ರಾಜ್ಯದ 10 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ
ಬೆಂಗಳೂರು, ಮಾ. 26: ಶುಕ್ರವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ತಟ್ಟಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು, ಮೈಸೂರು, ಬೀದರ್, ರಾಯಚೂರು, ಕಲಬುರಗಿ, ವಿಜಯಪುರ ಸೇರಿದಂತೆ ನಾನಾಕಡೆ ದಾಳಿ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ.[ಮೈಸೂರು, ಬೀದರ್, ಕಲಬುರಗಿಯಲ್ಲಿ ಲೋಕಾ ದಾಳಿ]
ಬೆಂಗಳೂರಿನಲ್ಲಿ ಇಬ್ಬರು ಇಂಜಿನಿಯರ್ ಗಳ ಮನೆ ಮೇಲೆ ದಾಳಿ ಮಾಡಲಾಗಿದೆ. ಇಇ ಕೃಷ್ಣಪ್ಪ ಅವರ ಹೆಬ್ಬಾಳದ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಮೈಸೂರಿನಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಮಂಡ್ಯ ಜಿಲ್ಲೆ ಕೆಎಫ್ ಎಸ್ ಸಿ ಅಧಿಕಾರಿ ಚಂದ್ರೇಗೌಡ ಅವರ ರಾಘವೇಂದ್ರ ನಗರದ ಮನೆಯಿಂದ ಆಸ್ತಿ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ವಿಜಯಪುರ ಜಲಮಂಡಳಿ ಎಇಇ ಐ.ಜಿ.ದೇವರ್, ಕಲಬುರಗಿಯ ಜೂನಿಯರ್ ಇಂಜಿನಿಯರ್ ಜಗನ್ನಾಥ್ ಎನ್ನುವವರ ನಿವಾಸಗಳ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ನಡೆದಿದೆ.
ರಾಜ್ಯದ 10 ಜಿಲ್ಲೆಗಳ 17 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ ಲೋಕಾ ಪೊಲೀಸರು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ರಾಯಚೂರಿನ ಅಬಕಾರಿ ಪಿಎಸ್ ಐ ಹನುಮಂತಪ್ಪ ಮನೆ ಮೇಲೆ ದಾಳಿ ನಡೆಸಿ, ಮನೆ ದಾಖಲೆ ಪತ್ರ, ಟ್ರ್ಯಾಕ್ಟರ್ ಮತ್ತಿತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.