ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆಗೆ ಶಾಸಕರ ಅಡ್ಡಗಾಲು
ಲೋಕಸಭೆ ಚುನಾವಣೆ ಘೋಷಣೆ ಆಗುವ ಮೊದಲು ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಬೇರೆ ಪಕ್ಷದೊಳಗೆ ವಿಲೀನ ಮಾಡಲು ಬಿ.ಶ್ರೀರಾಮಯಲು ಚಿಂತನೆ ನಡೆಸಿದ್ದಾರೆ. ಇದರ ಭಾಗವಾಗಿಯೇ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಇದಕ್ಕೆ ಜಿಲ್ಲಾ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. [ಶ್ರೀರಾಮುಲು ಬಿಜೆಪಿಗೆ ಬರೋಲ್ವಾ?]
ಬಳ್ಳಾರಿಯಲ್ಲಿ ಮಂಗಳವಾರ ಮಾತನಾಡಿರುವ ಹರಪನಹಳ್ಳಿ ಕ್ಷೇತ್ರದ ಶಾಸಕ ಎಂಪಿ ರವೀಂದ್ರ, ಬಿ.ಶ್ರೀರಾಮುಲು ಅವರ ಬಗ್ಗೆ ನಮಗೆ ವೈಯಕ್ತಿಕವಾಗಿ ಗೌರವವಿದೆ. ಆದರೆ, ಅವರ ಪಕ್ಷ ಸೇರ್ಪಡೆ ಕುರಿತು ಜಿಲ್ಲೆಯ ಎಲ್ಲಾ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿ ಅಂತಿ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಶ್ರೀರಾಮುಲು ಅವರು ಜೈಲು ಸೇರಿರುವ ಜನಾರ್ದನ ರೆಡ್ಡಿ ಅವರ ಜೊತೆ ಉದ್ಯಮವನ್ನು ನಡೆಸಿದ್ದಾರೆ. ಜನಾರ್ದನ ರೆಡ್ಡಿ ಸವಾಲಿನಂತೆ ಕಾಂಗ್ರೆಸ್ ನಾಯಕರು ಬೆಂಗಳೂರಿನಿಂದ ಬಳ್ಳಾರಿ ತನಕ ಪಾದಯಾತ್ರೆ ನಡೆಸಿದ್ದೆವು. ಆದರೆ, ಈಗ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಮಾಡಿರುವ ಕಾಂಗ್ರೆಸ್ ಶಾಸಕರು, ಬಿ. ಶ್ರೀರಾಮುಲು ಅವರು ಪಕ್ಷಕ್ಕೆ ಮರಳಿದರೆ ಅಂತಹ ಉಪಯೋಗವಾಗುವುದಿಲ್ಲ. ಆದ್ದರಿಂದ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಬಾರದು ಎಂದು ಹೇಳಿದ್ದಾರೆ. ಆದರೆ, ರಾಜ್ಯ ಕಾಂಗ್ರೆಸ್ ನಾಯಕರು ಶ್ರೀರಾಮುಲು ಪಕ್ಷ ಸೇರ್ಪಡೆಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.