ಯಡಿಯೂರಪ್ಪಗೆ ರಾಜ್ಯಾಧ್ಯಕ್ಷ ಪಟ್ಟ : ಯಾರು, ಏನು ಹೇಳಿದರು?
ಬೆಂಗಳೂರು, ಏಪ್ರಿಲ್ 11 : 2018ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕರ್ನಾಟಕ ಬಿಜೆಪಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರಾಗಿ ಘೋಷಣೆ ಮಾಡಿದೆ. ಏ.14ರಂದು ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
ಕರ್ನಾಟಕ ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಪೂರ್ಣಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷರನ್ನು ಮೊದಲು ಆಯ್ಕೆ ಮಾಡಿರುವುದು ಹಲವು ಲೆಕ್ಕಾಚಾರಗಳಿಗೆ ಕಾರಣವಾಗಿದೆ. ಲಿಂಗಾಯತ ಸಮುದಾಯದ ಪ್ರಬಲ ನಾಯಕನಿಗೆ ಪಟ್ಟ ಕಟ್ಟುವ ಮೂಲಕ ಪಕ್ಷ ಚುನಾವಣಾ ತಯಾರಿಯನ್ನು ಆರಂಭಿಸಿದೆ. [ಯಡಿಯೂರಪ್ಪಗೆ ಅಧ್ಯಕ್ಷ ಪಟ್ಟ, ಬಿಜೆಪಿಯಲ್ಲಿ ದೀಪಾವಳಿ]
ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಬಿಜೆಪಿಯ ಪ್ರಬಲ ನಾಯಕ ಎಂಬುದನ್ನು ಎಲ್ಲರೂ ಒಪ್ಪಲೇಬೇಕು. 2014ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಗೆಲುವು ಸಾಧಿಸಿ, ಸಂಸದರಾಗಿ ಆಯ್ಕೆಯಾದ ದಿನದಿಂದಲೂ ರಾಜ್ಯ ರಾಜಕಾರಣಕ್ಕೆ ಬರುವ ಮಾತುಗಳನ್ನು ಆಡುತ್ತಿದ್ದ ಯಡಿಯೂರಪ್ಪ ಅವರಿಗೆ ಈಗ ಸ್ಥಾನಮಾನ ಸಿಕ್ಕಿದೆ. [ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪ ಆಯ್ಕೆ]
ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಿದ ವಿಚಾರದಲ್ಲಿ ರಾಜ್ಯದ ಕೆಲವು ನಾಯಕರಲ್ಲಿ ಅಸಮಾಧಾನವಿದ್ದರೂ ಈ ನಿರ್ಧಾರದಿಂದ ಪಕ್ಷಕ್ಕೆ ಬಲ ಬಂದಿದ್ದಂತೂ ನಿಜ. ಬಿಜೆಪಿ ನಾಯಕರ ಸಂಭ್ರಮಕ್ಕೆ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಡಿಯೂರಪ್ಪ ಅವರು ಕೇವಲ ರಾಜ್ಯಾಧ್ಯಕ್ಷರಾಗಿದ್ದಾರೆ, ಮುಖ್ಯಮಂತ್ರಿಯಾಗಿಲ್ಲ ಎಂದು ವ್ಯಂಗ್ಯವಾಡಿವೆ. ಬಿಎಸ್ವೈ ರಾಜ್ಯಾಧ್ಯಕ್ಷರಾದ ಬಗ್ಗೆ ಯಾರು, ಏನು ಹೇಳಿದರು? ಚಿತ್ರಗಳಲ್ಲಿ ನೋಡಿ....
'ಪಕ್ಷ ಮತ್ತಷ್ಟು ಬಲಿಷ್ಠವಾಗಲಿದೆ'
ಯಡಿಯೂರಪ್ಪ ಅವರು ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವುದನ್ನು ಸ್ವಾಗತಿಸಿರುವ ಪ್ರಹ್ಲಾದ್ ಜೋಶಿ ಅವರು. 'ದಶಕಗಳಿಂದ ರಾಜ್ಯದಲ್ಲಿ ಪಕ್ಷ ಬೆಳೆಸಲು ಅವರ ಸತತ ಪರಿಶ್ರಮ ಪ್ರಮುಖ ಪಾತ್ರ ವಹಿಸಿದೆ. ಮುಂದಿನ ದಿನಗಲ್ಲಿ ಅವರ ನೇತೃತ್ವದಲ್ಲಿ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದೆ' ಎಂದು ಹೇಳಿದ್ದಾರೆ.
