ಹೈಕೋರ್ಟ್ ಮೆಟ್ಟಿಲೇರಿದ ಪ್ರಣಬ್ ಮೊಹಾಂತಿ, ಎ.ಎಂ.ಪ್ರಸಾದ್
ಬೆಂಗಳೂರು, ಜುಲೈ 19 : ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಾಂತಿ ಮತ್ತು ಎ.ಎಂ.ಪ್ರಸಾದ್ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮಡಿಕೇರಿ ಜೆಎಂಎಫ್ಸಿ ಕೋರ್ಟ್ ತಮ್ಮ ವಿರುದ್ಧ ಎಫ್ಐಆರ್ ದಾಖಲು ಮಾಡಲು ನೀಡಿದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದರು.
ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಅವರು ಮಂಗಳವಾರ ಕರ್ನಾಟಕ ಹೈಕೋರ್ಟ್ನ ಏಕ ಸದಸ್ಯ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧ ಎಫ್ಐಆರ್ ದಾಖಲು ಮಾಡಲು ನೀಡಿದ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೋರಿದರು. [FIR ದಾಖಲಿಸಲು ಸೂಚನೆ, ಮುಂದೇನು?]
ಮಡಿಕೇರಿ ಜೆಎಂಎಫ್ಸಿ ಕೋರ್ಟ್ ನ್ಯಾಯಾಧೀಶೆ ಅನ್ನಪೂರ್ಣೇಶ್ವರಿ ಅವರು ಸೋಮವಾರ ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಮತ್ತು ಕೆ.ಜೆ.ಜಾರ್ಜ್ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಲು ಆದೇಶ ನೀಡಿದ್ದರು.[ಗಣಪತಿ ಸಾವಿನ ಪ್ರಕರಣದ Timeline]
ಈ ಆದೇಶ ಹೊರಬಂದ ಬಳಿಕ ಸರ್ಕಾರ ಇಬ್ಬರೂ ಅಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ತೆರಳಲು ಸೂಚನೆ ನೀಡಿದೆ. ಕೆ.ಜೆ.ಜಾರ್ಜ್ ಅವರು ಸೋಮವಾರ ಸಂಜೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.[ವಿಡಿಯೋ - ಡಿವೈಎಸ್ ಪಿ ಗಣಪತಿ ಕಡೇ ಸಂದರ್ಶನ]
ಅರ್ಜಿಯಲ್ಲೇನಿದೆ? : ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ ಎಂ.ಕೆ.ಗಣಪತಿ ಅವರ ಪುತ್ರ ನೇಹಾಲ್ ಅವರು ಮಡಿಕೇರಿ ಕೋರ್ಟ್ನಲ್ಲಿ ಖಾಸಗಿ ದೂರು ದಾಖಲಿಸುವ ಮೊದಲು ಸಕ್ಷಮ ಪ್ರಾಧಿಕಾರದ ಒಪ್ಪಿಗೆ ಪಡೆದಿಲ್ಲ ಎಂದು ಉಲ್ಲೇಖಿಸಿದ್ದಾರೆ.
ತಮ್ಮ ವಿರುದ್ಧದ ಆರೋಪಗಳಿಗೆ ಸಮರ್ಪಕವಾದ ಸಾಕ್ಷಿಗಳಿಲ್ಲ. ಆತ್ಮಹತ್ಯೆ ಪ್ರಕರಣದ ಬಗ್ಗೆ ಸರ್ಕಾರ ಈಗಾಗಲೇ ಸಿಐಡಿ ಮತ್ತು ನ್ಯಾಯಾಂಗ ತನಿಖೆಗೆ ಆದೇಶ ನೀಡಿದೆ. ಸಿಐಡಿ ತನಿಖೆ ಜಾರಿಯಲ್ಲಿದೆ. ಆದ್ದರಿಂದ ಮತ್ತೊಂದು ಎಫ್ಐಆರ್ ದಾಖಲು ಮಾಡಲು ನೀಡಿದ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೋರಿದ್ದಾರೆ.