ಹಾಸನ ಹೆದ್ದಾರಿಯಲ್ಲಿ ಭೀಕರ ಅಫಘಾತ, 4 ಸಾವು
ಹಾಸನ, ಜುಲೈ 10 : ಇಲ್ಲಿನ ರಾಜೀವ್ ಕಾಲೇಜ್ ಬಳಿ ಭಾನುವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಒಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮಂಗಳೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಹಾಗೂ ಹಾಸನ ಕಡೆಗೆ ತೆರಳುತ್ತಿದ್ದ ಇನೋವಾ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಮೃತಪಟ್ಟ ನಾಲ್ವರಲ್ಲಿ ಒಬ್ಬರು ಮಹಿಳೆಯಾಗಿದ್ದು, ಎಲ್ಲರೂ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪ್ರವಾಸಕ್ಕೆ ತೆರಳುತ್ತಿದ್ದರು.
ಕಾರು ಚಾಲಕನ ಅತಿವೇಗವೇ ದುರಂತಕ್ಕೆ ಕಾರಣ ತಿಳಿದು ಬಂದಿದೆ. ಕಾರು ಚಾಲಕನನ್ನು ಬೆಂಗಳೂರು ಮೂಲದ ಶಂಕರ ಮೂರ್ತಿ ಎಂದು ಗುರುತಿಸಲಾಗಿದೆ. ಮಿಕ್ಕ ಮೂವರು ಮಧ್ಯಪ್ರದೇಶದವರು ಎಂದು ಪೊಲೀಸರು ಹೇಳಿದ್ದಾರೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಹಾಸನ ಗ್ರಾಮಾಂತರ ಪೊಲೀಸರು ಹೇಳಿದರು.