ಸಂಪುಟ ವಿಸ್ತರಣೆ ಮಾಡದ ಸಿಎಂ, ರಾಹುಲ್ ಕೈ ಸೇರಿತು ಪತ್ರ
ಬೆಂಗಳೂರು, ಮೇ 4 : ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳು ಪೂರ್ಣಗೊಳ್ಳಲು ಕೆಲವು ದಿನಗಳು ಬಾಕಿ ಇರುವಾಗಲೇ ಪತ್ರ ಚಳವಳಿ ಆರಂಭವಾಗಿದೆ. ಸಚಿವ ಸಂಪುಟ ವಿಸ್ತರಣೆ ಮಾಡದ ಸಿದ್ದರಾಮಯ್ಯ ಅವರ ವಿರುದ್ಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆವರೆಗೂ ಸಂಪುಟ ವಿಸ್ತರಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವ ಹಿನ್ನಲೆಯಲ್ಲಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಈ ಪತ್ರ ಬರೆದಿದ್ದಾರೆ. ಮೇ 13ರಂದು ರಾಜ್ಯದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷಗಳಾಗುತ್ತದೆ ಅದಕ್ಕೂ ಮೊದಲೇ ಈ ಪತ್ರ ಸಮರ ಆರಂಭವಾಗಿದೆ. ['ಏನು ಆಗ್ಬೇಕೋ ಅದು ಆಗುವ ಸಮಯಕ್ಕೆ ಆಗುತ್ತೆ' : ಸಿಎಂ]
ಖಾಲಿ ಇರುವ ನಿಗಮ-ಮಂಡಳಿಗಳ ಸುಮಾರು 800 ನಿರ್ದೇಶಕರು ಹಾಗೂ ಸದಸ್ಯರ ಹುದ್ದೆಗಳಿಗೆ ಆಯ್ಕೆ ಪಟ್ಟಿ ಸಿದ್ಧವಾಗಿದ್ದರೂ ಅದನ್ನು ಪ್ರಕಟಿಸದೆ ಕಾರ್ಯಕರ್ತರ ಸಹನೆಯನ್ನು ಪರೀಕ್ಷೆ ಮಾಡಲಾಗುತ್ತಿದೆ. ಸಚಿವ ಸಂಪುಟ ವಿಸ್ತರಣೆಯನ್ನು ಮುಂದೂಡಲಾಗುತ್ತಿದೆ. ಇದು ಗ್ರಾಮ ಪಂಚಾಯಿತಿ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ.
ಪತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಸಿದ್ದರಾಮಯ್ಯ ಅವರ ವಿರುದ್ಧ ಜಿಲ್ಲಾಧ್ಯಕ್ಷರು ಆರೋಪಗಳನ್ನು ಮಾಡಿದ್ದು, ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ-ಮಂಡಳಿಗಳ ನೇಮಕದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲು ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಪತ್ರ ಚಳವಳಿಯ ವಿವರಗಳು ಚಿತ್ರಗಳಲ್ಲಿ.
ಸಿದ್ದರಾಮಯ್ಯ ವಿರುದ್ಧ ರಾಹುಲ್ಗೆ ಪತ್ರ
ಕರ್ನಾಟಕದ ಕಾಂಗ್ರೆಸ್ನ ಜಿಲ್ಲಾಧ್ಯಕ್ಷರ ಗುಂಪೊಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದೆ. ಸರ್ಕಾರ ಎರಡು ವರ್ಷ ಪೂರೈಸುತ್ತಿರುವಾಗಲೇ ಈ ಪತ್ರ ದೆಹಲಿ ತಲುಪಿದೆ.
ಹಳೇ ಬೇಡಿಕೆಗಳೊಂದಿಗೆ ಹೊಸ ಪತ್ರ
ಗ್ರಾಮ ಪಂಚಾಯಿತಿ ಚುನಾವಣೆ ಮುಗಿಯುವ ತನಕ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವ ಹಿನ್ನಲೆಯಲ್ಲಿ ಅಸಮಾಧಾನಗೊಂಡಿರುವ ಜಿಲ್ಲಾಧ್ಯಕ್ಷರು ರಾಹುಲ್ ಗಾಂಧಿ ಅವರಿಗೆ ಈ ಪತ್ರ ಬರೆದಿದ್ದಾರೆ. ರಾಜ್ಯದ ನಾಯಕರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
ಪತ್ರದಲ್ಲಿನ ಬೇಡಿಕೆ ಏನು?
