ಕೊಡಗಿನಲ್ಲಿ ಬಂಟಿಂಗ್ಸ್, ಪ್ಲೆಕ್ಸ್ ಅಳವಡಿಕೆಗೆ ಅನುಮತಿ ಕಡ್ಡಾಯ
ಮಡಿಕೇರಿ, ಆಗಸ್ಟ್ 16: ಗೌರಿ ಗಣೇಶ ಹಬ್ಬದ ಸಂದರ್ಭ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಬಂಟಿಂಗ್ಸ್, ಪ್ಲೆಕ್ಸ್ ಗಳನ್ನು ಅಳವಡಿಸುವ ಸಂಬಂಧ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.
ಟಿಪ್ಪು ಜಯಂತಿ ಗುಂಡೇಟು: ಆರೋಪಿಗಳು ಖುಲಾಸೆ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಜೊತೆ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿ, ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಮಾತನಾಡಿ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ.
ಆ ನಿಟ್ಟಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ಎಲ್ಲ ರೀತಿಯ ಕ್ರಮಕೈಗೊಳ್ಳಲಿದ್ದು, ಅದಕ್ಕಾಗಿ ನಗರಸಭೆ, ಮೂರು ಪಟ್ಟಣ ಪಂಚಾಯಿತಿ ಹಾಗೂ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಮಾತನಾಡಿ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬ್ಯಾನರ್, ಬಂಟಿಂಗ್ಸ್ ಅಳವಡಿಸುವ ಸಂಬಂಧ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ಪಡೆಯುವ ಮೊದಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಅವರು ಹೇಳಿದರು.
ಕೊಡಗಿನಲ್ಲೇ ಕೈ ಕೊಟ್ಟ ಮಳೆ, ಕೃಷಿಯ ಖುಷಿ ಕಾಣದ ರೈತರು
ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ ಸಂದರ್ಭದಲ್ಲಿ ಯಾವ ರೀತಿ ಮಾಡಬೇಕು ಮತ್ತು ಮಾಡಬಾರದು ಎಂಬ ಬಗ್ಗೆ ಕೆಲವು ನಿಬಂಧನೆಗಳನ್ನು ನೀಡಲಿದೆ. ಅದರಂತೆ ನಡೆದುಕೊಳ್ಳಬೇಕು. ಆ ನಿಟ್ಟಿನಲ್ಲಿ ಅಗತ್ಯ ಜಾಗೃತಿಯನ್ನು ಮೂಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗಣೇಶ ಪ್ರತಿಷ್ಠಾಪನೆ, ಮೆರವಣಿಗೆ ವಿಸರ್ಜನೆ ಸಂದರ್ಭದಲ್ಲಿ ಯಾವ ಮಾರ್ಗದಲ್ಲಿ ತೆರಳುತ್ತಾರೆ. ಸಮಯ ಮತ್ತಿತರ ಬಗ್ಗೆ ಮಾಹಿತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಹೇಳಿದರು.
ಆಟೋಗಳಲ್ಲಿ, ಗೂಡ್ಸ್ ವಾಹನಗಳಲ್ಲಿ ಬಾವುಟಗಳನ್ನು ಅಳವಡಿಸಿಕೊಂಡು ಓಡಾಡಬಾರದು. ಇಂತಹದು ಕಂಡುಬಂದರೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಹಾಗೆಯೇ ನಗರದಲ್ಲಿರುವ ಮಹಾನ್ ವೀರಸೇನಾನಿಗಳ ಪ್ರತಿಮೆಗಳ ಸುತ್ತ ಬ್ಯಾನರ್, ಬಂಟಿಂಗ್ಸ್ ಗಳನ್ನು ಅಳವಡಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು
ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಸಾರ್ವಜನಿಕರಿಗೆ ಸೇವೆ ನೀಡಿದರೆ ಸಾಕು. ಅದನ್ನು ಬಿಟ್ಟು ಬಾವುಟಗಳನ್ನು ಅಳವಡಿಸಿಕೊಂಡು ಓಡಾಡುವುದು ಸರಿಯೇ ಎಂದು ಜಿಲ್ಲಾಧಿಕಾರಿ ಅವರು ಪ್ರಶ್ನಿಸಿದರು. ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಪರಿಸರ ಸ್ನೇಹಿ ಗಣಪ ಪ್ರತಿಷ್ಠಾಪನೆ ಮಾಡುವ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ರಾಸಾಯನಿಕ ಗಣಪ ಬಳಸದೆ, ಮಣ್ಣಿನ ಗಣಪ ಪ್ರತಿಷ್ಠಾಪನೆ ಮಾಡಬೇಕಿದೆ, ಆ ದಿಸೆಯಲ್ಲಿ ಪರಿಸರ ಮಾಲೀನ್ಯ ನಿಯಂತ್ರಣ ಮಂಡಳಿಯೊಂದಿಗೆ ಅಗತ್ಯ ಅರಿವು ಮೂಡಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಪೌರಾಯುಕ್ತರಾದ ಬಿ.ಶುಭ, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಜಿ.ಪಂ. ಉಪಕಾರ್ಯದರ್ಶಿ ಸಿದ್ದಲಿಂಗ ಮೂರ್ತಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಗೋಪಾಲಕೃಷ್ಣ, ತಹಶೀಲ್ದಾರ್ ರಾದ ಕುಸುಮ, ಮಹೇಶ್, ತಾ.ಪಂ. ಇಒಗಳಾದ ಜೀವನ್ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಶ್ರೀಧರ, ನಾಚಪ್ಪ ಇತರರು ಇದ್ದರು.