ರಾಜ್ಯದಾದ್ಯಂತ ಸರ್ಕಾರಿ ನೌಕರರ ಪ್ರತಿಭಟನೆ ಚಿತ್ರಗಳು
ಹುಬ್ಬಳ್ಳಿ, ಗದಗ, ಜೂನ್, 02: ಕೇಂದ್ರ ಸರ್ಕಾರಿ ನೌಕರರಿಗೆ ನೀಡುತ್ತಿರುವ ವೇತನ ಮತ್ತು ಭತ್ಯೆಯನ್ನೂ ನಮಗೂ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ಹುಬ್ಬಳ್ಳಿ ಮತ್ತು ಗದಗದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯಗಳನ್ನು ತಮಗೂ ನೀಡಬೇಕು ಆಗ್ರಹಿಸಿ ರಾಜ್ಯದಾದ್ಯಂತ ಸರ್ಕಾರಿ ನೌಕರರು ಮುಷ್ಕರ ನಡೆಸಲು ಕರೆ ಕೊಡಲಾಗಿತ್ತು. ಕೇಂದ್ರ ನೌಕರರಿಗೆ ಸರಿಸಮಾನದ ವೇತನ ಹಾಗೂ ಭತ್ಯೆಗಳನ್ನು 24 ರಾಜ್ಯಗಳಲ್ಲಿ ನೀಡಲಾಗುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ತತ್ವದಂತೆ ರಾಜ್ಯ ಸರ್ಕಾರಿ ನೌಕರರಿಗೂ ವೇತನ ನೀಡಬೇಕು ಎಂದು ಒತ್ತಾಯಿಸಿದರು.[ನೌಕರರ ಬೇಡಿಕೆಗಳೇನು]
ಪ್ರತಿಭಟನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬೆಳಗ್ಗೆ ಎಂದಿನಂತೆ ಕಚೇರಿಗೆ ಬಂದ ನೌಕರರು ನಂತರ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಈ ಕುರಿತು ಎರಡು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಆದರೆ, ಈ ಬೇಡಿಕೆಯನ್ನು ಮುಖ್ಯಮಂತ್ರಿ ಒಪ್ಪಿದ್ದರೂ 2016-17ನೇ ಸಾಲಿನ ಬಜೆಟ್ ನಲ್ಲಿ ಪ್ರಸ್ತಾಪ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ದೂರಿದರು.[ಕೇಂದ್ರ ಸರ್ಕಾರಿ ಪಿಂಚಣಿದಾರರಿಗೆ ಒಳ್ಳೆ ಸುದ್ದಿ]
ಹಲವು ವರ್ಷಗಳಿಂದ ಕೇಂದ್ರ ಹಾಗೂ ರಾಜ್ಯ ಸರಕಾರಿ ನೌಕರರ ನಡುವಿನ ವೇತನ ಭತ್ಯೆಗಳಲ್ಲಿನ ತಾರತಮ್ಯ, ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಬೇಡಿಕೆ ಇಟ್ಟಿದ್ದೇವೆ. ರಾಜ್ಯ ಸರಕಾರಿ ನೌಕರರಿಗೂ ಸಹ ಕೇಂದ್ರ ಸರಕಾರಿ ನೌಕರರಿಗೆ ಸರಿಸಮಾನವಾದ ವೇತನ ಮತ್ತು ಭತ್ಯೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.[ಪ್ರತಿಭಟನೆಗೆ ಬೆಂಬಲ ಹೇಗಿತ್ತು?]
ದೇಶದ ಇತರೆ 24 ರಾಜ್ಯಗಳು ತನ್ನ ನೌಕರರಿಗೆ ಕೇಂದ್ರ ಸರಕಾರಿ ನೌಕರರಿಗೆ ಸರಿಸಮಾನವಾದ ವೇತನ ಭತ್ಯೆ ಮಂಜೂರ ಮಾಡಿರುವ ಅಂಕಿ ಅಂಶ ನೀಡಲಾಗಿದೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರದ ರಾಜ್ಯಗಳೂ ಸಹ ತನ್ನ ನೌಕರರಿಗೆ ಕೇಂದ್ರ ಸರಕಾರಿ ನೌಕರರಿಗೆ ಸರಿಸಮಾನವಾದ ವೇತನ ಭತ್ಯೆಗಳನ್ನು ಮಂಜೂರು ಮಾಡಿರುವ ವಿವರ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದ್ದು ಅಂತೆಯೇ ನಮಗೂ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಒತ್ತಾಯ ಮಾಡಿದರು.