ಉಡುಪಿ ಜಿಲ್ಲಾಧಿಕಾರಿ ವರ್ಗಾವಣೆ : ಪರ, ವಿರೋಧ ಪ್ರತಿಭಟನೆ
ಉಡುಪಿ, ಮೇ 30 : ಉಡುಪಿ ಜಿಲ್ಲಾಧಿಕಾರಿ ಡಾ.ಆರ್.ವಿಶಾಲ್ ಅವರ ವರ್ಗಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ಜಿಲ್ಲಾಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ದಲಿತ ಸಂಘಟನೆಗಳು ಎರಡು ಗುಂಪುಗಳಾಗಿವೆ. ಒಂದು ಗುಂಪು ವರ್ಗಾವಣೆಗೆ ಒತ್ತಾಯಿಸುತ್ತಿದೆ. ಮತ್ತೊಂದು ಗುಂಪು ವರ್ಗಾವಣೆ ಮಾಡಬಾರದು ಎಂದು ಪ್ರತಿಭಟನೆ ನಡೆಸಿದೆ.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಉಡುಪಿ ಜಿಲ್ಲಾ ಸಂಘಟನಾ ಸಂಚಾಲಕ, ನ್ಯಾಯವಾದಿ ಟಿ.ಮಂಜುನಾಥ ಗಿಳಿಯಾರು ಅವರು, 'ಜಿಲ್ಲಾಧಿಕಾರಿಯಾಗಿ ದಕ್ಷ ಹಾಗೂ ಪ್ರಾಮಾಣಿಕ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ವಿಶಾಲ್ ಅವರನ್ನು ವರ್ಗಾವಣೆ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ' ಎಂದು ಹೇಳಿದ್ದಾರೆ. [ಉಡುಪಿ: ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ]
'ಜಿಲ್ಲಾಧಿಕಾರಿಗಳು ದಲಿತ ಸಮುದಾಯಗಳ ಅಭಿವೃದ್ಧಿ ಕೆಲಸಗಳನ್ನು ಅತ್ಯಂತ ಮುತುವರ್ಜಿಯಿಂದ ನಿರ್ವಹಿಸಿ, ಶೋಷಿತ ಸಮುದಾಯಗಳ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದೇ ಮೊದಲಬಾರಿಗೆ 20 ಮಂದಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ಸಾಂಪ್ರದಾಯಿಕ ಮರಳುಗಾರಿಕೆಗೆ ಪರವಾನಿಗೆ ನೀಡಿದ್ದು, ಮಹತ್ವಪೂರ್ಣ ಹೆಜ್ಜೆಯಾಗಿದೆ' ಎಂದರು. [ಉಡುಪಿಯಲ್ಲೂ ನೀರಿಗೆ ಬರ, ಶ್ರೀ ಕೃಷ್ಣನಿಗೆ ಕೇಳುವುದೇ ಮೊರೆ?]
'ಜಿಲ್ಲಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ದಲಿತ ಸಮುದಾಯದ ಕುಂದುಕೊರತೆಗಳ ಸಭೆಯನ್ನು ನಡೆಸಿ, ಅಹವಾಲು ಸ್ವೀಕಾರ ಮಾಡುತ್ತಾರೆ. ಕೊರಗರ ಭೂಮಿ ಹಂಚಿಕೆ, ಪೌಷ್ಠಿಕ ಆಹಾರ ಸರಬರಾಜು ಮುಂತಾದ ವಿಚಾರಗಳಲ್ಲಿ ಮುತುವರ್ಜಿ ವಹಿಸಿದ್ದಾರೆ' ಆದ್ದರಿಂದ ಅವರನ್ನು ವರ್ಗಾವಣೆ ಮಾಡಬಾರದು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ : 'ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಎಂದು ದಲಿತ ಸಂಘರ್ಷ ಸಮಿತಿಯ ಮತ್ತೊಂದು ಗುಂಪು ಒತ್ತಾಯಿಸಿದೆ. ಜಿಲ್ಲಾಧಿಕಾರಿಗಳು ಮರಳು ಮಾಫಿಯಾ ಜೊತೆ ಕೈ ಜೋಡಿಸಿದ್ದಾರೆ' ಎಂದು ಶೇಖರ್ ಹೆಜಮಾಡಿ ಆರೋಪಿಸಿದ್ದಾರೆ.
'ಇಬ್ಬರು ಸದಸ್ಯರಿರುವ ಕುಟುಂಬಕ್ಕೆ ಮರಳು ಗಣಿಗಾರಿಕೆಗೆ ಅನುಮತಿ ನೀಡುವಂತಿಲ್ಲ. ಆದರೆ, ಜಿಲ್ಲಾಧಿಕಾರಿಗಳು ಪರವಾನಿಗೆ ನೀಡಿ ಟೆಂಡರ್ ನಿಯಮನ್ನು ಉಲ್ಲಂಘಟನೆ ಮಾಡಿದ್ದಾರೆ ಎಂದು ಮತ್ತೊಂದು ಗುಂಪು ಆರೋಪಿಸಿದೆ.
ವೈದ್ಯಕೀಯ ಪದವಿ ಪಡೆದಿದ್ದಾರೆ : ಡಾ.ಆರ್.ವಿಶಾಲ್ ಅವರು ಮೂಲತಃ ಹುಬ್ಬಳ್ಳಿಯವರು. ಹುಬ್ಬಳ್ಳಿಯ ಕಿಮ್ಸ್ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದಿದ್ದಾರೆ. 2004ನ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ಇವರು ಚಿಕ್ಕಬಳ್ಳಾಪುರ ಮತ್ತು ಕಲಬುರಗಿ ಜಿಲ್ಲಾಧಿಕಾರಿಗಳಾಗಿ ಕೆಲಸ ನಿರ್ವಹಿಸಿದ್ದಾರೆ. 2014ರಿಂದ ಉಡುಪಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ.