ಗದಗದಿಂದ ಅಸೆಂಬ್ಲಿಗೆ ಸ್ಪರ್ಧೆ, ಗಾಲಿ ಜನಾರ್ದನ ರೆಡ್ಡಿ ಸುಳಿವು
ಮಾಜಿ ಸಚಿವ, ಬಳ್ಳಾರಿಯ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೋ? ಇಲ್ಲವೋ? ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.
ಗದಗ, ಮೇ 09: ಮಾಜಿ ಸಚಿವ, ಬಳ್ಳಾರಿಯ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೋ? ಇಲ್ಲವೋ? ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕರೆ ಗದಗ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಜನಾರ್ದನ ರೆಡ್ದಿ ಹೇಳಿದ್ದಾರೆ.
ಜೈಲುವಾಸ, ಮಗಳ ಮದುವೆ, ಐಟಿ ದಾಳಿ, ವಿಚಾರಣೆ ನಂತರ ಮತ್ತೊಮ್ಮೆ ಸಕ್ರಿಯ ರಾಜಕಾರಣಕ್ಕೆ ಮರಳಲು ಗಾಲಿ ಜನಾರ್ದನ ರೆಡ್ಡಿ ಸಜ್ಜಾಗುತ್ತಿದ್ದಾರೆ.ಗದಗಕ್ಕೆ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡುತ್ತಾ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದರು.
ಮುಂದಿನ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನವನ್ನು ಗಳಿಸಲಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ.
ನಾನು ಸಾಮಾನ್ಯ ಕಾರ್ಯಕರ್ತ.ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೆಯೋ ಅದಕ್ಕೆ ನಾನು ಬದ್ಧವಾಗಿದ್ದೇನೆ. ಗದಗದಿಂದ ಸ್ಪರ್ಧಿಸುವಂತೆ ಸೂಚಿಸಿದರೆ ನಾನು ಸ್ಪರ್ಧಿಸಲು ಸಿದ್ಧ ಎಂದರು.
ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲವಿರುವುದು ಸಹಜ. ಆದರೆ, ಎಲ್ಲರೂ ಒಟ್ಟಾಗಿ ಚುನಾವಣೆಯನ್ನು ಎದುರಿಸಿ, ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕಿದೆ ಎಂದು ಹೇಳಿದರು.