ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಗ್ರೀನ್ ಸಿಗ್ನಲ್
ನವದೆಹಲಿ, ಆಗಸ್ಟ್ 17 : ಜೆಡಿಎಸ್ ನಿಂದ ಅಮಾನತುಗೊಂಡಿರುವ 7 ಬಂಡಾಯ ಶಾಸಕರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದೆಹಲಿ ತಲುಪಿದ ಜೆಡಿಎಸ್ ಬಂಡಾಯ ಶಾಸಕರು, ಕಾಂಗ್ರೆಸ್ ನಾಯಕರ ಭೇಟಿ
ಈ ಬಗ್ಗೆ ಬುಧವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಿಂದ ಅಮಾನತುಗೊಂಡಿರುವ 7 ಶಾಸಕರನ್ನು ರಕ್ಷಣೆ ಮಾಡುವ ಜವಾಬ್ದಾರಿಯನ್ನು ರಾಹುಲ್ ಗಾಂಧಿ ತೆಗೆದುಕೊಂಡಿದ್ದಾರೆ. ಈ ಡಿಸೆಂಬರ್ ಅಥವಾ ಮುಂದಿನ 2018ರ ಜನವರಿಯಲ್ಲಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಿದರು.
ಇವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಬಲಿಷ್ಠರಾಗಿರುವುದರಿಂದ ಇವರ ಆಗಮನ ಕಾಂಗ್ರೆಸ್ ಗೆ ಲಾಭವಾಗಲಿದೆ. ಬಿಜೆಪಿಯ ಕೆಲ ನಾಯಕರು ಕಾಂಗ್ರೆಸ್ ಸೇರಲು ಆಸಕ್ತಿ ತೋರಿದ್ದಾರೆ ಎಂದರು.
ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದ ಶಾಸಕರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿತ್ತು. ಈ ಶಾಸಕರು ಈಗ ಕಾಂಗ್ರೆಸ್ ಸೇರುವ ಪ್ರಯತ್ನ ನಡೆಸಿದ್ದು, ಇದಕ್ಕೆ ಕೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ), ಚೆಲುವರಾಯ ಸ್ವಾಮಿ (ನಾಗಮಂಗಲ), ಎಚ್.ಸಿ.ಬಾಲಕೃಷ್ಣ (ಮಾಗಡಿ), ಇಕ್ಬಾಲ್ ಅನ್ಸಾರಿ (ಗಂಗಾವತಿ), ರಮೇಶ್ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ) ಜೆಡಿಎಸ್ ನಿಂದ ಅಮಾನತುಗೊಂಡವರು.