ಪರಿಷತ್ ಉಪ ಚುನಾವಣೆ : ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಅಭ್ಯರ್ಥಿ?
ಬೆಂಗಳೂರು, ಅ.14 : ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ನಿಂದ ಸಿ.ಎಂ.ಇಬ್ರಾಹಿಂ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಆದರೆ, ಹಲವು ಕಾಂಗ್ರೆಸ್ ನಾಯಕರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಆಗಸ್ಟ್ 31ರಂದು ವಿಮಲಾ ಗೌಡ ಅವರ ನಿಧನದಿಂದ ತೆರವಾದ ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದೆ. ವಿಧಾನಸಭೆಯಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪರಿಷತ್ತಿಗೆ ಕಳಿಸಲಾಗುತ್ತದೆ. ಈ ಚುನಾವಣೆಗೆ ಯೋಜನಾ ಮಂಡಳಿ ಉಪಾಧ್ಯಕ್ಷರು ಆಗಿರುವ ಸಿ.ಎಂ.ಇಬ್ರಾಹಿಂ ಅವರನ್ನು ಅಭ್ಯರ್ಥಿಯಾಗಿಸುವ ಆಲೋಚನೆ ಇದೆ.
ಸಿ.ಎಂ.ಇಬ್ರಾಹಿಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರು. ಆದ್ದರಿಂದ, ಅವರನ್ನು ಆಯ್ಕೆ ಮಾಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಆದರೆ, ಕೆಲವು ಮೂಲ ಕಾಂಗ್ರೆಸಿಗರು, ಇಬ್ರಾಹಿಂ ಜೆಡಿಎಸ್ ಪಕ್ಷದಿಂದ ಬಂದವರು ಎಂಬ ಕಾರಣಕ್ಕೆ ವಿರೋಧಿಸುತ್ತಿದ್ದಾರೆ.
ಆಡಳಿತ ಪಕ್ಷ ಚುನಾವಣೆಯಲ್ಲಿ ಸುಲಭವಾಗಿ ಜಯಗಳಿಸಲಿದೆ. ಆದ್ದರಿಂದ, ಅಭ್ಯರ್ಥಿಗಳಾಗಲು ಭಾರೀ ಪೈಪೋಟಿ ನಡೆಯುತ್ತಿದೆ. ಮಾಜಿ ಸಚಿವೆ ರಾಣಿ ಸತೀಶ್, ಮಾಜಿ ಮೇಯರ್ ಎಂ.ರಾಮಚಂದ್ರಪ್ಪ ಸೇರಿದಂತೆ ಹಲವು ನಾಯಕರು ಟಿಕೆಟ್ ಪಡೆಯಲು ಪ್ರಯತ್ನ ನಡೆಸುತ್ತಿದ್ದಾರೆ.
ಸಿ.ಎಂ.ಇಬ್ರಾಹಿಂ ಅವರು ಸಿದ್ದರಾಮಯ್ಯ ಅವರ ಆಪ್ತರಾದ ಕಾರಣ 2013ರ ಚುನಾವಣೆಯಲ್ಲಿ ಕ್ಷೇತ್ರದ ಹಾಲಿ ಶಾಸಕ ಸಂಗಮೇಶ್ ಅವರನ್ನು ಕಡೆಗಣಿಸಿ ಭದ್ರಾವತಿಯಲ್ಲಿ ಇಬ್ರಾಹಿಂ ಅವರಿಗೆ ಟಿಕೆಟ್ ನೀಡಲಾಗಿತ್ತು. ಆದರೆ, ಇಬ್ರಾಹಿಂ ಸೋಲು ಅನುಭವಿಸಿದ್ದರು.
ಪ್ರಸ್ತುತ ವಿಧಾನಪರಿಷತ್ ಅಭ್ಯರ್ಥಿಯಾಗಿ ಇಬ್ರಾಹಿಂ ಅವರನ್ನು ಆಯ್ಕೆ ಮಾಡಲು ಮುಂದಾಗಿರುವುದಕ್ಕೆ ಅಸಮಾಧಾನವೆದ್ದಿದೆ. ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಯಾರಾಗಬಹುದು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.