'ಅವರಿನ್ನೂ ಮುಖ್ಯಮಂತ್ರಿಯಾಗಿಲ್ಲ'
'ಯಡಿಯೂರಪ್ಪ ಅವರು ಮುಖ್ಯಂತ್ರಿಯಾದಂತೆ ಪಕ್ಷ ಸಂಭ್ರಮಿಸುತ್ತಿದೆ. ಅವರು ರಾಜ್ಯಾಧ್ಯಕ್ಷರಾಗಿ ಮಾತ್ರ ಆಯ್ಕೆ ಆಗಿದ್ದಾರೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. 'ಯಡಿಯೂರಪ್ಪ ಅವರಿಗೆ ಅನೇಕ ಪ್ರಕರಣಗಲ್ಲಿ ಕ್ಲೀನ್ ಚಿಟ್ ಸಿಕ್ಕಿಲ್ಲ. ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕರ ಎನ್ನುವ ಬಿಜೆಪಿಯವರು, ಈಗ ಯಡಿಯೂರಪ್ಪ ಅವರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ' ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
'ಯಡಿಯೂರಪ್ಪ ನೇತೃತ್ವದಲ್ಲಿ ಸಾಮೂಹಿಕ ಹೋರಾಟ'
'ರಾಜ್ಯದಲ್ಲಿ ಪಕ್ಷ ಸಂಘಟನೆ ಮತ್ತು ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಾಮೂಹಿಕವಾಗಿ ಹೋರಾಟ ನಡೆಸುತ್ತೇವೆ' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
'ಒಬ್ಬ ವ್ಯಕ್ತಿಯಿಂದ ಪಕ್ಷ ನಡೆಯೋಲ್ಲ'
'ಯಡಿಯೂರಪ್ಪ ಅವರು ರಾಜ್ಯಾಧ್ಯಕ್ಷರಾಗಿರುವುದಕ್ಕೆ ಮಹತ್ವ ನೀಡಬೇಕಿಲ್ಲ. ಯಾವುದೇ ಒಬ್ಬ ವ್ಯಕ್ತಿಯಿಂದ ಪಕ್ಷ ನಡೆಯೋಲ್ಲ, ಸರ್ಕಾರ ರಚನೆ ಆಗುವುದಿಲ್ಲ. ಯಡಿಯೂರಪ್ಪ ಸರ್ಕಾರ ಅಸ್ತಿತ್ವದಲ್ಲಿದ್ದಾಗ ನಡೆದ ದುರಾಡಳಿತವನ್ನು ಜನರು ಮರೆತಿಲ್ಲ' ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
'ರಾಜ್ಯಾಧ್ಯಕ್ಷ ಸ್ಥಾನ ಮರೀಚಿಕೆಯಲ್ಲ'
'ಯಡಿಯೂರಪ್ಪ ಅವರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿರುವುದು ಸಂರ್ದಭೋಚಿತವಾಗಿದೆ. ರಾಜ್ಯಾಧ್ಯಕ್ಷ ಸ್ಥಾನ ಮರೀಚಿಕೆಯಲ್ಲ. ನಾನು ಒಂದು ದಿನ ರಾಜ್ಯಾಧ್ಯಕ್ಷನಾಗುವೆ' ಎಂದು ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
'ಜೈಲು ಸೇರಿದವರನ್ನು ಅಧ್ಯಕ್ಷರಾಗಿ ಮಾಡಿದ್ದಾರೆ'
'ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಮುಖ್ಯಮಂತ್ರಿಗಳನ್ನು ಪಕ್ಷದ ರಾಜ್ಯಾಧ್ಯಕ್ಷರಾಗಿ ಮಾಡಲಾಗಿದೆ. ರಾಜ್ಯದ ಇತಿಹಾಸದಲ್ಲೇ ಇಂತಹ ಬೆಳವಣಿಗೆ ಇದೇ ಮೊದಲು' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
'150 ಸ್ಥಾನಗಲ್ಲಿ ಬಿಜೆಪಿಗೆ ಗೆಲುವು'
'ಯಡಿಯೂರಪ್ಪ ಅವರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿರುವುದಕ್ಕೆ ಸಂತಸವಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಲ್ಲಿ ಜಯಗಳಿಸಿ ಅಧಿಕಾರ ಪಡೆಯಲಿದೆ' ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
'ಕಾಂಗ್ರೆಸ್ ಪಕ್ಷಕ್ಕೆ ಆತಂಕವಿಲ್ಲ'
'ಯಡಿಯೂರಪ್ಪ ಅವರು ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಆತಂಕವಿಲ್ಲ. ಅವರಂತೆಯೇ ಬಲಿಷ್ಠ ನಾಯಕರು ನಮ್ಮ ಪಕ್ಷದಲ್ಲೂ ಇದ್ದಾರೆ' ಎಂದು ಕಂದಾಯ ಸಚಿವ ವಿ.ಶ್ರಿನಿವಾಸ್ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ.