ಕೊಡಗಿನ ಐಗೂರಲ್ಲಿ ಕುರಾನ್ ಸುಟ್ಟಿದ್ದಕ್ಕೆ ಕಾರು ಸುಟ್ಟರೇ?
ಕೊಡಗಿನ ಐಗೂರಿನಲ್ಲಿ ಕುರಾನ್ ಗೆ ಬೆಂಕಿ ಹಚ್ಚಿರುವ ಬೆನ್ನಲ್ಲೇ ಆರ್ ಎಸ್ ಎಸ್ ಮುಖಂಡನ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಮಡಿಕೇರಿ, ನವೆಂಬರ್. 15 : ಸೋಮವಾರಪೇಟೆ ತಾಲೂಕಿನ ಐಗೂರಿನಲ್ಲಿ ಕುರಾನ್ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಪತ್ತೆಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ವಕೀಲ ಹಾಗೂ ಆರ್ಎಸ್ಎಸ್ ಮುಖಂಡನ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ವಕೀಲ ಪದ್ಮನಾಭ ಎಂಬುವರು ತಮ್ಮ ಮನೆ ಬಳಿ ನಿಲ್ಲಿಸಿದ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಹೊಗೆ ಬರುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಬೆಂಕಿಯನ್ನು ನಂದಿಸಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಪೆಟ್ರೋಲ್ ಬಾಂಬ್ ದಾಳಿ ಮೂಲಕ ಕೃತ್ಯ ಎಸಗಿರಬಹುದೆಂದು ಸಂಶಯ ವ್ಯಕ್ತಪಡಿಸಲಾಗಿದೆ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆಯೇ ಸೋಮವಾರಪೇಟೆಯಲ್ಲಿ ವಕೀಲರು ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.[ಕೊಡಗಿನ ಐಗೂರಲ್ಲಿ ಕುರಾನ್ ಗೆ ಬೆಂಕಿ: ಪೊಲೀಸ್ ಬಂದೋಬಸ್ತ್]
ವಕೀಲರ ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಕೃತ್ಯಗಳು ಮುಂದೆ ನಡೆಯದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕು. ಒಂದು ವಾರದ ಒಳಗೆ ದುಷ್ಕರ್ಮಿಗಳನ್ನು ಬಂಧಿಸದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವದಾಗಿ ವಕೀಲರ ಸಂಘದ ಅಧ್ಯಕ್ಷ ಡಿ.ಕೆ. ತಿಮ್ಮಯ್ಯ ಎಚ್ಚರಿಸಿದ್ದಾರೆ.
ಮತ್ತೊಂದೆಡೆ ಮಡಿಕೇರಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸೋಮವಾರಪೇಟೆ ತಾಲೂಕು ಕಾರ್ಯವಾಹ ಹಾಗೂ ವಕೀಲರೂ ಆಗಿರುವ ಐಗೂರಿನ ಪದ್ಮನಾಭ ಅವರ ಕಾರಿಗೆ ಪೆಟ್ರೋಲ್ ಬಾಂಬ್ ಧಾಳಿ ನಡೆಸಿ ಹಾನಿಪಡಿಸಿರುವ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಸೇರಿದಂತೆ ಬಿಜೆಪಿ ಹಾಗೂ ವಿವಿಧ ಹಿಂದೂಪರ ಸಂಘಟನೆಯ ನೂರಾರು ಕಾರ್ಯಕರ್ತರು ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲೂಕು ತಹಶೀಲ್ದಾರ್ ಕೃಷ್ಣ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ನಡುವೆ ಕುರಾನ್ ಸುಟ್ಟ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಒಟ್ಟಾರೆ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.