ಕಾಂಗ್ರೆಸ್: ಗುಂಪುಗಾರಿಕೆ, ಭಿನ್ನಮತ ನಡೆಸಿದರೆ ಗೇಟ್ಪಾಸ್-ವೇಣುಗೋಪಾಲ್ ಖಡಕ್ ಎಚ್ಚರಿಕೆ
ಹೈಕಮಾಂಡ್ ತೀರ್ಮಾನವೇ ಅಂತಿಮ. ಹೈಕಮಾಂಡ್ ನಿರ್ಧರಿಸುವ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಲೇಬೇಕು ಎಂದು ಇಂದು ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಉಸ್ತುವಾರಿ ಕೆಸಿ ವೇಣುಗೋಪಾಲ್ ಕಟ್ಟಪ್ಪಣೆ ಹೊರಡಿಸಿದ್ದಾರೆ.
ಬೆಂಗಳೂರು, ಮೇ 22: ರಾಜ್ಯ ವಿಧಾನಸಭೆ ಚುನಾವಣೆಗೆ ಸಮೀಪಿಸುತ್ತಿದ್ದಂತೆ ಆಡಳಿತರೂಢ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದಿವೆ. ಮುಖ್ಯವಾಗಿ ಪಕ್ಷದಲ್ಲಿ ಶಿಸ್ತು ತರಲು ಹೈಕಮಾಂಡ್ ನಿರ್ಧರಿಸಿದೆ ಹಾಗಾಗಿ ಒಳ ಜಗಳ, ಗುಂಪುಗಾರಿಕೆ, ಬಂಡಾಯವೇಳುವವರನ್ನು ಪಕ್ಷದಿಂದಲೇ ಕಿತ್ತು ಹಾಕಲಾಗುವುದು ಎಂದು ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಎಚ್ಚರಿಕೆ ನೀಡಿದ್ದಾರೆ.
ಹೈಕಮಾಂಡ್ ತೀರ್ಮಾನವೇ ಅಂತಿಮ. ಹೈಕಮಾಂಡ್ ನಿರ್ಧರಿಸುವ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಲೇಬೇಕು ಎಂದು ಇಂದು ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಅವರು ಕಟ್ಟಪ್ಪಣೆ ಹೊರಡಿಸಿದ್ದಾರೆ. ಈ ಮೂಲಕ ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂಬ ಎಂಬ ಸಂದೇಶವನ್ನು ರವಾನಿಸಿದ್ದಾರೆ.
ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಜಿಲ್ಲಾ ಮಟ್ಟದ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು, ಸಚಿವರು, ಸಂಸದರು, ಶಾಸಕರ ಸಭೆ ನಡೆಯಿತು. ಇದರಲ್ಲಿ ಈ ಆದೇಶ ನೀಡಲಾಗಿದೆ.
ಜನಪ್ರಿಯ ಅಭ್ಯರ್ಥಿಗಳನ್ನು ನಿರ್ಧರಿಸಿ. ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಆದರೆ ಒಮ್ಮೆ ಟಿಕೆಟ್ ನೀಡಿದ ನಂತರ ಯಾರೇ ಇರಲಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಬೇಕು. ಒಂದೊಮ್ಮೆ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳದಿದ್ದರೆ ಅಂಥವರ ಬಗ್ಗೆ ಕನಿಕರ ಬೇಡ, ಮುಲಾಜಿಲ್ಲದೆ ಕೈಬಿಡಿ ಎಂದು ಸೂಚನೆ ನೀಡಿದ್ದಾರೆ.
ಹೀಗಾಗಿ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಳ್ಳದವರು, ಪಕ್ಷದ ಸಭೆಗಳಲ್ಲಿ ಪಾಲ್ಗೊಳ್ಳದವರನ್ನು ಪಕ್ಷದಿಂದ ತೆಗೆಯುವಂತೆ ಅವರು ಸೂಚಿಸಿದ್ದಾರೆ ಎನ್ನಲಾಗಿದೆ. ಜಿಲ್ಲಾಧ್ಯಕ್ಷರ ನೇಮಕವೂ ಸೇರಿದಂತೆ ಒಂದೊಮ್ಮೆ ಯಾವುದೇ ಅಸಮಧಾನಗಳಿದ್ದರೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಮಾಧ್ಯಮಗಳ ಮುಂದೆ ಬಹಿರಂಗವಾಗಿ ಹೇಳಿಕೆ ನೀಡುವ, ಬೀದಿ ರಂಪ ಮಾಡಿದರೆ ನೇರ ಅಶಿಸ್ತು ಎಂದು ಪರಿಗಣಿಸಿ ಶಿಸ್ತು ಕ್ರಮ ಜಾರಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಕೆ.ಸಿ ವೇಣುಗೋಪಾಲ್ ಮತ್ತವರ ತಂಡ ಚುನಾವಣಾ ರಣತಂತ್ರಕ್ಕೆ ಸಂಬಂಧಿಸಿದಂತೆ ಇನ್ನೂ ನಾಲ್ಕು ದಿನಗಳ ಕಾಲ ನಿರಂತರವಾಗಿ ಪಕ್ಷದ ನಾಯಕರ ಜತೆ ಸಭೆ, ಚರ್ಚೆಗಳನ್ನು ನಡೆಸಲಿದೆ. ಇದು ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಕರ್ನಾಟಕಕ್ಕೆ ನೀಡುತ್ತಿರುವ ಎರಡನೇ ಭೇಟಿ ಎನ್ನುವುದು ಉಲ್ಲೇಖನೀಯ.