ತಿವಾರಿ ಸಾವು: ತನಿಖೆಗೆ ಕೋರಿ ಯೋಗಿಗೆ ಪತ್ರ ಬರೆದ ಸಿದ್ದರಾಮಯ್ಯ
ಅನುರಾಗ್ ತಿವಾರಿ ಸಾವು ಪ್ರಕರಣಕ್ಕೆ ತನಿಖೆ ನಡೆಸಿ, ಸತ್ಯಾಸತ್ಯತೆ ಹೊರಬರಲಿ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.
ಬೆಂಗಳೂರು, ಮೇ 19: ಕರ್ನಾಟಕ ರಾಜ್ಯ ಆಹಾರ ಇಲಾಖೆ ಆಯುಕ್ತರಾಗಿದ್ದ ಅನುರಾಗ್ ತಿವಾರಿ ಅವರ ಸಾವಿನ ತನಿಖೆ ಕುರಿತಂತೆ ಅನೇಕ ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ಸರಿಯಾದ ತನಿಖೆ ನಡೆಸಿ, ಸತ್ಯಾಸತ್ಯತೆ ಹೊರಬರಲಿ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.
ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ (36) ಅವರ ಸಾವಿನ ತನಿಖೆಯನ್ನು ವಿಶೇಷ ತನಿಖಾ ದಳ(ಎಸ್ಐಟಿ) ಕೈಗೆತ್ತಿಕೊಂಡಿದೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.[ತಿವಾರಿ ಸಾವಿನ ಕೇಸ್, ಶೋಭಾ ಮನವಿ ಪುರಸ್ಕರಿಸಿದ ಸಿಎಂ ಯೋಗಿ]
ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ಬೆಂಬಲವಿರುವ ಸಾವಿರಾರು ಕೋಟಿ ರುಪಾಯಿ ಹಗರಣ ಬಯಲಿಗೆಳೆಯಲು ಐಎಎಸ್ ಅಧಕಾರಿ ಅನುರಾಗ್ ತಿವಾರಿ ಸಜ್ಜಾಗಿದ್ದರು ಎಂದು ಉತ್ತರ ಪ್ರದೇಶ ಸಚಿವ ಸುರೇಶ್ ಕುಮಾರ್ ಖನ್ನಾ ಅವರು ಗುರುವಾರ ವಿಧಾನಸಭೆಯಲ್ಲಿ ಆರೋಪಿಸಿದ್ದರು. ಆದರೆ, ಈ ಆರೋಪವನ್ನು ಕರ್ನಾಟಕ ಸರ್ಕಾರ ತಳ್ಳಿ ಹಾಕಿದೆ.[ಐಎಎಸ್ ತಿವಾರಿ ಸಾವು: ಪೊಲೀಸ್ ಅಧಿಕಾರಿಗಳ ಜತೆ ಪರಂ ಚರ್ಚೆ]
ಅನುರಾಗ್ ತಿವಾರಿ ಮೇಲೆ ಸರ್ಕಾರದ ಯಾವುದೇ ಒತ್ತಡ ಇರಲಿಲ್ಲ. ಸಿಎಂ ಸಿದ್ದರಾಮಯ್ಯರ ಆಪ್ತ ಅಧಿಕಾರಿಗಳಲ್ಲಿ ಒಬ್ಬರಾಗಿದ್ದರು. ಹೆಚ್ಚುವರಿ ಆಯುಕ್ತರಾಗಿ, ಕೊಡಗು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ, ಹಣಕಾಸು ಇಲಾಖೆಯ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2015ರಲ್ಲಿ ಅವರನ್ನು ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು. ಅನುರಾಗ್ರನ್ನು ರಾಜ್ಯ ಸರ್ಕಾರ ಸರಿಯಾಗಿಯೇ ನೋಡಿಕೊಂಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಹೇಳಿದ್ದರು.[ಮತ್ತೊಬ್ಬ ಡಿಕೆ ರವಿ? ಅನುರಾಗ್ ತಿವಾರಿ ಸಾವಿನಲ್ಲೂ ರಾಜಕೀಯ]
{promotion-urls}