ರಾಹುಲ್ ಗಾಂಧಿ ಭೇಟಿಗೆ ಪ್ರಯತ್ನಿಸಿದ್ದ ಜೆಡಿಎಸ್ ಅತೃಪ್ತ ಶಾಸಕರು!
ರಾಮನಗರ, ಆಗಸ್ಟ್ 17 : 'ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಎರಡು ಬಾರಿ ಭೇಟಿ ಮಾಡಲು ಉದ್ದೇಶಿಸಿದ್ದೆವು. ಆದರೆ, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ' ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದ್ದಾರೆ.
ಮಾಗಡಿಯಲ್ಲಿ ಮಂಗಳವಾರ ಮಾತನಾಡಿದ ಬಾಲಕೃಷ್ಣ ಅವರು, 'ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದ 8 ಶಾಸಕರು ದೆಹಲಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ನಿರ್ಧರಿಸಿದ್ದೆವು' ಎಂದು ಹೇಳಿದರು.[ಜೆಡಿಯುನತ್ತ ಹೊರಟ JDSನ 8 ಶಾಸಕರು?]
'ರಾಜ್ಯಸಭೆ ಚುನಾವಣೆಯಲ್ಲಿ ವೇಳೆಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಕೆಲವು ದಿನಗಳ ಹಿಂದೆ ಮತ್ತೊಮ್ಮೆ ಅವರ ಭೇಟಿಗೆ ಪ್ರಯತ್ನ ನಡೆಸಿದ್ದೆವು. ದಿನಾಂಕವೂ ನಿಗದಿಯಾಗಿತ್ತು. ಆದರೆ, ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಮರಣದಿಂದಾಗಿ ಭೇಟಿ ರದ್ದಾಯಿತು' ಎಂದು ಬಾಲಕೃಷ್ಣ ತಿಳಿಸಿದರು.[ಜೆಡಿಎಸ್ 8 ಶಾಸಕರ ಅಮಾನತು, ಮುಂದೇನು?]
'ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ವಿಚಾರವನ್ನು ಸದ್ಯಕ್ಕೆ ಕೈ ಬಿಟ್ಟಿದ್ದೇವೆ. ತಾವು ಕಾಂಗ್ರೆಸ್ ಪಕ್ಷವನ್ನು ಸೇರುವುದಿಲ್ಲ' ಎಂದು ಬಾಲಕೃಷ್ಣ ಅವರು ಸ್ಪಷ್ಟನೆ ನೀಡಿದರು.['ಪಕ್ಷಕ್ಕೆ ದ್ರೋಹ ಮಾಡಿದವರನ್ನು ಒಂದು ಕ್ಷಣವೂ ಇರಲು ಬಿಡಲ್ಲ']
ಅಮಾನತುಗೊಂಡಿದ್ದಾರೆ : ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಸೇರಿದಂತೆ 8 ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ವಿರುದ್ಧವಾಗಿ ಮತಹಾಕಿ ಕಾಂಗ್ರೆಸ್ ಬೆಂಬಲಿಸಿದ ಕಾರಣಕ್ಕೆ ಜೆಡಿಎಸ್ನಿಂದ ಅಮಾನತುಗೊಂಡಿದ್ದಾರೆ.
ಅಮಾನತುಗೊಂಡವರು : ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ಕೆ.ಗೋಪಾಲಯ್ಯ (ಮಹಾಲಕ್ಷ್ಮೀ ಪುರ), ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ), ಚೆಲುವರಾಯ ಸ್ವಾಮಿ (ನಾಗಮಂಗಲ), ಎಚ್.ಸಿ.ಬಾಲಕೃಷ್ಣ (ಮಾಗಡಿ) ಇಕ್ಬಾಲ್ ಅನ್ಸಾರಿ (ಗಂಗಾವತಿ), ರಮೇಶ್ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ).