ಏಪ್ರಿಲ್ ನಿಂದ ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚು ಅಕ್ಕಿ
2018ರ ಚುನಾವಣೆ ಹಾಗೂ ಮಾರ್ಚ್ ತಿಂಗಳಲ್ಲಿ ರಾಜ್ಯ ಸರ್ಕಾರವು ಮಂಡಿಸಲಿರುವ ಬಜೆಟ್ ಹಿನ್ನೆಲೆಯಲ್ಲಿ ಬಡವರ ಪರವಾಗಿ ಯೋಜನೆಗಳನ್ನು ರೂಪಿಸಲು ಸರ್ಕಾರದ ಚಿಂತನೆ
ಬೆಂಗಳೂರು, ಫೆಬ್ರವರಿ 8: ಇದೇ ವರ್ಷದ ಏಪ್ರಿಲ್ ತಿಂಗಳಿನಿಂದ ಬಿಪಿಎಲ್ ಕಾರ್ಡುದಾರರಿಗೆ ನೀಡಲಾಗುವ ಅಕ್ಕಿಯ ಪ್ರಮಾಣವನ್ನು ಹೆಚ್ಚಿಸುವಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಇದು ಆದೇಶವಾಗಿ ಜಾರಿಯಾದರೆ, ಸದ್ಯಕ್ಕೆ ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕಾರ್ಡುಗಾರರಿಗೆ ಸಿಗುತ್ತಿರುವ 5 ಕೆಜಿ ಅಕ್ಕಿ ಬದಲಿಗೆ, ಏಪ್ರಿಲ್ ನಿಂದ ತಲಾ 8 ಕೆಜಿ ಅಕ್ಕಿ ಸಿಗಲಿದೆ.
ಬುಧವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ''2018ರ ಚುನಾವಣೆ ಹಾಗೂ ಮಾರ್ಚ್ ತಿಂಗಳಲ್ಲಿ ರಾಜ್ಯ ಸರ್ಕಾರವು ಮಂಡಿಸಲಿರುವ ಬಜೆಟ್ ಹಿನ್ನೆಲೆಯಲ್ಲಿ ರಾಜ್ಯದ ಬಡವರು ಸರ್ಕಾರದಿಂದ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಸರ್ಕಾರ ಬಡವರ ಪರವಾಗಿ ಯೋಜನೆಗಳನ್ನು ರೂಪಿಸಬೇಕಿದೆ'' ಎಂದರು.
ಈ ಹಿನ್ನೆಲೆಯಲ್ಲಿ ಪ್ರತಿ ಬಿಪಿಎಲ್ ಕಾರ್ಡುದಾರರಿಗೆ ಈಗ ಸಿಗುತ್ತಿರುವ ಅಕ್ಕಿ ಕೋಟಾಕ್ಕಿಂತ ಹೆಚ್ಚವರಿಯಾಗಿ 3 ಕೆಜಿ ಅಕ್ಕಿ ಸಿಗಲಿದೆ ಎಂದು ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.