ಸಿದ್ದರಾಮಯ್ಯ ಕೈಗೆ ಫುಲ್ ಪವರ್ : ದಿಗ್ವಿಜಯ್ ಸಿಂಗ್
ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆ ಗೆದ್ದ ಖುಷಿಯಲ್ಲಿರುವ ಸಿದ್ದರಾಮಯ್ಯ ಅವರಿಗೆ ಫುಲ್ ಪವರ್ ನೀಡಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಬೆಂಗಳೂರು, ಏಪ್ರಿಲ್ 18: ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆ ಗೆದ್ದ ಖುಷಿಯಲ್ಲಿರುವ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ನಿಂದ ಪೂರ್ಣ ಬೆಂಬಲ ಸಿಕ್ಕಿದೆ. ರಾಜ್ಯದ ಆಡಳಿತ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ಪ್ರಮುಖ ನಿರ್ಧಾರಗಳನ್ನು ಸಿಎಂ ಸಿದ್ದರಾಮಯ್ಯ ಅವರೇ ತೆಗೆದುಕೊಳ್ಳಲು ಫುಲ್ ಪವರ್ ನೀಡಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಎರಡೂ ಕ್ಷೇತಗಳಲ್ಲಿ ಕಾಗ್ರೆಸ್ ಗೆದ್ದಿದೆ ಎನ್ನುವುದಕ್ಕಿಂತ ಬಿಜೆಪಿಯಿಂದ ಜಯವನ್ನು ಕಿತ್ತುಕೊಂಡಿದ್ದೇವೆ. ನಮ್ಮ ಬಳಿ ಲಿಂಗಾಯತರ ಮತಗಳಿವೆ ಎಂದು ಬೀಗುತ್ತಿದ್ದ ಬಿಜೆಪಿ ನಾಯಕರಿಗೆ ಇದು ಸರಿಯಾದ ಪಾಠ ಕಲಿಸಿದೆ.
ಸಂಪುಟ ವಿಸ್ತರಣೆ, ಕೆಪಿಸಿಸಿಗೆ ನೂತನ ಅಧ್ಯಕ್ಷ ನೇಮಕ, 2018ರ ವಿಧಾನಸಭೆ ಚುನಾವಣೆಗೆ ತಯಾರಿ ಕುರಿತಂತೆ ನಿರ್ಧಾರ ಕೈಗೊಳ್ಳುವ ಎಲ್ಲಾ ಅಧಿಕಾರವನ್ನು ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ ಎಂದು ದಿಗ್ವಿಜಯ್ ಸಿಂಗ್ ಹೇಳಿದರು.
ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಒಲವಿದೆ, ಆಡಳಿತ ವಿರೋಧಿ ಅಲೆ ಇಲ್ಲ ಎಂಬ ಸಂದೇಶ ಮುಂದಿನ ವಿಧಾನಸಭೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆ. ಕೆಪಿಸಿಸಿ ಅಧ್ಯಕ್ಷರಾದವರ ಕಣ್ಣು ಸಿಎಂ ಕುರ್ಚಿ ಮೇಲೆ ಇರುತ್ತದೆ. ಮುಂದಿನ ಚುನಾವಣೆಗೆ ಟಿಕೆಟ್ ಹಂಚಿಕೆ ಅಧಿಕಾರ ಸಿದ್ದರಾಮಯ್ಯ ಅವರಿಗೆ ಸಿಗುವ ಸಾಧ್ಯತೆಯಿದೆ. ಹೈಕಮಾಂಡ್ ಬೆಂಬಲದೊಂದಿಗೆ ಸಿದ್ದರಾಮಯ್ಯ ಅವರು ಯಾರನ್ನು ಅಧ್ಯಕ್ಷರನ್ನಾಗಿಸುತ್ತಾರೋ, ಯಾರನ್ನು ಮುಂದಿನ ಸಿಎಂ ಅಭ್ಯರ್ಥಿ ಎನ್ನುತ್ತಾರೋ ಕಾದು ನೋಡಬೇಕಿದೆ.