ಚಿಂತೆ ಬಿಡಿ, ಗಿಡ ನೆಡಿ ಎಂದ ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ,ಮೇ 21: ಜಿಲ್ಲೆಯ ಕಲಬುರಗಿ-ಸೇಡಂ, ಕಲಬುರಗಿ-ಅಫಜಲಪುರ, ಕಲಬುರಗಿ-ಶಹಾಬಾದ ಮತ್ತಿತರ ಪ್ರಮುಖ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ರಸ್ತೆಗಳ ಬದಿಯಲ್ಲಿ ಈ ಬಾರಿ ಹೆಚ್ಚು ಗಿಡಗಳನ್ನು ನೆಡುವ ವ್ಯವಸ್ಥೆ ಮಾಡಬೇಕು ಎಂದು ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಸೂಚಿಸಿದರು.
ಶನಿವಾರ ಜಿಲ್ಲಾ ಮಟ್ಟದ ಜಾಗೃತ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಸಮಿತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ಹೈದರಾಬಾದ್ ಮತ್ತು ಮುಂತಾದ ಪ್ರಮುಖ ನಗರಗಳಲ್ಲಿ ಅನುಸರಿಸುತ್ತಿರುವ ರಸ್ತೆ ಬದಿಗಳಲ್ಲಿರುವ ದೊಡ್ಡ ದೊಡ್ಡ ಗಿಡಗಳನ್ನು ಯಥಾವತ್ತಾಗಿ ಸ್ಥಳಾಂತರಿಸುವ ವಿಧಾನ ಹಾಗೂ ಇದಕ್ಕೆ ತಗಲುವ ವೆಚ್ಚದ ಬಗ್ಗೆ ಮಾಹಿತಿ ಪಡೆದುಕೊಂಡು ಕಲಬುರಗಿ ಜಿಲ್ಲೆಯಲ್ಲಿಯೂ ಈ ವಿಧಾನ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. [ಬೇಳೆಕಾಳು ಖರೀದಿಗೆ ಟೆಂಡರ್ ಆಹ್ವಾನಿಸಿದ ರಾಜ್ಯ ಸರ್ಕಾರ]
ಶಿಕ್ಷಣ ಹಕ್ಕು ಕಾಯ್ದೆ ಅನ್ವಯ ನಿಯಮಾನುಸಾರ ಖಾಸಗಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಮಕ್ಕಳ ಪಾಲಕರ ಹೆಸರು, ಪಡಿತರ ಚೀಟಿ, ಆಧಾರ್ ಸಂಖ್ಯೆ ಮುಂತಾದವುವನ್ನು ಪರಿಶೀಲಿಸಬೇಕು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕಟ್ಟಡಗಳು ಪೂರ್ಣಗೊಂಡ ಸಂದರ್ಭಗಳಲ್ಲಿ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸಿ ಸಮಾರಂಭಗಳನ್ನು ಆಯೋಜಿಸಬೇಕು ಎಂದು ತಿಳಿಸಿದರು.
ಕಡಗಂಚಿ ಗ್ರಾಮದ ಬಳಿಯಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಎದುರಿಸುತ್ತಿರುವ ತೀವ್ರ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳು ಜಂಟಿಯಾಗಿ ಕಾರ್ಯಯೋಜನೆ ರೂಪಿಸಬೇಕು ತಿಳಿಸಿದರು.[ಗಮನಿಸಿ, 120 ರು.ಗಿಂತ ಹೆಚ್ಚಿನ ದರಕ್ಕೆ ಬೇಳೆಕಾಳು ಮಾರುವಂತಿಲ್ಲ]
ಬೆಣ್ಣೆತೊರಾ ನದಿಯಿಂದಾದರೂ ಅಥವಾ ಶೋರಗುಂಬಜ್ ನಿಂದಾದರೂ ನೀರು ತರಬೇಕು. ವಿಶ್ವವಿದ್ಯಾಲಯ ಆವರಣದಲ್ಲಿ ಹೆಚ್ಚು ಸಸಿಗಳನ್ನು ನೆಡಬೇಕು ಎಂದು ಸಲಹೆ ನೀಡಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಎಲ್ಲ ತಾಲೂಕುಗಳ ಅಂಗನವಾಡಿ ಕೇಂದ್ರಗಳಿಗೆ ಆಕಸ್ಮಿಕ ಭೇಟಿ ನೀಡಿ ಅಂಗನವಾಡಿ ಕೇಂದ್ರಗಳ ಪ್ರಗತಿ ಪರಿಶೀಲಿಸಬೇಕು. ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕಟ್ಟಡ ಹಾಗೂ ಇತರ ಮೂಲಭೂತ ಸೌಕರ್ಯಗಳ ಪ್ರಸ್ತಾವನೆ ಪಟ್ಟಿ ತಯಾರಿಸಿ ಸಂಬಂಧಪಟ್ಟ ಶಾಸಕರಿಗೆ ನೀಡಿ ಪ್ರತಿಯನ್ನು ಜಿಲ್ಲಾ ಸಚಿವರಿಗೆ ಹಾಗೂ ಹೆಚ್.ಕೆ.ಆರ್.ಡಿ.ಬಿ. ಅಧ್ಯಕ್ಷರಿಗೆ ಸಲ್ಲಿಸಬೇಕು ಎಂದು ತಿಳಿಸಿದರು.
ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ, ವಿಧಾನ ಪರಿಷತ್ ಸದಸ್ಯ ಇಕ್ಬಾಲ್ ಅಹ್ಮದ್ ಸರಡಗಿ, ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿರುದ್ಧ ಶ್ರವಣ ಪಿ., ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.