ಕಲ್ಲಪ್ಪ ಆತ್ಮಹತ್ಯೆ: ಜುಲೈ 16 ರಂದು ಚಿಕ್ಕಮಗಳೂರು ಬಂದ್
ಚಿಕ್ಕಮಗಳೂರು, ಜುಲೈ, 15: ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ನಡೆಸಬೇಕು ಎಂದು ಒತ್ತಾಯಿಸಿ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಜುಲೈ 16, ಶನಿವಾರ ಚಿಕ್ಕಮಗಳೂರು ಬಂದ್ಗೆ ಕರೆ ನೀಡಿವೆ.
ಬಿಜೆಪಿ ಹೊರತುಪಡಿಸಿ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳ ಪದಾಧಿಕಾರಿಗಳು ಸಭೆ ನಡೆಸಿ ಬಂದ್ಗೆ ಕರೆ ನೀಡಿದ್ದಾರೆ. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವೇ ಜನರಲ್ಲಿ ಬಹುಚರ್ಚಿತ ವಿಷಯವಾಗಿದೆ. ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣ ತೆರೆ ಮರೆಗೆ ಸರಿಯುತ್ತಿದ್ದು ಸರ್ಕಾರವನ್ನು ಎಚ್ಚರಿಸಲು ಬಂದ್ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡರು ತಿಳಿಸಿದ್ದಾರೆ.
ಚಿಕ್ಕಮಗಳೂರು ಡಿವೈ ಎಸ್ ಪಿ ಯಾಗಿದ್ದ ಕಲ್ಲಪ್ಪ ಹಂಡಿಭಾಗ್ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡದಲ್ಲಿನ ತಮ್ಮ ಮಾವನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಉದ್ಯಮಿಯನ್ನು ಅಪಹರಣ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಅನೇಕ ಪ್ರಶ್ನೆಗಳನ್ನು ಹುಟ್ಟಿಹಾಕಿತ್ತು. ಅಪಹರಣ ಮತ್ತು ಹಣಕ್ಕಾಗಿ ಬೇಡಿಕೆಯಿಟ್ಟ ಆರೋಪ ಹಂಡಿಭಾಗ್ ಅವರ ಮೇಲೆ ಬಂದಿತ್ತು.