ಗೌಡರ ಜೊತೆ ವೇದಿಕೆ ಹಂಚಿಕೊಂಡ ನಡಹಳ್ಳಿ ಉಚ್ಛಾಟನೆ!
ಬೆಂಗಳೂರು, ಏಪ್ರಿಲ್ 18 : ಶನಿವಾರ ಮೈಸೂರಿನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಹಲವು ವಿಶೇಷತೆಗಳಿಗೆ ಸಾಕ್ಷಿಯಾಯಿತು. ಕುಮಾರಸ್ವಾಮಿ ಅವರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಿದರೆ, ಸಭೆಯ ವೇದಿಕೆಯಲ್ಲಿ ಕಾಂಗ್ರೆಸ್ ಶಾಸಕರು ಇದ್ದದ್ದು ಎಲ್ಲರ ಅಚ್ಚರಿಗೆ ಕಾರಣವಾಯಿತು.
ಅವರು ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ. ಪದೇ-ಪದೇ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷದ ನಾಯಕರಿಗೆ ಮುಜುಗರ ಉಂಟುಮಾಡುತ್ತಿರುವ ಪಾಟೀಲರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ನಿರ್ಧರಿಸಲಾಗಿದೆ. [ಜೆಡಿಎಸ್ ಸೇರಲಿದ್ದಾರೆ ಎ.ಎಸ್.ಪಾಟೀಲ ನಡಹಳ್ಳಿ]
ಇಷ್ಟುದಿನ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದ ಪಾಟೀಲರು ಶನಿವಾರ ಮೈಸೂರಿನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಣಿಸಿಕೊಂಡರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದರು. ಇದು ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಿಸಿದೆ. [ಕಾಂಗ್ರೆಸ್ ಶಾಸಕನ ಅಮಾನತಿಗೆ ಶಿಫಾರಸು]
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದ ನಡಹಳ್ಳಿ ಅವರು, '2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ' ಎಂದು ಘೋಷಣೆ ಮಾಡುವ ಮೂಲಕ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟು ಮಾಡಿದ್ದರು. ವಿವರಗಳು ಚಿತ್ರಗಳಲ್ಲಿ..... [ಮುಂದಿನ ಸಿಎಂ ಕುಮಾರಣ್ಣ, ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಕಂಡ ಕನಸು!]
ಉಚ್ಛಾಟನೆಗೆ ಶಿಫಾರಸು
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು, 'ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಹಲವು ಸಲ ಪಕ್ಷದ ನಾಯಕರಿಗೆ ಮುಜುಗರ ಉಂಟುಮಾಡುವ ಹೇಳಿಕೆ ನೀಡಿದ್ದಾರೆ. ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ಶಿಫಾರಸು ಮಾಡಲಾಗುತ್ತದೆ' ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸುವಂತಿಲ್ಲ
ಈಗಾಗಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸದಂತೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರಿಗೆ ಪಕ್ಷ ನಿಷೇಧ ಹೇರಿದೆ. ಈಗ ಜೆಡಿಎಸ್ ಸಭೆಯಲ್ಲಿ ಕಾಣಿಸಿಕೊಂಡ ಬಳಿಕ ಪಕ್ಷದಿಂದ ಉಚ್ಛಾಟನೆ ಮಾಡಲು ನಾಯಕರು ತೀರ್ಮಾನ ಕೈಗೊಂಡಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಆದೇಶ ಹೊರಬೀಳುವ ಸಾಧ್ಯತೆ ಇದೆ.
ಜೆಡಿಎಸ್ ಪರವಾಗಿ ಪ್ರಚಾರ ನಡೆಸಿದ್ದರು
ಎ.ಎಸ್.ಪಾಟೀಲ ನಡಹಳ್ಳಿ ಅವರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರು ಮತ್ತು '2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ' ಎಂದು ಘೋಷಿಸಿದ್ದರು. [ಚಿತ್ರ : ದೇವೇಗೌಡರ ಪಕ್ಕದಲ್ಲಿ ನಡಹಳ್ಳಿ]
ಪಕ್ಷಕ್ಕೆ ಆಹ್ವಾನಿಸಿದ್ದ ಕುಮಾರಸ್ವಾಮಿ
ಎ.ಎಸ್.ಪಾಟೀಲ ನಡಹಳ್ಳಿ ಅವರು ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದನ್ನು ತಿಳಿದ ಎಚ್.ಡಿ.ಕುಮಾರಸ್ವಾಮಿ ಅವರು, 'ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಾ ನಮಗೆ ಬೆಂಬಲ ನೀಡಿದ್ದಾರೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ' ಎಂದು ಹೇಳಿದ್ದರು.
ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿದ್ದರು
2015ರ ಏ.8ರಂದು ಎ.ಎಸ್.ಪಾಟೀಲ ಅವರು 'ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಕಡೆಗಣಿಸುತ್ತಿದೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ. ಆದ್ದರಿಂದ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಿ' ಎಂದು ತಮ್ಮದೇ ಸರ್ಕಾರದ ವಿರುದ್ಧ ಮಾತನಾಡಿ ನಾಯಕರಿಗೆ ಮುಜುಗರ ಉಂಟು ಮಾಡಿದ್ದರು.