ಸಿದ್ದು ಮೇಲೆ ಕಲಬುರಗಿಯಲ್ಲಿ ಬಿಎಸ್ವೈ ಭ್ರಷ್ಟಾಚಾರದ ಅಸ್ತ್ರ
ಕಲಬುರಗಿ, ಫೆಬ್ರವರಿ 22 : ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರು, ಸ್ಟೀಲ್ ಸೇತುವೆಗೆ ಸಂಬಂಧಿಸಿದಂತೆ 65 ಕೋಟಿ ರುಪಾಯಿ ಲಂಚ ಪಡೆದಿದ್ದಾರೆ ಎಂದು ಮತ್ತೆ ಆರೋಪ ಮಾಡಿದ್ದಾರೆ.
ಕಲಬುರಗಿಯಲ್ಲಿ ಬುಧವಾರ ನಡೆದ ಬಿಜೆಪಿ ಹಿಂದುಳಿದ ವರ್ಗದ ಸಮಾವೇಶದಲ್ಲಿ ಭಾಗವಹಿಸಿದ್ದ ಅವರು, ಈಶ್ವರಪ್ಪ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ಬರಲಿರುವ ಸ್ಟೀಲ್ ಸೇತುವೆ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿದರು. [ಅವರಪ್ಪನಾಣೆಗೂ ಯಡಿಯೂರಪ್ಪ ಮತ್ತೆ ಸಿಎಂ ಆಗಲ್ಲಾ, ಉಗ್ರಪ್ಪ ಉವಾಚ]
ಇದೇ ವೇಳೆ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧವೂ ಮಾತಿನ ಚಾಟಿ ಬೀಸಿದ ಯಡಿಯೂರಪ್ಪ, ನಾನು ಹೈಕಮಾಂಡಿಗೆ ಕಪ್ಪ ಕೊಟ್ಟಿರುವ ಬಗ್ಗೆ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
ಮಂಗಳವಾರ ಬೆಂಗಳೂರಿನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಕುಮಾರಸ್ವಾಮಿ ಅವರು, ಯಡಿಯೂರಪ್ಪನವರು ಸಿದ್ದರಾಮಯ್ಯನವರ ಬಗ್ಗೆ ಯಾಕೋ ಮೃದು ಧೋರಣೆ ತಾಳುತ್ತಿದ್ದಾರೆ. ಅವರ ಬಳಿ ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿರುವ ಬಗ್ಗೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ನುಡಿದಿದ್ದರು. [ಸಿದ್ದು ವಿರುದ್ಧ ಆರೋಪ ಸುಳ್ಳಾದರೆ ರಾಜಕೀಯ ನಿವೃತ್ತಿ: ಯಡಿಯೂರಪ್ಪ]
ಅಲ್ಲದೆ, ಬಿಜೆಪಿ ಹೈಕಮಾಂಡಿಗೆ ಯಡಿಯೂರಪ್ಪನವರು ಚೆಕ್ ಮೂಲಕ ಕಪ್ಪ ಸಂದಾಯ ಮಾಡಿರುವ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಆದರೆ, ಈಗ ಅವನ್ನು ಬಿಡಗಡೆ ಮಾಡಿದರೆ ಏನೂ ಪ್ರಯೋಜನವಿಲ್ಲವೆಂದು ನಾನು ಬಿಡುಗಡೆ ಮಾಡಿಲ್ಲ ಎಂದು ಕುಮಾರಸ್ವಾಮಿ ಬೆಂಗಳೂರಿನಲ್ಲಿ ಹೇಳಿದ್ದರು.
ಬೆಂಗಳೂರಿನಲ್ಲಿ ಪ್ರತಿಭಟನೆ : ಯಡಿಯೂರಪ್ಪನವರಿಗೆ ಹುಚ್ಚು ಹಿಡಿದಿದೆ ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಯಡಿಯೂರಪ್ಪನವರನ್ನು ಹೀಯಾಳಿಸಿದ್ದರ ವಿರುದ್ಧ ಬಿಜೆಪಿ ಕಾರ್ಯಕರ್ತರು ಸಿಡಿದೆದ್ದಿದ್ದು, ಮೈಸೂರ್ ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ['ಹುಚ್ಚುಚ್ಚಾಗಿ ಮಾತನಾಡುತ್ತಿರುವ ಯಡಿಯೂರಪ್ಪ ಪರೀಕ್ಷೆ ಮಾಡಿಸಿಕೊಳ್ಳಲಿ']
ಯಡಿಯೂರಪ್ಪನವರು ಮಾನಸಿಕ ಅಸ್ವಸ್ಥರಾಗಿದ್ದಾರೆ. ಅವರು ಉಗಾಂಡಾದ ಸರ್ವಾಧಿಕಾರಿ ಇದಿ ಅಮೀನ್ ನಂತೆ, ಸಿದ್ದರಾಮಯ್ಯನವರನ್ನು ಜೈಲಿಗೆ ಕಳಿಸುವುದಾಗಿ ಹುಚ್ಚುಚ್ಚಾಗಿ ವರ್ತಿಸುತ್ತಿದ್ದಾರೆ. ಅವರಿಗೆ ತಕ್ಷಣ ಮಾನಸಿಕ ಚಿಕಿತ್ಸೆಯ ಅವಶ್ಯಕತೆ ಇದೆ ಎಂದು ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದ್ದರು.
ನಾನು ಮುಂದಿನ ವಿಧಾನಸಭೆ ಚುನಾವಣೆಯ ನಂತರ ಮುಖ್ಯಮಂತ್ರಿ ಆಗುತ್ತಿದ್ದಂತೆ ಭ್ರಷ್ಟ ಸಿದ್ದರಾಮಯ್ಯನವರನ್ನು ಜೈಲಿಗೆ ಕಳಿಸುವುದಾಗಿ ಯಡಿಯೂರಪ್ಪ ಅಬ್ಬರಿಸಿದ್ದರು. ಈ ವಾಗ್ದಾಳಿಗೆ ಪ್ರತಿಯಾಗಿ ಯಡಿಯೂರಪ್ಪನವರು ಹುಚ್ಚುಚ್ಚಾಗಿ ವರ್ತಿಸುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಅವರು ಟೀಕಿಸಿದ್ದರು.