ಸಚಿವ ಸ್ಥಾನದ ಆಕಾಂಕ್ಷಿ ನಾನಲ್ಲ : ಸಿ.ಎಂ.ಇಬ್ರಾಹಿಂ
ಬೆಂಗಳೂರು, ಆ.21 : 'ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ವರಿಷ್ಠರು ನನಗೆ ಜವಾಬ್ದಾರಿ ವಹಿಸಿದ್ದಾರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ' ಎಂದು ಸಿ.ಎಂ.ಇಬ್ರಾಹಿಂ ಸ್ಪಷ್ಟಪಡಿಸಿದರು.
ಗೃಹ ಸಚಿವರಾಗಿ ರಮಾನಾಥ ರೈ: ಇನ್ನೇನು ಅಧಿಕೃತ ಘೋಷಣೆ?
ಸೋಮವಾರ ವಿಧಾನಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಸಿ.ಎಂ.ಇಬ್ರಾಹಿಂ, 'ಹೈಕಮಾಂಡ್ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿ ನೀಡಿದ್ದಾರೆ. ಅದನ್ನು ನಿಭಾಯಿಸುತ್ತೇನೆ, ಪಕ್ಷವನ್ನು ಸಂಘಟಿಸುವ ಮೂಲಕ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ' ಎಂದರು.
ಕಳೆದ ವಾರ ಸಿ.ಎಂ.ಇಬ್ರಾಹಿಂ ಅವರನ್ನು ಸಚಿವರನ್ನಾಗಿ ಮಾಡಲಾಗುತ್ತದೆ. ಆದ್ದರಿಂದ, ಅವರನ್ನು ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ ಎಂಬ ಸುದ್ದಿ ಹಬ್ಬಿತ್ತು. ಇಂದು ಸಿ.ಎಂ.ಇಬ್ರಾಹಿಂ ಈ ಕುರಿತು ಸ್ಪಷ್ಟನೆ ನೀಡಿದರು.
ಸಚಿವ ಸ್ಥಾನ ಕೊಡ್ತಾರಾ? : ತುಮಕೂರಿನಲ್ಲಿ ಭಾನುವಾರ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಸಿ.ಎಂ.ಇಬ್ರಾಹಿಂ ಅವರನ್ನು ಪರಿಷತ್ ಸದ್ಯರಾಗಿ ಮಾಡ್ತಾ ಇರೋದೆ ಹೆಚ್ಚು, ಸಚಿವ ಸ್ಥಾನ ಬೇರೆ ಕೊಡ್ತಾರಾ?' ಎಂದು ಮಾಧ್ಯಮಗಳನ್ನು ಪ್ರಶ್ನಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಮೂರು ಸಚಿವ ಸ್ಥಾನಗಳು ಖಾಲಿ ಇವೆ. ಸಂಪುಟ ವಿಸ್ತರಣೆ ಮಾಡಲು ಹೈಕಮಾಂಡ್ ಸಹ ಒಪ್ಪಿಗೆ ಕೊಟ್ಟಿದೆ. ಪರಿಷತ್ ಸದ್ಯರಾಗುವ ಸಿದ್ದರಾಮಯ್ಯ ಪರಮಾಪ್ತ ಸಿ.ಎಂ.ಇಬ್ರಾಹಿಂ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು.