ವಿಧೇಯಕವನ್ನು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಅಂಗೀಕಾರಕ್ಕಾಗಿ ಮಂಡಿಸಿದರು. [ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಉಚಿತ ವೈ ಫೈ]
೨೦೧೩ ನೇ ಸಾಲಿನ ಕರ್ನಾಟಕ ಅತ್ಯವಶ್ಯಕ ಸೇವೆಗಳ ನಿರ್ವಹಣೆ ವಿಧೇಯಕವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಂಗೀಕಾರಕ್ಕಾಗಿ ಮಂಡಿಸಿದರು. ೨೦೧೪ ನೇ ಸಾಲಿನ ಕರ್ನಾಟಕ ಶಿಕ್ಷಣ ತಿದ್ದುಪಡಿ ವಿಧೇಯಕವನ್ನು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹಾಗೂ ೨೦೧೪ ನೇ ಸಾಲಿನ ಕರ್ನಾಟಕ ಪುರಸಭೆಗಳು ಕೆಲವು ಕಾನೂನು ತಿದ್ದುಪಡಿ ವಿಧೇಯಕವನ್ನು ಪೌರಾಡಳಿತ ಸಚಿವರ ಬದಲಿಗೆ ಕಾನೂನು ಸಚಿವರು ಪರಿಷತ್ನ ಅಂಗೀಕಾರಕ್ಕಾಗಿ ಮಂಡಿಸಿದರು. [ಉತ್ತರ ಕರ್ನಾಟಕ ಅಭಿವೃದ್ಧಿಗೆ ಬದ್ಧ : ಸಿಎಂ]