ಶಶಿಕಲಾ ಪ್ರಮಾಣ ವಚನಕ್ಕೆ ತಡೆ ಕೋರಿ ಸುಪ್ರಿಂ ಕೋರ್ಟಿಗೆ ಮೊರೆ
ಶಶಿಕಲಾ ನಟರಾಜನ್ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆ ಕೋರಿ ಸುಪ್ರಿಂ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ.
ಚೆನ್ನೈ, ಫೆಬ್ರವರಿ 6 : ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆ ಕೋರಿ ಸುಪ್ರಿಂ ಕೋರ್ಟಿಗೆ ಸೋಮವಾರ ಅರ್ಜಿ ಸಲ್ಲಿಸಲಾಗಿದೆ.
ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸುವವರೆಗೆ ಶಶಿಕಲಾ ನಟರಾಜನ್ ಅವರು ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನೀಡಬಾರದು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಮಂಗಳವಾರ ಈ ಅರ್ಜಿಯನ್ನು ಸುಪ್ರಿಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಒಂದು ವಾರದಲ್ಲಿ ಜಯಲಲಿತಾ ಹಾಗೂ ಶಶಿಕಲಾ ಆರೋಪಿಯಾಗಿರುವ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತನ್ನ ತೀರ್ಪು ನೀಡುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಹೇಳಿತ್ತು. ಇದಾಗಿ ಕೆಲವೇ ಗಂಟೆಗಳಲ್ಲಿ ಈ ಅರ್ಜಿ ಸಲ್ಲಿಕೆಯಾಗಿದೆ. [ಎಐಎಡಿಎಂಕೆ ಮುಖ್ಯಸ್ಥೆ ಶಶಿಕಲಾ ನಟರಾಜನ್ ವ್ಯಕ್ತಿಚಿತ್ರ]
ಸೋಮವಾರ ಶಶಿಕಲಾ ನಟರಾಜನ್ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಸೋಮವಾರ ಪ್ರಮಾಣ ವಚನ ಸ್ವೀಕರಿಸಿಲ್ಲ. ಇದೀಗ ಮಂಗಳವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ವದಂತಿ ಇದೆ. ಸುಪ್ರಿಂ ಕೋರ್ಟ್ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಮೊದಲೇ ಪ್ರಮಾಣವಚನ ಸ್ವೀಕರಿಸಿದರೆ ಕೋರ್ಟ್ ಏನು ಮಾಡಲಿದೆ ಎಂಬುದು ಕುತೂಹಲ ಮೂಡಿಸಿದೆ. [ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು : ಸಾಧ್ಯಾಸಾಧ್ಯತೆಗಳು!]
ಈ ಹಿಂದೆ ಅಕ್ರಮ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಮಾಜಿ ಮುಖ್ಯಮಂತ್ರಿ ಜಯಲಲಿತಾ ಮತ್ತು ವಿ ಶಶಿಕಲಾ ಸೇರಿದಂತೆ ನಾಲ್ವರನ್ನು ದೋಷಿ ಎಂದು ತೀರ್ಪು ನೀಡಿ ನಾಲ್ಕು ವರ್ಷ ಕಠಿಣ ಜೈಲು ಶಿಕ್ಷೆಯನ್ನು ನೀಡಿತ್ತು.
ಕರ್ನಾಟಕ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದಾಗ ಜಯಲಲಿತಾ, ಶಶಿಕಲಾ, ಇಳವರಸಿ, ಸುಧಾಕರನ್ ದೋಷಮುಕ್ತ ಎಂಬ ತೀರ್ಪು ಬಂದಿತ್ತು. ಪುನಃ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರಿಂ ಕೋರ್ಟಿನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಇದೀಗ ಸುಪ್ರಿಂ ಕೋರ್ಟ್ ತೀರ್ಪು ನೀಡಬೇಕಾಗಿದ್ದು ಶಶಿಕಲಾ ಭವಿಷ್ಯ ಡೋಲಾಯಮಾನವಾಗಿದೆ.