ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಗಣಿಯಲ್ಲಿ ಬಡಿದಾಡಿಕೊಳ್ಳುವ ಗೋರೆಹಬ್ಬ

By ಬಿ.ಎಂ ಲವಕುಮಾರ್
|
Google Oneindia Kannada News

ಹಬ್ಬ ಎಂದಾಕ್ಷಣ ನಮ್ಮ ಕಣ್ಮುಂದೆ ಪೂಜೆ.. ಊಟ.. ರಥೋತ್ಸವ ಹೀಗೆ ವಿವಿಧ ಕಲ್ಪನೆಗಳು ಮೂಡುತ್ತವೆ. ಆದರೆ ಇದ್ಯಾವುದೂ ಇಲ್ಲದ ವಿಭಿನ್ನ ಮತ್ತು ವಿಶಿಷ್ಟವಾದ ಹಬ್ಬವೊಂದು ಚಾಮರಾಜನಗರ ಗಡಿಭಾಗದ ತಮಿಳುನಾಡು ಬಳಿಯ ತಾಳವಾಡಿ ಫಿರ್ಕಾ ವ್ಯಾಪ್ತಿಯ ಗುಮಟಾಪುರ ಗ್ರಾಮದಲ್ಲಿ ನಡೆಯುತ್ತದೆ. ಪ್ರತಿ ವರ್ಷ ದೀಪಾವಳಿ (ಬಲಿಪಾಡ್ಯಮಿ) ಹಬ್ಬದ ಮಾರನೇ ದಿನ ಗ್ರಾಮದಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತಿದೆ.

ಗುಮಟಾಪುರ ಗ್ರಾಮದಲ್ಲಿ ನಡೆಯುವ ಈ ಹಬ್ಬವನ್ನು 'ಗೊರೆ ಹಬ್ಬ' ಎಂದು ಕರೆಯಲಾಗುತ್ತದೆ. ಇಲ್ಲಿ ಸಗಣಿಯಲ್ಲಿ ಬಡಿದಾಡುವುದೇ ಹಬ್ಬವಾಗಿದೆ. ಇದು ನೋಡುಗರಿಗೆ ವಿಚಿತ್ರವಾಗಿ ಕಂಡು ಬಂದರೂ ಇದರ ಹಿಂದೆ ಸಂಪ್ರದಾಯ ಮಿಳಿತಗೊಂಡಿರುವುದನ್ನು ತಳ್ಳಿ ಹಾಕುವಂತಿಲ್ಲ. ಗ್ರಾಮದ ಯುವಕರು ಒಬ್ಬರಿಗೊಬ್ಬರು ಪರಸ್ಪರ ಸಗಣಿ ಎರಚಾಡಿ, ಸಗಣಿ ಗುಡ್ಡೆಯಲ್ಲೇ ಉರುಳಾಡಿ ಸಂಭ್ರಮಿಸುವ ಮೂಲಕ ಸೌಹಾರ್ದತೆ ಮೆರೆಯುತ್ತಾರೆ. ಇದನ್ನು ವೀಕ್ಷಿಸಲು ಸುತ್ತಮುತ್ತಲಿನ ಸಾವಿರಾರು ಜನರು ಆಗಮಿಸುತ್ತಾರೆ.[ದೀಪಾವಳಿ ಎಲ್ಲರ ಬಾಳಲ್ಲಿ ತರಲಿ ಬೆಳಕು]

Gore festival is famous in Gumatapura Village, border of chamarajanagar and Tamil Nadu

ಈ ಹಬ್ಬದ ಇತಿಹಾಸವೇನು?

ಗುಮಟಾಪುರ ಗ್ರಾಮದ ಗೌಡನ ಮನೆಗೆ ವ್ಯಕ್ತಿಯೊಬ್ಬ ಕೆಲಸಕ್ಕೆ ಸೇರಿದ್ದನು. ಈತ ಇದ್ದಕ್ಕಿದ್ದಂತೆ ಮರಣ ಹೊಂದಿದನು. ಆತ ಬಳಸುತ್ತಿದ್ದ ಜೋಳಿಗೆಯನ್ನು ತಿಪ್ಪೆಗೆ ಎಸೆಯಲಾಗಿತ್ತು. ಇದಾದ ಕೆಲ ದಿನಗಳ ನಂತರ ಗೌಡನ ಎತ್ತಿನ ಗಾಡಿ ಜೋಳಿಗೆ ಎಸೆಯಲಾಗಿದ್ದ ತಿಪ್ಪೆಯಲ್ಲಿ ಹಾದು ಹೋಗುವಾಗ ಎತ್ತಿನ ಗಾಡಿಯ ಚಕ್ರಕ್ಕೆ ಆ ಜೋಳಿಗೆ ಸಿಕ್ಕಿ ಹಾಕಿಕೊಳ್ಳುತ್ತದೆ. ಈ ವೇಳೆ ಸಮೀಪದಲ್ಲಿಯೇ ಇದ್ದ ಶಿವಲಿಂಗದಿಂದ ರಕ್ತ ಬರುತ್ತದೆ.

ಅದೇ ದಿನ ರಾತ್ರಿ ಗೌಡರ ಕನಸಿನಲ್ಲಿ ದೇವರು ಕಾಣಿಸಿಕೊಂಡು ಈ ದೋಷ ನಿವಾರಣೆಗಾಗಿ ಗ್ರಾಮದಲ್ಲಿ ಗುಡಿಯೊಂದನ್ನು ನಿರ್ಮಿಸಬೇಕು. ದೀಪಾವಳಿ ಹಬ್ಬದ ಮರುದಿನ ಸಗಣಿ ಹಬ್ಬ ಆಚರಿಸಬೇಕು ಎಂದು ಹೇಳಿತಂತೆ. ಹೀಗಾಗಿ ತಿಪ್ಪೆ ಸ್ಥಳದಲ್ಲಿ ಬೀರಪ್ಪನ ಗುಡಿ ಕಟ್ಟಿ ಸಗಣಿ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಗ್ರಾಮದ ಹಿರಿಯರು ಹೇಳುತ್ತಾರೆ.

