ಚಿತ್ರಗಳು : ರಾಹುಲ್ ಗಾಂಧಿ ಕರ್ನಾಟಕ ಭೇಟಿ
ಬೆಂಗಳೂರು, ಅಕ್ಟೋಬರ್ 09 : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಎರಡು ದಿನಗಳ ಭೇಟಿಗಾಗಿ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿದರು. ಇಂದು ಮಂಡ್ಯ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಂಡರು. ಶನಿವಾರ ರಾಹುಲ್ ಗಾಂಧಿ ಹಾವೇರಿ ಜಿಲ್ಲೆಯಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.
ಶುಕ್ರವಾರ ಬೆಳಗ್ಗೆ 9.40ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ತೆರಳಿದರು. ಅಲ್ಲಿಂದ ವಾಪಸ್ ಬಂದ ನಂತರ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. [ಕರ್ನಾಟಕದಲ್ಲಿ ರಾಹುಲ್ ಗಾಂಧಿ : ಶುಕ್ರವಾರ ಏನೇನಾಯ್ತು?]
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ 'ಈ ವರ್ಷ ರಾಜ್ಯದಲ್ಲಿ ಹಲವು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಮನೆಗೆ ಭೇಟಿ ನೀಡಿ ಸಮಸ್ಯೆ ಕೇಳಿದ್ದೇನೆ, ಅವರಿಗೆ ಸಾಂತ್ವನ ಹೇಳಿದ್ದೇನೆ. ಕೇಂದ್ರ ಸರ್ಕಾರ ರೈತರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಯುಪಿಎ ಸರ್ಕಾರ ರೈತರಿಗೆ ಅಗತ್ಯ ನೆರವನ್ನು ನೀಡಿತ್ತು' ಎಂದರು. [ರಾಹುಲ್ ಗಾಂಧಿ ಮಂಡ್ಯದಲ್ಲಿ ಹೇಳಿದ್ದೇನು?]
ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಗುರುವಾರ ಆತ್ಮಹತ್ಯೆಗೆ ಶರಣಾದ ರೈತ ಲೋಕೇಶ್ ಮನೆಗೆ ಭೇಟಿ ನೀಡಿದ ರಾಹುಲ್ ಗಾಂಧಿ ಮೃತದೇಹಕ್ಕೆ ಅಂತಿಮ ನಮನ ಸಲ್ಲಿಸಿದರು. ಕೆಪಿಸಿಸಿ ವತಿಯಿಂದ 1 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದರು. ರಾಹುಲ್ ಗಾಂಧಿ ಭೇಟಿಯ ಚಿತ್ರಗಳು ಇಲ್ಲಿವೆ......
ಬೆಂಗಳೂರಿಗೆ ಬಂದ ರಾಹುಲ್ ಗಾಂಧಿ
ಶುಕ್ರವಾರ ಬೆಳಗ್ಗೆ 9.40ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಹುಲ್ ಗಾಂಧಿ ಆಗಮಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ, ವೀರಪ್ಪ ಮೊಯ್ಲಿ ಮುಂತಾದವರು ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದರು.
ಮಂಡ್ಯದಲ್ಲಿ ರಾಜ್ಯ ನಾಯಕರೊಂದಿಗೆ ಸಭೆ
ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಮಂಡ್ಯದ ವಿಸಿ ಫಾರ್ಮ್ಗೆ ಆಗಮಿಸಿದ ರಾಹುಲ್ ಗಾಂಧಿ ಅಲ್ಲಿ ಕೆಲವು ಕಾಲ ರಾಜ್ಯದ ನಾಯಕರೊಂದಿಗೆ ಚರ್ಚೆ ನಡೆಸಿದರು. 'ಈ ವರ್ಷದಲ್ಲೇ ಏಕೆ ರೈತರ ಆತ್ಮಹತ್ಯೆ ಹೆಚ್ಚಳವಾಗಿದೆ? ರೈತರ ಆತ್ಮಹತ್ಯೆ ತಡೆಯಲು ಯಾವ ಕ್ರಮ ಕೈಗೊಂಡಿದ್ದೀರಿ? ಎಂದು ಪ್ರಶ್ನಿಸಿದರು. ನಾಯಕರಿಂದ ಮಾಹಿತಿ ಪಡೆದುಕೊಂಡರು.
ಅಂತಿಮ ದರ್ಶನ ಪಡೆದ ರಾಹುಲ್
ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಗುರುವಾರ ಆತ್ಮಹತ್ಯೆಗೆ ಶರಣಾದ ರೈತ ಲೋಕೇಶ್ ಮನೆಗೆ ಭೇಟಿ ನೀಡಿದ ರಾಹುಲ್ ಗಾಂಧಿ ಅವರು ಮೃತ ರೈತನ ಅಂತಿಮ ದರ್ಶನ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಈ ಸಂರ್ಭದಲ್ಲಿ ಜೊತೆಗಿದ್ದರು.
1 ಲಕ್ಷ ರೂ. ಚೆಕ್ ವಿತರಣೆ
ಮೃತ ರೈತ ಅಶೋಕ್ ಕುಟುಂಬಕ್ಕೆ ಸಾಂತ್ವನ ಹೇಳಿದ ರಾಹುಲ್ ಗಾಂಧಿ ಕೆಪಿಸಿಸಿ ವತಿಯಿಂದ 1 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದರು.
ರೈತರೊಂದಿಗೆ ಸಂವಾದ
ರೈತರ ಮನೆಗಳಿಗೆ ಭೇಟಿ ನೀಡಿದ ಬಳಿಕ ವಿಸಿ ಫಾರ್ಮ್ನಲ್ಲಿ ಸುಮಾರು 200 ರೈತರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಿದರು. ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಸಂವಾದ ನಡೆಸಿಕೊಟ್ಟರು. ಸಿದ್ದರಾಮಯ್ಯ, ದಿಗ್ವಿಜಯ್ ಸಿಂಗ್, ಪರಮೇಶ್ವರ್ ಅವರು ಸಂವಾದದಲ್ಲಿ ಪಾಲ್ಗೊಂಡಿದ್ದರು.