ಕಾವೇರಿ ಗಲಭೆ : ಕರ್ನಾಟಕ, ತಮಿಳುನಾಡು ಕಿವಿ ಹಿಂಡಿದ ಕೋರ್ಟ್
ಬೆಂಗಳೂರು, ಸೆಪ್ಟೆಂಬರ್ 15 : ರಾಜ್ಯದಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿಯಾಗದಂತೆ ಕಾನೂನು ಸುವ್ಯವಸ್ಥೆ ಕಾಪಾಡುವುದು ಆಯಾ ರಾಜ್ಯಗಳ ಕರ್ತವ್ಯ ಎಂದು ಸುಪ್ರೀಂಕೋರ್ಟ್ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಕಿವಿ ಹಿಂಡಿದೆ.
ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಬೇಕು ಎಂಬ ಅರ್ಜಿಯ ವಿಚಾರಣೆ ಸಮಯದಲ್ಲಿ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ನ್ಯಾಯಾಲಯದ ಆದೇಶದ ವಿರುದ್ಧ ಪ್ರತಿಭಟನೆ ನಡೆಸಲು ಅವಕಾಶ ನೀಡಬಾರದು ಎಂದು ಹೇಳಿದೆ.[ಶಾಂತಿ ಕಾಪಾಡಲು ಅರ್ಜಿ, ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್]
ಈ ವಿಚಾರದ ಕುರಿತು ಸೆಪ್ಟೆಂಬರ್ 20ರಂದು ವಿಚಾರಣೆ ನಡೆಸುವಾಗ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳು ಉತ್ತರ ನೀಡಲು ಸಿದ್ಧವಾಗಿರಬೇಕು ಎಂದು ಕೋರ್ಟ್ ಸೂಚನೆ ನೀಡಿದೆ. ಅರ್ಜಿಯ ವಿಚಾರಣೆಯನ್ನು ಸೆ.20ಕ್ಕೆ ಮುಂದೂಡಲಾಗಿದೆ.[ಕರ್ನಾಟಕ, ತಮಿಳುನಾಡಿನಲ್ಲಿ ಶಾಂತಿ ಕಾಪಾಡಲು ಅರ್ಜಿ]
ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳು ಪರಿಸ್ಥಿತಿಯನ್ನು ಹತೋಟಿಗೆ ತರಲು ಏಕೆ ವಿಫಲವಾದವು? ಎಂದು ಕೋರ್ಟ್ ವಿವರಣೆ ಕೇಳಿದೆ. ಬಂದ್, ಪ್ರತಿಭಟನೆಗಳು ಕೋರ್ಟ್ ಆದೇಶದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಕನ್ಯಾಕುಮಾರಿ ಎಂಬುವವರು ಕಾವೇರಿ ನದಿ ನೀರು ಹಂಚಿಕೆ ವಿವಾದದ ತೀರ್ಪಿನ ಬಳಿಕ ಎರಡೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಿದೆ. ಆದ್ದರಿಂದ ಕಾನೂನು ಕಾಪಾಡುವ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದ್ದರು.