ಸಾಹಿತ್ಯ ಸಮ್ಮೇಳನಕ್ಕೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ರೊಟ್ಟಿ
ಸಿಂಧನೂರು ತಾಲ್ಲೂಕಿನ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳು ರಾಯಚೂರಿನಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ತಲಾ 5 ರೊಟ್ಟಿ ಪೂರೈಸಲಿದ್ದಾರೆ ಎಂದು ಸಿಂಧನೂರು ತಾಲ್ಲೂಕು ಕಸಾಪ ಘಟಕದ ಅಧ್ಯಕ್ಷೆ ಸರಸ್ವತಿ ಪಾಟೀಲ್ ತಿಳಿಸಿದ್ದಾರೆ.
ಸಿಂಧನೂರು, ನವೆಂಬರ್, 29: ರಾಯಚೂರಿನಲ್ಲಿ ನಡೆಯುವ ಅಖಿಲ ಭಾರತ 82ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಂಧನೂರು ತಾಲ್ಲೂಕಿನಿಂದ ಒಂದು ಲಕ್ಷಕ್ಕೂ ಹೆಚ್ಚು ರೊಟ್ಟಿ ಕಳುಹಿಸಲು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ನಿರ್ಧರಿಸಿದೆ.
ತಾಲ್ಲೂಕಿನ ಪ್ರತಿಯೊಂದು ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ತಲಾ ಐದರಂತೆ ಈ ಬಾರಿ ಸಾಹಿತ್ಯ ಸಮ್ಮೇಳನಕ್ಕೆ ರೊಟ್ಟಿ ತಂದು ಕೊಡುತ್ತಾರೆ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷೆ ಸರಸ್ವತಿ ಪಾಟೀಲ್ ತಿಳಿಸಿದರು.
ಡಿಸೆಂಬರ್ 2, 3 ಮತ್ತು 4ರಂದು ರಾಯಚೂರಿನಲ್ಲಿ ನಡೆಯುವ ಸಮ್ಮೇಳನದಲ್ಲಿ ಪ್ರತಿನಿತ್ಯ 1 ಲಕ್ಷ ಜನಭಾಗವಹಿಸುವ ನಿರೀಕ್ಷೆ ಇದೆ. ಇದಕ್ಕಾಗಿ ಪ್ರತಿ ತಾಲ್ಲೂಕಿನಿಂದಲೂ ರೊಟ್ಟಿ ಸಂಗ್ರಹಿಸಲಾಗುತ್ತಿದೆ ಎಂದು ಅವರು ಹೇಳಿದರು.
ಇದಷ್ಟೇ ಅಲ್ಲದೆ ಜಿಲ್ಲೆಯ ಸ್ತ್ರೀ-ಶಕ್ತಿ ಸಂಘಗಳು, ಸ್ವಯಂ ಸೇವಾ ಸಂಸ್ಥೆಗಗಳು ಸಮ್ಮೇಳನಕ್ಕೆ ರೊಟ್ಟಿ ಕೊಡಲು ಮುಂದೆ ಬಂದಿವೆ ಅವರು ಹೇಳಿದರು.
ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವ್ಯಾಪ್ತಿಯಲ್ಲಿ 24 ಕ್ಲಸ್ಟರ್ ಕೇಂದ್ರಗಳಿದ್ದು, ಪ್ರತಿ ಕ್ಲಸ್ಟರ್ ನಿಂದ ಮೂರು ಸಾವಿರಕ್ಕೂ ಹೆಚ್ಚು ರೊಟ್ಟಿ ಸಂಗ್ರಹಿಸಲಾಗುತ್ತಿದೆ. ತಾಲ್ಲೂಕಿನಲ್ಲಿ 50ಕ್ಕೂ ಹೆಚ್ಚು ಪದವಿ ಮತ್ತು ಪಿಯು ಕಾಲೇಜುಗಳಿದ್ದು, 7 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಎಂದು ಅವರು ವಿವರಿಸಿದರು.
ಜಿಲ್ಲೆಯ ಸರ್ಕಾರಿ ಕಚೇರಿಗಳು, ವಿವಿಧ ಸಂಘ-ಸಂಸ್ಥೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಸಭೆ ನಡೆಸಿ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಇನ್ನು ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ 10 ಸಾವಿರ ಗಣ್ಯರಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಿಕೊಡಲು ಸಮ್ಮತಿಸಿದೆ ಎಂದು ಅವರು ಹೇಳಿದರು.
ಸಮ್ಮೇಳನದಲ್ಲಿ ಭಾಗವಹಿಸುವ ಮಹಿಳೆಯರಿಗಾಗಿ ಕೃಷಿ ವಿಶ್ವವಿದ್ಯಾಲಯದಲ್ಲಿ ವಸತಿ ಕಲ್ಪಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಬೇಕೆಂದು ನಮ್ಮ ಅಪೇಕ್ಷೆ ಎಂದು ಅವರು ತಿಳಿಸಿದರು.