ರೆಹಮಾನ್ ಷರೀಫ್ಗೆ ಹೆಬ್ಬಾಳ ಕಾಂಗ್ರೆಸ್ ಟಿಕೆಟ್?
ಬೆಂಗಳೂರು, ಜನವರಿ, 26: ಹೆಬ್ಬಾಳ ಕ್ಷೇತ್ರದ ಟಿಕೆಟ್ ಹಂಚಿಕೆ ಸಂಬಂಧ ಕಾಂಗ್ರೆಸ್ ನಲ್ಲಿ ಮತ್ತಷ್ಟು ಗೊಂದಲಗಳು ಎದ್ದಿವೆ. ಭೈರತಿ ಸುರೇಶ್ ಹೆಸರಿನಲ್ಲಿ ಸಿದ್ಧವಾಗಿದ್ದ ಬಿ ಫಾರಂಗೆ ಕಾಂಗ್ರೆಸ್ ಹೈ ಕಮಾಂಡ್ ತಡೆ ನೀಡಿದೆ.
ಕಾಂಗ್ರೆಸ್ ಹಿರಿಯ ನಾಯಕ ಜಾಫರ್ ಷರೀಫ್ ತಮ್ಮ ಮೊಮ್ಮಗನಿಗೆ ಟಿಕೆಟ್ ದೊರಕಿಸಿಕೊಡಲು ಪ್ರಯತ್ನ ಮುಂದುವರಿಸಿದ್ದಾರೆ. ಹೆಬ್ಬಾಳ ಕ್ಷೇತ್ರದಲ್ಲಿ ಭೈರತಿ ಸುರೇಶ್ ಗೆ ಬಿ ಫಾರಂ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಸೂಚನೆ ನೀಡಿದೆ ಎನ್ನಲಾಗಿದೆ.
ಹಾಗಾಗಿ ಹೆಬ್ಬಾಳ ಕ್ಷೇತ್ರದಲ್ಲಿ ಸಿಕೆ ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಗೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಉಪಚುನಾವಣೆ ಟಿಕೆಟ್ ಗಾಗಿ ನಡೆದಿದ್ದ ಪೈಪೋಟಿಯಲ್ಲಿ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಲುಗೈ ಸಾಧಿಸಿ ಹೆಬ್ಬಾಳ ಕ್ಷೇತ್ರದ ಟಿಕೆಟ್ ಸಿಎಂ ಆಪ್ತ ಭೈರತಿ ಸುರೇಶ್ ಅವರಿಗೆ ದೊರಕಿಸಿಕೊಟ್ಟಿದ್ದರು.
ಆದರೆ ಟಿಕೆಟ್ ಹಂಚಿಕೆ ಸಂಬಂಧ ಬೆಂಗಳೂರಿಗೆ ಬಂದಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗವಿಜಯ್ ಸಿಂಗ್ ಅವರ ಬಳಿ ತೆರಳಿದ್ದ ಷರೀಫ್ ತಮ್ಮ ಮೊಮ್ಮಗನಿಗೆ ಟಿಕೆಟ್ ನೀಡಲು ಆಗ್ರಹಿಸಿದ್ದರು.