ಎಸ್ಐಟಿಯಿಂದ ಬಂಧನ : ವರದಿ ತಳ್ಳಿಹಾಕಿದ ಕುಮಾರಸ್ವಾಮಿ
ಬೆಂಗಳೂರು, ಆಗಸ್ಟ್ 8 : ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ತಮ್ಮನ್ನು ಬಂಧಿಸಿದೆ ಎಂಬ ಮಾಧ್ಯಮಗಳ ವರದಿಯನ್ನು ಎಚ್.ಡಿ.ಕುಮಾರಸ್ವಾಮಿ ತಳ್ಳಿಹಾಕಿದರು. ವದಂತಿ ಹಬ್ಬಿಸುವ ಮೂಲಕ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿವೆ ಎಂದು ಅವರು ಆರೋಪಿಸಿದರು.
ಶನಿವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ ಅವರು, ಆ.5ರಂದು ಎಸ್ಐಟಿ ಕುಮಾರಸ್ವಾಮಿ ಅವರನ್ನು ಬಂಧಿಸಿದ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ ಎಂದ ಮಾಧ್ಯಮಗಳ ವರದಿಯನ್ನು ತಳ್ಳಿಹಾಕಿದರು. ಗಣಿಗಾರಿಕೆಗೆ ಗುತ್ತಿಗೆ ನೀಡುವಲ್ಲಿ ತಮ್ಮ ಪಾತ್ರವೇನು ಇಲ್ಲ ಎಂದು ಸ್ಪಷ್ಟಪಡಿಸಿದರು.
'ಆ.5ರಂದು ಜೆ.ಪಿ.ನಗರದಲ್ಲಿರುವ ನನ್ನ ಮನೆಗೆ ಎಸ್ಐಟಿ ಅಧಿಕಾರಿಗಳು ಆಗಮಿಸಿದ್ದರು. ನಾನು ಸಹ ಎಸ್ಐಟಿ ಕಚೇರಿಗೆ ಹೋಗಿದ್ದೆ. ಆದರೆ, ನನ್ನನ್ನು ಯಾರೂ ಬಂಧಿಸಿಲ್ಲ. ಮಾಧ್ಯಮಗಳ ವರದಿ ನೋಡಿ ನನಗೆ ಆಘಾತವಾಯಿತು' ಎಂದು ಕುಮಾರಸ್ವಾಮಿ ಹೇಳಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜನರ ದಾರಿ ತಪ್ಪಿಸಲು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಇಂತಹ ಸುಳ್ಳುಸುದ್ದಿಗಳನ್ನು ಹಬ್ಬಿಸುತ್ತಿವೆ. ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ತಮ್ಮ ಪಾತ್ರವೇನು ಇಲ್ಲ ಎಂದು ಅವರು ತಿಳಿಸಿದರು.
ಯಾವುದು ಈ ಪ್ರಕರಣ? : ಜಂತಕಲ್ ಎಂಟರ್ಪ್ರೈಸಸ್ ನಡೆಸಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಈ ಕಂಪೆನಿಯು ತನ್ನ ಗಣಿ ಗುತ್ತಿಗೆಯನ್ನು ಪೂರ್ವಾನ್ವಯ ಆಗುವಂತೆ ನವೀಕರಿಸಿಕೊಂಡಿದೆ. ಇದರಲ್ಲಿ ಕುಮಾರಸ್ವಾಮಿ ಅವರ ಪಾತ್ರವಿರಬಹುದು ಎಂಬುದು ಆರೋಪವಾಗಿದೆ.