ಬುಧವಾರವೂ ಸದನದಲ್ಲಿ ಕೇಳಿಬಂದ ವಾಚ್ ಸದ್ದು!
ಬೆಂಗಳೂರು, ಮಾರ್ಚ್ 02 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಜ್ರ ಖಚಿತ ಊಬ್ಲೋ ವಾಚ್ ವಿವಾದ ವಿಧಾನಸಭೆಯಲ್ಲಿ ಬುಧವಾರವೂ ಸದ್ದು ಮಾಡಿತು. ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ಗದ್ದಲದಿಂದಾಗಿ ವಿಧಾನಸಭೆ ಕಲಾಪವನ್ನು ಎರಡು ಬಾರಿ ಮುಂದೂಡಲಾಯಿತು. ವಿಧಾನಪರಿಷತ್ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು. [ವಾಚ್ ವಾರ್ : ಎಚ್ಡಿಕೆಯಿಂದ ಕಾಗೋಡು ತಿಮ್ಮಪ್ಪ ತನಕ!]
ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಜ್ರ ಖಚಿತ ಊಬ್ಲೋ ವಾಚನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಹಸ್ತಾಂತರ ಮಾಡಿದ್ದಾರೆ. ಆದರೆ, ಪ್ರತಿಪಕ್ಷಗಳು ವಾಚ್ ಮೂಲದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸುತ್ತಿವೆ. [ವಾಚು ಹಸ್ತಾಂತರ ಮಾಡಿದ ಸಿದ್ದರಾಮಯ್ಯ]
ಹಿಂದಿನ ಸುದ್ದಿ : ಬುಧವಾರ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ನಿಲುವಳಿ ಸೂಚನೆ ಮಂಡನೆ ಮಾಡಲು ಅವಕಾಶ ಕೊಡಬೇಕು ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಮಾಡಿದರು. ಜೆಡಿಎಸ್ ಸದಸ್ಯರು ಇದಕ್ಕೆ ಧ್ವನಿಗೂಡಿಸಿದರು. [ಸದನದಲ್ಲಿ ವಾಚ್ ವಾರ್ : ಯಾರು, ಏನು ಹೇಳಿದರು?]
ಆದರೆ, ಸ್ಪೀಕರ್ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯನ್ನಯ ಕೈಗೆತ್ತಿಕೊಳ್ಳುತ್ತಿದ್ದಂತೆ ಬಿಜೆಪಿ ಸದಸ್ಯರ ಗದ್ದಲ ಜೋರಾಯಿತು. ವಾಚ್ ವಿವಾದದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಣೆ ನೀಡಬೇಕು ಎಂದು ಜಗದೀಶ್ ಶೆಟ್ಟರ್ ಮತ್ತು ಜೆಡಿಎಸ್ನ ವೈ.ಎಸ್.ವಿ.ದತ್ತಾ ಅವರು ಒತ್ತಾಯಿಸಿದರು. [ಸಖತ್ ಮಿಂಚುತ್ತಿರುವ ದುಬಾರಿ ಉಬ್ಲೋ ವಾಚುಗಳ ಕಥೆ]
ಪ್ರತಿಪಕ್ಷಗಳ ಗದ್ದಲ ಹೆಚ್ಚಾಗಿದ್ದರಿಂದ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಕಲಾಪವನ್ನು ಅರ್ಧಗಂಟೆಗಳ ಕಾಲ ಮುಂದೂಡಿದರು. ಸುಗಮವಾಗಿ ಕಲಾಪ ನಡೆಸುವ ಕುರಿತು ಚರ್ಚೆ ನಡೆಸಲು ಸಭಾನಾಯಕರ ಸಭೆಯನ್ನು ಕರೆದರು. ಸ್ಪೀಕರ್ ಕೊಠಡಿಯಲ್ಲಿ ಸಭಾನಾಯಕರ ಸಭೆ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಟಿ.ಬಿ.ಜಯಚಂದ್ರ, ಪ್ರತಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
* ವಿಧಾನಪರಿಷತ್ತಿನಲ್ಲಿಯೂ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ವಾಚ್ ವಿವಾದದ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಮನವಿ ಮಾಡಿದರು. ವಾಚ್ ವಿವಾದದ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು. ಉಳಿದ ಬಿಜೆಪಿ ಸದಸ್ಯರು ಇದಕ್ಕೆ ಧ್ವನಿಗೂಡಿಸಿದರು. ಗದ್ದಲ ಹೆಚ್ಚಾದ ಹಿನ್ನಲೆಯಲ್ಲಿ ಕಲಾವಪನ್ನು 1 ಗಂಟೆಗಳ ಮುಂದೂಡಲಾಯಿತು.