ಸಾಲಾ ಮನ್ನಾಕ್ಕೆ ಆಗ್ರಹಿಸಿ ದೆಹಲಿಯಲ್ಲಿ ರಾಜ್ಯ ರೈತರಿಂದ ಪ್ರತಿಭಟನೆ
ಸಾಲ ಮನ್ನಾ ಮಾಡಬೇಕು, ಕುಡಿಯುವ ನೀರಿಗೆ ವ್ಯವಸ್ಥೆ ಮಾಡಬೇಕು, ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಅನುಷ್ಠಾನಗೊಳಿಸಬೇಕು ಎಂಬ ಬೇಡಿಕೆಗಳನ್ನು ರೈತರು ಕೇಂದ್ರ ಸರಕಾರದ ಮುಂದಿಟ್ಟು ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನವ ದೆಹಲಿ, ಮೇ 15: ಕರ್ನಾಟಕ ರಾಜ್ಯದ ರೈತರು ಸಾಲ ಮನ್ನಾ ಮತ್ತು ಬೆಳೆ ಪರಿಹಾರಕ್ಕೆ ಆಗ್ರಹಿಸಿ ಇಂದು ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಇಲ್ಲೀವರೆಗೆ ತಮಿಳುನಾಡಿನ ರೈತರ ವಿಲಕ್ಷಣ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದ್ದ ರಾಷ್ಟ್ರ ರಾಜಧಾನಿ ಇದೀಗ ಕರ್ನಾಟಕದ ರೈತರ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ.
ಉರಿ ಬಿಸಿಲಿನ ಮಧ್ಯೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರೈತರು ನಿರಶನ ಆರಂಭಿಸಿದ್ದಾರೆ.
ರೈತರ ಬೇಡಿಕೆಗಳು
ಸಾಲ ಮನ್ನಾ ಮಾಡಬೇಕು, ಕುಡಿಯುವ ನೀರಿಗೆ ವ್ಯವಸ್ಥೆ ಮಾಡಬೇಕು, ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಅನುಷ್ಠಾನಗೊಳಿಸಬೇಕು ಎಂಬ ಬೇಡಿಕೆಗಳನ್ನು ರೈತರು ಕೇಂದ್ರ ಸರಕಾರದ ಮುಂದಿಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸ್ವತಃ ಪ್ರತಿಭಟನಾ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿ ಪರಿಹಾರದ ಭರವಸೆ ನೀಡಬೇಕು. ಇಲ್ಲದಿದ್ದಲ್ಲಿ ನಿರಶನ ಮುಂದುವರಿಸುತ್ತೇವೆ ಎಂಬ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದ್ದಾರೆ.
ಇನ್ನು ಬಿಸಿಲಿನ ತಾಪಕ್ಕೆ ಪ್ರತಿಭಟನೆ ನಡೆಸುತ್ತಿರುವ ಕೆಲವು ರೈತರು ನಿತ್ರಾಣಗೊಂಡಿದ್ದೂ ವರದಿಯಾಗಿದೆ. ಪ್ರತಿಭಟನೆಯಲ್ಲಿ ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಕೃಷಿಕರು ಮತ್ತು ರೈತ ಮಹಿಳೆಯರು ಪಾಲ್ಗೊಂಡಿದ್ದಾರೆ.