ಖಾಲಿ ಇರುವ ನಿಗಮ-ಮಂಡಳಿಗಳ ಸುಮಾರು 800 ನಿರ್ದೇಶಕರು ಹಾಗೂ ಸದಸ್ಯರ ಹುದ್ದೆಗಳಿಗೆ ಆಯ್ಕೆ ಪಟ್ಟಿ ಸಿದ್ಧವಾಗಿದ್ದರೂ ಅದನ್ನು ಪ್ರಕಟಿಸದೆ ಕಾರ್ಯಕರ್ತರ ಸಹನೆಯನ್ನು ಪರೀಕ್ಷೆ ಮಾಡಲಾಗುತ್ತಿದೆ. ಸಚಿವ ಸಂಪುಟ ವಿಸ್ತರಣೆಯನ್ನು ಮುಂದೂಡಲಾಗುತ್ತಿದೆ. ಇದು ಗ್ರಾಮ ಪಂಚಾಯಿತಿ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ.
ಸಿಂಗ್ ಸೂಚನೆಗೂ ಬೆಲೆ ಕೊಟ್ಟಿಲ್ಲ
ಅಧಿಕಾರ ಹಂಚಿಕೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಸೂಚನೆ ನೀಡಿದ್ದರೂ ಅದನ್ನು ರಾಜ್ಯದ ನಾಯಕರು ಪಾಲನೆ ಮಾಡುತ್ತಿಲ್ಲ. ಕೆಲವು ನಾಯಕರು ಮಾತ್ರ ಅಧಿಕಾರ ಅನುಭವಿಸುತ್ತಿದ್ದಾರೆ. ಇದು ಪಕ್ಷದ ಭವಿಷ್ಯದ ಹಿತದೃಷ್ಟಿಯಿಂದ ಉತ್ತಮವಲ್ಲ ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಹಲವು ಗಡುವು ನೀಡಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ವಿಸ್ತರಣೆಗೆ ಹಲವು ಗಡುವನ್ನು ನೀಡಿದ್ದಾರೆ. ದಸರಾ, ದೀಪಾವಳಿ, ಬಜೆಟ್ ಅಧಿವೇಶನ ಮುಂತಾದ ಗಡುವುಗಳನ್ನು ನೀಡಿ ಅವರು ವಿಳಂಬ ಧೋರಣೆ ಅನುಸರಿಸಿದರು. ಸದ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿದ್ದು ಈ ಹಿನ್ನಲೆಯಲ್ಲಿ ಜಿಲ್ಲಾಧ್ಯಕ್ಷರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
ಸೋನಿಯಾ ಭೇಟಿ ಮಾಡಿದ್ದ ಸಿದ್ದರಾಮಯ್ಯ
ಏಪ್ರಿಲ್ನಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ಕೇವಲ 10 ನಿಮಿಷದ ಚರ್ಚೆ ಬಳಿಕ ಕರ್ನಾಟಕ ಭವನಕ್ಕೆ ವಾಪಸ್ ಬಂದ ಸಿದ್ದರಾಮಯ್ಯ ಅವರು ಸೋನಿಯಾ ಭೇಟಿಯ ವಿವರಗಳನ್ನು ನೀಡಲು ನಿರಾಕರಿಸಿದರು. ಆದರೆ. 'ಏನು ಆಗಬೇಕೋ ಅದು ಆಗುವ ಸಮಯಕ್ಕೆ ನಡೆಯುತ್ತೆ' ಎಂದು ಹೇಳಿದ್ದರು. ಈ ಮೂಲಕ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬವಾಗುವ ಸೂಚನೆ ನೀಡಿದ್ದರು.