ಮಹದಾಯಿ ವಿವಾದ, ಮೋದಿಗೆ ಸಿದ್ದರಾಮಯ್ಯ ಪತ್ರ
ಬೆಂಗಳೂರು, ಆಗಸ್ಟ್ 04 : ಮಹದಾಯಿ ನದಿ ನೀರಿನ ಹಂಚಿಕೆ ವಿವಾದವನ್ನು ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ. ಮಹದಾಯಿ ನದಿ ನೀರಿನ ಅಗತ್ಯತೆ ಉತ್ತರ ಕರ್ನಾಟಕ ಭಾಗದ ಜನರಿಗಿದೆ ಎಂದು ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಗುರುವಾರ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ನದಿ ನೀರಿನ ವಿವಾದ ಬಗೆಹರಿಸಲು ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕ ಸೇರಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಕರೆಯಬೇಕು ಎಂದು ಒತ್ತಾಯಿಸಿದರು.[ಮಹದಾಯಿ ವಿವಾದ, ಆಗಸ್ಟ್ 7ರಂದು ಸರ್ವಪಕ್ಷ ಸಭೆ]
ಮಹದಾಯಿ ವಿವಾದದಲ್ಲಿ ಪ್ರಧಾನಿಗಳು ಮಧ್ಯಸ್ಥಿಕೆ ವಹಿಸಬೇಕು ಎಂಬುದು ಕರ್ನಾಟಕದ ಎಲ್ಲಾ ರಾಜಕೀಯ ಪಕ್ಷಗಳ ನಿಲುವಾಗಿದೆ. ನ್ಯಾಯಾಧೀಕರಣದ ಮಧ್ಯಂತರ ತೀರ್ಪು ಬಂದ ಬಳಿಕ ರಾಜ್ಯದಲ್ಲಿ ಜನರು ಭಾರೀ ಪ್ರತಿಭಟನೆ ನಡೆದಿದೆ. ಈಗ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.[ಮಾತುಕತೆ ಮೂಲಕ ಮಹದಾಯಿ ವಿವಾದಕ್ಕೆ ತೆರೆ?]
ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮಳೆಯ ಕೊರತೆ ಉಂಟಾಗಿರುವುದರಿಂದ ಈ ಭಾಗದ ರೈತರು ಮತ್ತೆ ಬರ ಪರಿಸ್ಥಿತಿ ಎದುರಿಸಬೇಕಾಗಿದೆ. ಆದ್ದರಿಂದ, ನೀರಿನ ಅಗತ್ಯವಿದೆ ಎಂದು ಪತ್ರದಲ್ಲಿ ಮನವರಿಕೆ ಮಾಡಿಕೊಟ್ಟಿದ್ದಾರೆ.[ಕಳಸಾ ಬಂಡೂರಿ ಯೋಜನೆ, ವಿವಾದ ಮತ್ತು ನಾವು]
ನದಿ ನೀರು ಹಂಚಿಕೆ ವಿವಾದವನ್ನು ನ್ಯಾಯಾಧೀಕರಣದ ಹೊರಗೆ ಬಗೆಹರಿಸಿಕೊಳ್ಳುವ ನಮ್ಮ ಪ್ರಸ್ತಾವನೆಗೆ ಗೋವಾ ರಾಜ್ಯ ಒಪ್ಪಿಗೆ ಕೊಟ್ಟಿಲ್ಲ. ನಿಮ್ಮ ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿಯಲಿದೆ ಎಂಬುದು ನಮ್ಮ ಭರವಸೆಯಾಗಿದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.[ಕರ್ನಾಟಕ ನಮ್ಮ ದೊಡ್ಡಣ್ಣ, ಶತ್ರುವಲ್ಲ: ಗೋವಾ ಸಿಎಂ]