ಹಬ್ಬದ ದಿನದಂದು ಗ್ರಾಮದ ಯುವಕನೊಬ್ಬನನ್ನು ಕತ್ತೆ ಮೇಲೆ ಕೂರಿಸಿಕೊಂಡು ಗ್ರಾಮದ ಪ್ರಮುಖ ಬಡಾವಣೆಗಳಲ್ಲಿ ಮೆರವಣಿಗೆ ಮಾಡಲಾಗುತ್ತದೆ. ಕತ್ತೆ ಮೇಲೆ ಕುಳಿತ ಈತನನ್ನು ಚಾಡಿಕೋರ ಎಂದು ಸಂಭೋದಿಸಲಾಗುತ್ತದೆ. ಮೆರವಣಿಗೆ ವೇಳೆ ಆತನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲಾಗುತ್ತದೆ. ಇದೂ ಕೂಡ ಹಬ್ಬದ ಆಚರಣೆಯ ಮತ್ತೊಂದು ವಿಶೇಷ. ಇದಕ್ಕೂ ಮುನ್ನ ಗೋವುಗಳು ಹಾಕಿದ ಸಗಣಿಯನ್ನು ಗ್ರಾಮದ ದೇವಸ್ಥಾನದ ಬಳಿ ಸುರಿಯಲಾಗುತ್ತದೆ. ಮತ್ತೊಂದೆಡೆ ಮಕ್ಕಳು ಮನೆಗಳಿಂದ ಬೇಡಿ ತಂದ ಎಣ್ಣೆಯಿಂದ ಪೂಜೆ ಸಲ್ಲಿಸಿ, ನಂತರ ಸಮೀಪದಲ್ಲಿಯೇ ಇರುವ ಕಾರಪ್ಪ ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ.[ವಿಶೇಷ ಲೇಖನ: ದೀಪಾವಳಿ ಕೇವಲ ಮನೆ ಜ್ಯೋತಿಯಲ್ಲ, ಆತ್ಮಜ್ಯೋತಿ]

Gore festival is famous in Gumatapura Village, border of chamarajanagar and Tamil Nadu

ಯುವಕನಿಗೆ ಹುಲ್ಲಿನ ಮೀಸೆ, ಗಡ್ಡ ಮಾಡಿ ಕಟ್ಟಿ ಬಳಿಕ ಆತನನ್ನು ಕತ್ತೆಯೊಂದರಲ್ಲಿ ಕೂರಿಸಿ ಗ್ರಾಮದ ಕೆರೆಯಿಂದ ಪ್ರಮುಖ ಬಡಾವಣೆಗಳಲ್ಲಿ ಮೆರವಣಿಗೆ ಮಾಡಿ ಬೀರೇಶ್ವರನ ದೇವಸ್ಥಾನದವರೆಗೂ ಮೆರವಣಿಗೆಯಲ್ಲಿ ಕರೆತರಲಾಗುತ್ತದೆ. ಈ ವೇಳೆ ಕತ್ತೆ ಮೇಲೆ ಕುಳಿತಿದ್ದವನಿಗೆ ಅಶ್ಲೀಲ ಪದಗಳಿಂದ ನಿಂದಿಸುತ್ತಾರೆ. ನಂತರ ಆತನ ಹುಲ್ಲಿನ ಮೀಸೆ ಹಾಗೂ ಗಡ್ಡ ತೆಗೆದು ಸಗಣಿ ರಾಶಿಯಲ್ಲಿ ಇರಿಸಿ ಬೀರೇಶ್ವರನಿಗೆ ಪೂಜೆ ಸಲ್ಲಿಸಿ ನಂತರ ಸಗಣಿಯಾಟ ನಡೆಯುತ್ತದೆ.

ಗ್ರಾಮದ ಯುವಕರು ಸಗಣಿಯನ್ನು ಉಂಡೆ ಮಾಡಿಕೊಂಡು ಒಬ್ಬರಿಗೊಬ್ಬರು ಹೊಡೆದಾಡಿ, ಸಗಣಿ ರಾಶಿಯಲ್ಲಿ ಉರುಳಾಡುತ್ತಾರೆ. ಈ ವಿಶಿಷ್ಟ ಆಚರಣೆ ಮುಗಿದ ನಂತರ ಚಾಡಿಕೋರ ಗುಡ್ಡದಲ್ಲಿ ಹಿಡಿಕಟ್ಟೆಗಳಿಂದ ಗೊಂಬೆಯೊಂದನ್ನು ನಿರ್ಮಿಸಿ ಸುಡುತ್ತಾರೆ. ನಂತರ ಸಗಣಿಯಾಟದಲ್ಲಿ ಪಾಲ್ಗೊಂಡಿದ್ದ ಯುವಕರು ಕೆರೆಗೆ ತೆರಳಿ ಸ್ನಾನ ಮಾಡಿ ಮನೆಗಳಿಗೆ ತೆರಳುವ ಮೂಲಕ ಗೋರೆ ಹಬ್ಬಕ್ಕೆ ತೆರೆ ಎಳೆಯಲಾಗುತ್ತದೆ.

English summary
Gore festival is famous in Gumatapura Village, border of chamarajanagar and Tamilnadu. This festival celebration is going on every deepavali.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X