ಮಹದಾಯಿ ಪರಿಹಾರಕ್ಕೆ ರಾಜ್ಯ ಸರ್ಕಾರ ಬದ್ಧ: ಎಂಬಿ ಪಾಟೀಲ್
ಬೆಂಗಳೂರು, ಆಗಸ್ಟ್. 28: ಮಹದಾಯಿ ಯೋಜನೆ ಕುರಿತು ಸ್ಪಷ್ಟ ತೀರ್ಮಾನ ತೆಗೆದುಕೊಳ್ಳಲು ಒಂದು ತಿಂಗಳ ಒಳಗಾಗಿ ವೇದಿಕೆಯೊಂದನ್ನು ಸೃಷ್ಟಿ ಮಾಡಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಎಂ. ಬಿ. ಪಾಟೀಲ್ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟದದಲ್ಲಿರುವ ರಾಜ್ಯ ಪ್ರತಿನಿಧಿಸುವ ನಾಲ್ವರು ಸಚಿವರು ಕಳಸಾ-ಬಂಡೂರಿ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಮನವರಿಕೆ ಮಾಡಿ, ಮಾತುಕತೆಗೆ ವೇದಿಕೆಯನ್ನು ಸಜ್ಜುಗೊಳಿಸಲಿದ್ದಾರೆ. ಕೇಂದ್ರ ನಗರಾಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಂ. ವೆಂಕಯ್ಯ ನಾಯ್ಡು ಭರವಸೆ ನೀಡಿದ್ದಾರೆ ಎಂದಿ ತಿಳಿಸಿದರು.[ಮಹದಾಯಿ: ಶೀಘ್ರ ಪರಿಹಾರಕ್ಕೆ ಸಿದ್ದರಾಮ ಸ್ವಾಮೀಜಿ ಒತ್ತಾಯ]
ಒಂದು ವೇಳೆ ನಿಗದಿತ ಅವಧಿಯಲ್ಲಿ ಸಮಸ್ಯೆ ಬಗೆಹರಿಸಲು ಸಾಧ್ಯಗವಾಗದೇ ಹೋದರೆ ನ್ಯಾಯಾಧಿಕರಣಕ್ಕೆ ಮೇಲ್ಮನವಿ ಸಲ್ಲಿಸಿ, ಮಧ್ಯಂತರ ಆದೇಶ ಪಡೆಯಲು ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ರೈತರು ಪ್ರತಿಭಟನೆಯಮನ್ನು ಕೈ ಬಿಡಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಎರಡೂ ಒಂದಾಗಿ ಸಮಸ್ಯೆ ಬಗೆಹರಿಸುವ ಪ್ರಮಾಣಿಕ ಯತ್ನ ಮಾಡುತ್ತಿವೆ ಎಂದು ಮನವಿ ಮಾಡಿದರು.
2010 ರಲ್ಲಿ ನೇಮಕಗೊಂಡ ನ್ಯಾಯಾಧಿಕರಣವು ಈವರೆಗೂ ವಿಚಾರಣೆಯನ್ನು ನಡೆಸುತ್ತಲೇ ಇದೆ. ಐದು ವರ್ಷಗಳೇ ಕಳೆದರೂ, ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ. ತ್ವರಿತ ವಿಚಾರಣೆಯಾಗಬೇಕು ಎಂಬುದು ಜನರ ಆಶಯ. ಇದಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಮಹದಾಯಿ ಯೋಜನೆ ಜಾರಿ ಸಂಬಂಧ ಉತ್ತರ ಕರ್ನಾಟಕದಲ್ಲಿ ರೈತರು ವಾರಗಳ ಕಾಲದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಮಠಾಧೀಶರು ಸಹ ರೈತರಿಗೆ ಬೆಂಬಲ ಸೂಚಿಸಿದ್ದರು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ನಿಯೋಗ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿತ್ತು. ಆದರೆ ಸಕಾರಾತ್ಮಕ ಸ್ಪಂದನೆ ಸಿಕ್ಕಿರಲಿಲ್ಲ. ನಂತರ ಉತ್ತರ ಕರ್ನಾಟಕದಲ್ಲಿ ಪ್ರತಿಭಟನೆ ಕಾವು ಜೋರಾಗಿತ್ತು.