ನೆಲೋಗಿಯಲ್ಲೇ ಧರಂ ಸಿಂಗ್ ಅಂತ್ಯಸಂಸ್ಕಾರ ನಡೆಸಲು ಆಗ್ರಹ, ಪ್ರತಿಭಟನೆ
ನೆಲೋಗಿ (ಕಲಬುರಗಿ), ಜುಲೈ 27: ಮಾಜಿ ಮುಖ್ಯಮಂತ್ರಿ ಎನ್.ಧರಂ ಸಿಗ್ ಅವರ ಅಂತ್ಯಕ್ರಿಯೆಯನ್ನು ನೆಲೋಗಿಯಲ್ಲೇ ಮಾಡಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಗುರುವಾರ ಸಂಜೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಟೈರ್ ಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.
ಕುಚುಕು ಗೆಳೆಯನ ಸಾವಿನ ಸುದ್ದಿ ಕೇಳಿ ಬಿಕ್ಕಿ ಬಿಕ್ಕಿ ಅತ್ತ ಖರ್ಗೆ
ಧರಂ ಸಿಂಗ್ ಅವರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾರೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಲಬುರಗಿಯ ಎನ್.ವಿ.ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಿದ್ದು, ಆ ನಂತರ ನಾಗನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಅಂತಿಮ ಸಂಸ್ಕಾರ ನಡೆಸುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ಆದರೆ, ಧರಂ ಸಿಂಗ್ ಅವರ ಸ್ವಂತ ಊರಾದ ನೆಲೋಗಿಯಲ್ಲೇ ಅಂತ್ಯ ಸಂಸ್ಕಾರ ನಡೆಸಬೇಕು. ನಾಗನಹಳ್ಳಿಯಲ್ಲಿ ನಡೆಸುವುದು ಬೇಡ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದೇ ವೇಳೆ ರಾಜ್ಯ ಹೆದ್ದಾರಿಯನ್ನು ತಡೆದಿದ್ದಾರೆ. ಟೈರ್ ಗಳಿಗೆ ಬೆಂಕಿ ಹಚ್ಚಿಸಿದ್ದಾರೆ. ತಮ್ಮ ಅಭಿಮಾನಕ್ಕೆ ಸಾಕ್ಷಿಯಾಗಿ ನೆಲೋಗಿಯಲ್ಲಿ ಅಂತಿಮ ಸಂಸ್ಕಾರ ನಡೆಸಬೇಕು ಎಂದು ಧರಂ ಸಿಂಗ್ ಕುಟುಂಬದವರನ್ನು ಮನವಿ ಮಾಡಲಾಗಿದೆ.