ಕೆಜೆ ಜಾರ್ಜ್ ವಿರುದ್ಧ ಎಫ್ಐಆರ್, ಮುಂದೇನು?
ಬೆಂಗಳೂರು, ಜುಲೈ 19 : ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ಮತ್ತು ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಸೂಚನೆ ನೀಡಿದೆ. ಎಫ್ಐಆರ್ ದಾಖಲು ಮಾಡಲು ರಾಜ್ಯ ಸರ್ಕಾರದ ಪೂರ್ವಾನುಮತಿ ಅಗತ್ಯವಿಲ್ಲ. ಆದ್ದರಿಂದ, ಇಂದೇ ಎಫ್ಐಆರ್ ದಾಖಲು ಮಾಡುವ ಸಾಧ್ಯತೆ ಇದೆ.
ಮಡಿಕೇರಿ ಜೆಎಂಎಫ್ಸಿ ಕೋರ್ಟ್ ನ್ಯಾಯಾಧೀಶೆ ಅನ್ನಪೂರ್ಣೇಶ್ವರಿ ಅವರು ಸೋಮವಾರ ಸಂಜೆ ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಮತ್ತು ಕೆ.ಜೆ.ಜಾರ್ಜ್ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಲು ಆದೇಶ ನೀಡಿದ್ದರು.[ಗಣಪತಿ ಸಾವಿನ ಪ್ರಕರಣದ Timeline]
ಎಂ.ಕೆ.ಗಣಪತಿ ಪುತ್ರ ನೇಹಾಲ್ ಸಲ್ಲಿಸಿದ್ದ ಖಾಸಗಿ ದೂರಿನ ಅನ್ವಯ ಎಫ್ಐಆರ್ ದಾಖಲು ಮಾಡಲು ಆದೇಶ ನೀಡಲಾಗಿದೆ. ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಆರೋಪದಡಿ ಎಫ್ಐಆರ್ ದಾಖಲಾಗುತ್ತದೆ. ಈ ಪ್ರಕರಣದಲ್ಲಿ ವ್ಯಕ್ತಿಯ ವಿರುದ್ಧದ ಆರೋಪ ಸಾಬೀತಾದರೆ ಗರಿಷ್ಠ 10 ವರ್ಷಗಳ ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶವಿದೆ. [ವಿಡಿಯೋ - ಡಿವೈಎಸ್ ಪಿ ಗಣಪತಿ ಕಡೇ ಸಂದರ್ಶನ]
ಮೇಲ್ಮನವಿ ಸಲ್ಲಿಸಬಹುದು : ಎಫ್ಐಆರ್ ದಾಖಲು ಮಾಡಲು ನೀಡಿರುವ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಕ್ಕೆ ಅವಕಾಶವಿದೆ. ಐಜಿಪಿ ಪ್ರಣಬ್ ಮೊಹಾಂತಿ ಅವರು ಮೇಲ್ಮನವಿ ಸಲ್ಲಿಸುವುದಾಗಿ ಸೋಮವಾರ ಹೇಳಿದ್ದಾರೆ. ಕೆ.ಜೆ.ಜಾರ್ಜ್ ಅವರು ಮೇಲ್ಮನವಿ ಸಲ್ಲಿಸಬಹುದು. ಮಡಿಕೇರಿ ಕೋರ್ಟ್ನಲ್ಲಿ ಆದೇಶದ ಪುನರ್ ಪರಿಶೀಲನೆಗೆ ಅರ್ಜಿ ಸಲ್ಲಿಸಲಿದ್ದಾರೆಯೇ? ಅಥವ ಹೈಕೋರ್ಟ್ನಲ್ಲಿ ಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತಾರೋ? ಕಾದು ನೋಡಬೇಕು. [ಗಣಪತಿ ಆತ್ಮಹತ್ಯೆ : ಐಜಿಪಿ ಪ್ರಣಬ್ ಮೊಹಾಂತಿ ಹೇಳಿದ್ದೇನು?]
ಸಿಐಡಿಗೆ ವರ್ಗಾವಣೆ : ಕರ್ನಾಟಕ ಸರ್ಕಾರ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಐಡಿ ಮತ್ತು ನ್ಯಾಯಾಂಗ ತನಿಖೆಗೆ ಆದೇಶ ನೀಡಿದೆ. ನ್ಯಾಯಾಲಯದ ಆದೇಶದಂತೆ ಮಡಿಕೇರಿ ಟೌನ್ ಪೊಲೀಸರು ಎಫ್ಐಆರ್ ದಾಖಲು ಮಾಡಿದ ಬಳಿಕ ಅದನ್ನು ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ.
ಎಫ್ಐಆರ್ ರದ್ದುಗೊಳಿಸಲು ಮನವಿ : ಯಾವುದೇ ಪ್ರಕರಣದಲ್ಲಿ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಕೋರ್ಟ್ ಮೆಟ್ಟಿಲೇರಬಹುದು. ಈ ಪ್ರಕರಣದಲ್ಲಿಯೂ ಮಡಿಕೇರಿ ಟೌನ್ ಪೊಲೀಸರು ಎಫ್ಐಆರ್ ದಾಖಲಿಸಿದ ಬಳಿಕ ಅದನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಸಚಿವ ಕೆಜೆ ಜಾರ್ಜ್ ಮತ್ತು ಇತರ ಇಬ್ಬರು ಐಪಿಎಸ್ ಅಧಿಕಾರಿಗಳು ಕಾನೂನು ಹೋರಾಟ ನಡೆಸಬಹುದು.
ಬಂಧನ ಭೀತಿ ಇದೆಯೇ? : ಎಫ್ಐಆರ್ ದಾಖಲಾದ ಬಳಿಕ ಆರೋಪಿಗಳನ್ನು ಬಂಧಿಸುವ ಬಗ್ಗೆ ತನಿಖಾಧಿಕಾರಿಗಳು ತೀರ್ಮಾನ ಕೈಗೊಳ್ಳುತ್ತಾರೆ. ಆರೋಪಿ ಪ್ರಭಾವಿ ಸ್ಥಾನದಲ್ಲಿದ್ದು, ಸಾಕ್ಷಿಗಳನ್ನು ನಾಶಪಡಿಸುವ ಸಾಧ್ಯತೆ ಇದ್ದರೆ ಬಂಧಿಸಬಹುದಾಗಿದೆ. ತನಿಖೆಗೆ ಸಹಕಾರ ನೀಡಿದರೆ ಬಂಧಿಸುವ ಸಾಧ್ಯತೆ ಕಡಿಮೆ. ಈ ಬಗ್ಗೆ ತನಿಖಾಧಿಕಾರಿ ತೀರ್ಮಾನ ಕೈಗೊಳ್ಳುತ್ತಾರೆ. ಬಂಧನದ ಭೀತಿಯಿಂದಾಗಿ ಮೂವರು ನಿರೀಕ್ಷಣಾ ಜಾಮೀನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.