ದುಂದು ವೆಚ್ಚಕ್ಕೆ ಕಡಿವಾಣ ಹಾಕುವಂತೆ ಮೋದಿ ಕರೆ
ನವದೆಹಲಿ, ಆಗಸ್ಟ್ 21 : ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ದುಂದು ವೆಚ್ಚಕ್ಕೆ ಕಡಿವಾಣ ಹಾಕುತ್ತಿದ್ದಾರೆ. ಭ್ರಷ್ಟಾಚಾರ ಮುಕ್ತ ಮತ್ತು ಜನಪರವಾದ ಆಡಳಿತ ನೀಡುವ ನಿಟ್ಟಿನಲ್ಲಿ ಈ ರೀತಿ ಕ್ರಮ ಅನಿವಾರ್ಯ ಎಂದು ಸರ್ಕಾರ ಹೇಳಿದೆ.
ಸ್ವಚ್ಛ ಆಡಳಿತ ನೀಡುವ ಭಾಗವಾಗಿ ಮೋದಿ ಅವರು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ದುಂದು ವೆಚ್ಚಕ್ಕೆ ಕಡಿವಾಣ ಹಾಕುವಂತೆ ಸೂಚನೆ ನೀಡಿದ್ದಾರೆ.
ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಂದರ್ಭಗಳಲ್ಲಿ ಯಾವುದೇ ಕಾರಣಕ್ಕೂ 5 ಸ್ಟಾರ್ ಹೋಟೆಲ್ ಗಳಲ್ಲಿ ಉಳಿದುಕೊಳ್ಳಬೇಡಿ. ತಮ್ಮ ಸಚಿವಾಲಯಗಳ ವ್ಯಾಪ್ತಿಯ ಸರ್ಕಾರಿ ಸ್ವಾಮ್ಯದ ಕಂಪನಿಗಳಿಂದ ಯಾವುದೇ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳಬಾರದು. ಆಜಕರು ಒದಗಿಸುವ ವಸತಿ ವ್ಯವಸ್ಥೆಯಲ್ಲೇ ಉಳಿದುಕೊಳ್ಳಬೇಕು ಎಂಬ ಆದೇಶ ಹೊರಡಿಸಲಾಗಿದೆ.
ಕೆಲವು ಸಚಿವರು 5 ಸ್ಟಾರ್ ಹೋಟೆಲ್ ಸಂಸ್ಕೃತಿಗೆ ಮಾರು ಹೋಗಿದ್ದು, ಸರ್ಕಾರದ ಹಣವನ್ನು ದುಂದು ವೆಚ್ಚ ಮಾಡುತ್ತಿದ್ದಾರೆ ಎಂದು ಮೋದಿ ಅವರು ಸಚಿವರುಗಳ ಬಳಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.
ಇನ್ನೆರಡು ವರ್ಷಗಳಲ್ಲಿ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು, ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದು ನಿಮ್ಮ ಗುರಿಯಾಗಿರಲಿ ಎಂದು ಸಚಿವ ಸಂಪುಟದ ಸದಸ್ಯರಿಗೆ ಮೋದಿ ಅವರು ಕಿವಿಮಾತು ನೀಡಿದ್ದಾರೆ.