ಸಿಎಂ, ಗೃಹ ಸಚಿವರ ವಿರುದ್ಧ ಕೇಸ್ ಹಾಕ್ತಾರಂತೆ ಅನುಪಮಾ ಶಣೈ
ಸಿದ್ದರಾಮಯ್ಯ, ಜಿ. ಪರಮೇಶ್ವರ್, ಮಾಜಿ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್, ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ ಅವರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡುವಂತೆ ಮನವಿ ಸಲ್ಲಿಕೆ.
ಬೆಂಗಳೂರು, ಮಾರ್ಚ್ 28: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ, ಅಕ್ರಮ ಅಬಕಾರಿ ದಂಧೆಗಳಿಗೆ ರಾಜ್ಯದ ಮುಖ್ಯಮಂತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರಾದ ಜಿ. ಪರಮೇಶ್ವರ್ ಪ್ರೋತ್ಸಾಹ ನೀಡುತ್ತಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಲು ತಮಗೆ ಅನುಮತಿ ನೀಡಬೇಕೆಂದು ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಅವರು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮನವಿ ಪತ್ರದಲ್ಲಿ ನೇರ ಆರೋಪ ಮಾಡಿರುವ ಅವರು, ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ ಅಬಕಾರಿ ದಂಧೆಗಳಿಗೆ ಪ್ರೋತ್ಸಾಹ ನೀಡುವ ಸಂಬಂಧ ಸಿಎಂ ಹಾಗೂ ಗೃಹ ಸಚಿವರು ತಮ್ಮ ಕಚೇರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದೂ ಆಪಾದಿಸಿದ್ದಾರೆ.
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಇವರ ವಿರುದ್ಧ ಪ್ರಕರಣ ದಾಖಲಾಗಬೇಕು. ಸಿಎಂ, ಗೃಹ ಸಚಿವರಲ್ಲದೆ, ದಂಧೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್, ಸಚಿವ ಪಿ.ಟಿ. ಪರಮೇಶ್ವರ್ ನಾಯಕ್ ಅವರ ವಿರುದ್ಧ ಪ್ರಕರಣ ದಾಖಲಾಗಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.